Dharwad News: ಧಾರವಾಡ: ಸಚಿವ ಸಂಪುಟದಲ್ಲಿ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗೆ ಸರ್ಕಾರ ಅಸ್ತು ಎಂದಿದೆ. ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಸಿಎಂ ಸಿದ್ದರಾಮಯ್ಯ ಅಸ್ತು ಎಂದಿದ್ದಾರೆ.
ಹೀಗಾಗಿ ಧಾರವಾಡ ಮಹಾನಗರ ಪಾಲಿಕೆ ಎದುರು ಪ್ರತ್ಯೇಕ ಮಹಾನಗರ ಪಾಲಿಕೆಯ ಹೋರಾಟ ಸಮಿತಿಯ ಸದಸ್ಯರುಗಳು , ಸಿಎಂ ಸಿದ್ದರಾಮಯ್ಯ, ಶಾಸಕ ವಿನಯ ಕುಲಕರ್ಣಿ,ಪ್ರಸಾದ ಅಬ್ಬಯ್ಯ ಪರವಾಗಿ ಘೋಷಣೆ ಕೂಗಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿದ್ದು, ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸಲು ಇಂದು ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ. ಮೂರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಊರಾಗಿರುವ ಧಾರವಾಡ, ವಿದ್ಯಾಕಾಶಿ ಎಂದು ಪ್ರಖ್ಯಾತಿ ಗಳಿಸಿದೆ. ಸಾಂಸ್ಕೃತಿಕವಾಗಿ, ಶೈಕ್ಷಣಿಕವಾಗಿ ನಾಡಿಗೆ ಅಪಾರ ಕೊಡುಗೆ ನೀಡಿರುವ ಧಾರವಾಡವನ್ನು ಮಹಾನಗರ ಪಾಲಿಕೆಯಾಗಿಸಿ, ಆ ಮೂಲಕ ನಗರದ ಅಭಿವೃದ್ಧಿಗೆ ಬೆಂಬಲವಾಗಿ ನಿಲ್ಲುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ ಎಂದು ಬರೆದುಕೊಂಡಿದ್ದಾರೆ.




