Political News: ವಾಲ್ಮೀಕಿ ನಿಗಮದ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರು ಹಾಗೂ ಸಂಸದರ ಮನೆ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತವಾಗಿದೆ. ಈ ವಾಲ್ಮೀಕಿ ಹಗರಣಕ್ಕೂ ನಮ್ಮ ಶಾಸಕರಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ನಮ್ಮ ಮುಖಂಡರು ಯಾವುದೇ ಚುನಾವಣೆಯಲ್ಲಿ ಹಣ ಹಂಚಿಕೆ ಮಾಡಿಲ್ಲ. ಅಧಿಕಾರಿಗಳು ದುರ್ಬಳಕೆ ಮಾಡಿದ್ದ ಶೇಕಡಾ 90 ರಷ್ಟು ಹಣವನ್ನು ಮತ್ತೆ ವಶಕ್ಕೆ ಪಡೆಯಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕೈ ನಾಯಕರ ಪರ ಬ್ಯಾಟ್ ಬೀಸುವ ಮೂಲಕ ಭಿನ್ನರಾಗ ಎಳೆದಿದ್ದಾರೆ.
ವಾಲ್ಮೀಕಿ ನಿಗಮದ ಹಗರಣಕ್ಕೂ ನಮ್ಮ ಶಾಸಕರಿಗೂ ಸಂಬಂಧವಿಲ್ಲ..
ನವದೆಹಲಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಅಕ್ರಮದಲ್ಲಿ ನಮ್ಮ ಪಕ್ಷದ ಯಾವುದೇ ಶಾಸಕರು ಭಾಗಿಯಾಗಿಲ್ಲ. ಯಾರೊಬ್ಬರೂ ಎಲ್ಲಿಯೂ ಹಣ ಹಂಚಿಲ್ಲ. ಅಧಿಕಾರಿಗಳೇ ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಇನ್ನೂ ಜಾತಿ ಗಣತಿ ವರದಿ ವಿರೋಧ ಮಾಡಿದವರು ಬಿಜೆಪಿಯವರಲ್ಲವೇ? ಅವರು ಜಾತಿಗಣತಿ ವರದಿ ಸ್ವೀಕಾರ ಮಾಡಲಿಲ್ಲ ಯಾಕೆ? ಈ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿಲ್ಲ. ಈ ವರದಿಯಲ್ಲಿ ಯಾರ ಅಂಕಿ ಅಂಶಗಳು ಬಿಟ್ಟುಹೋಗಿವೆ ಅವರ ಮಾಹಿತಿಯನ್ನು ಸೇರಿಸಲು ಅವಕಾಶ ನೀಡಲಾಗುವುದು. ಈಗಾಗಲೇ ನೀಡಿರುವ ವರದಿಯನ್ನು ನಾವು ಬಳಸಿಕೊಳ್ಳುತ್ತೇವೆ. ಸಮಾಜಗಳಿಗೆ ನ್ಯಾಯ ಒದಗಿಸಬೇಕು, ಗೊಂದಲಗಳನ್ನು ಬಗೆಹರಿಸಲು ನಾವು ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.
ಈ ಹಿಂದೆಯೂ ವೈಜ್ಞಾನಿಕ ಸಮೀಕ್ಷೆ ಮಾಡಲಾಗಿತ್ತು..
ಈ ಬಾರಿಯ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡುವ ಕುರಿತು ನಾವು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಜೈನ, ಲಂಬಾಣಿ, ಬೆಸ್ತ ಸೇರಿದಂತೆ ಅನೇಕ ಸಮಾಜದ ಜನರು ನನ್ನನ್ನು ಭೇಟಿ ಮಾಡಿ ಆತಂಕ ವ್ಯಕ್ತಪಡಿಸಿದ್ದರು. ನಮ್ಮ ಶಾಸಕರುಗಳು ಅವರ ಅಭಿಪ್ರಾಯ ತಿಳಿಸಿದ್ದರು. ಈ ಹಿಂದೆಯೂ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಲಾಗಿತ್ತು ಎಂದು ಹೇಳಿದ್ದಾರೆ.
ಆಗಲೂ ಸಹ ಮನೆ ಮನೆಗೆ ಹೋಗಿ ನಮ್ಮ ಅಧಿಕಾರಿಗಳು ಸಮೀಕ್ಷೆ ಮಾಡಿ ಚೀಟಿಯನ್ನು ಅಂಟಿಸಿದ್ದರು. ಅವರು ಮಾಡಿದ್ದು ವೈಜ್ಞಾನಿಕವಲ್ಲವೇ? ಕಳೆದ ಬಾರಿ ಅನೇಕರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸದೇ ತಮ್ಮ ಸಮುದಾಯವನ್ನು ಹೇಳಿಕೊಳ್ಳಲು ಹಿಂಜರಿದರು. ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರವಾಗಿ ಹತ್ತಾರು ಬಾರಿ ಜಾಹೀರಾತು ನೀಡಲಾಗಿದೆ. ಅಧಿಕಾರಿಗಳು ಹಲವು ಬಾರಿ ಮನೆಗೆ ಹೋಗಿದ್ದಾರೆ ಎಂದು ತಿಳಿಸಿದ್ದಾರೆ.
ನಮ್ಮ ಪಕ್ಷದ ಅಧ್ಯಕ್ಷರು ತಂದೆಯ ಸ್ಥಾನದಲ್ಲಿ ಮಾರ್ಗದರ್ಶನ ಮಾಡಿದ್ದಾರೆ..
ಅಲ್ಲದೆ ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದ್ದಾರೆ. ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ. ಹೊರರಾಜ್ಯದಲ್ಲಿ ಇರುವವರು ತಮ್ಮ ಮಾಹಿತಿ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಲಾಗಿದೆ. ನಮ್ಮ ಪಕ್ಷದ ಅಧ್ಯಕ್ಷರು ತಂದೆ ಸ್ಥಾನದಲ್ಲಿ ನಿಂತು ಕೆಲವು ಮಾರ್ಗದರ್ಶನ ನೀಡಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಗಳು ಸಚಿವ ಸಂಪುಟದಲ್ಲಿ ಯಾವ ರೀತಿ ಮಾಡಬೇಕು ಎಂದು ಚರ್ಚೆ ಮಾಡುತ್ತಾರೆ. ಈ ಪ್ರಕ್ರಿಯೆಯಲ್ಲಿ 1 ಲಕ್ಷ ಜನರನ್ನು ಒಳಗೊಳ್ಳಬೇಕಾಗುತ್ತದೆ ಎಂದು ಡಿಕೆ ಶಿವಕುಮಾರ್ ವಿವರಿಸಿದ್ದಾರೆ.
ಜಾತಿ ಗಣತಿ ವಿಚಾರದಲ್ಲಿ ಪ್ರಬಲ ಜಾತಿಗಳನ್ನೂ ಸೇರಿಸಿ ನಾವು ಎಲ್ಲರ ಒತ್ತಡಕ್ಕೂ ಮಣಿದಿದ್ದೇವೆ. ನಾವು ಮಾಧ್ಯಮಗಳ ಒತ್ತಡಕ್ಕೂ ಮಣಿಯುತ್ತೇವೆ. ತಮ್ಮ, ತಮ್ಮ ಸಮಾಜದವರು ಸರಿಯಾಗಿ ಮಾಹಿತಿ ಒದಗಿಸುವಂತೆ ಸ್ವಾಮೀಜಿಗಳು ಅರಿವು ಮೂಡಿಸಬೇಕು ಎಂದು ಮನವಿ ಮಾಡಿದ್ದಾರೆ.
ಇದು ನಮ್ಮ ಪಕ್ಷದ ರಾಜಕೀಯ ಅಜೆಂಡಾ..
ಸರ್ಕಾರದ ತೀರ್ಮಾನವನ್ನು ವೀರಶೈವ, ಒಕ್ಕಲಿಗ ಸೇರಿದಂತೆ ಬೇರೆ ಸಮಾಜಗಳ ಸ್ವಾಮೀಜಿಗಳು ಸ್ವಾಗಿತಿಸಿದ್ಧಾರೆ. ಈ ಬಗ್ಗೆ ನನಗೆ ಕರೆ ಮಾಡಿ ತಿಳಿಸಿದ್ದಾರೆ. ಎಲ್ಲಾ ಸಮಾಜಗಳ ಸ್ವಾಮೀಜಿಗಳು ತಮ್ಮ ಸಮುದಾಯದವರಿಗೆ ತಿಳುವಳಿಕೆ ನೀಡಿ ಈ ಸಮೀಕ್ಷೆಯಲ್ಲಿ ಭಾಗಿಯಾಗುವಂತೆ ಮಾಡಬೇಕು. ಈ ಸಮೀಕ್ಷೆಯಲ್ಲಿ ಎಲ್ಲರೂ ತಮ್ಮ ಸಮುದಾಯದ ಬಗ್ಗೆ ಸರಿಯಾಗಿ ವಿವರ ನೀಡಬೇಕು ಎಂದು ಕರೆ ನೀಡಿದ್ದಾರೆ.
ಜಾತಿ ಗಣತಿ ವಿಚಾರದಲ್ಲಿ ಹೈಕಮಾಂಡ್ ಮಟ್ಟದಲ್ಲಿ ಡಿ.ಕೆ. ಶಿವಕುಮಾರ್ ಅವರು ಮೇಲುಗೈ ಸಾಧಿಸಿದರೇ ಎಂದು ಕೇಳಿದಾಗ, “ಇದರಲ್ಲಿ ಯಾರ ಕೈ ಮೇಲಾಗುವ ವಿಚಾರವಿಲ್ಲ. ಇದು ನಮ್ಮ ಪಕ್ಷದ ರಾಜಕೀಯ ಅಜೆಂಡಾ. ಇದನ್ನು ಬಿಜೆಪಿಯವರು ಕಾಪಿ ಮಾಡಿದ್ದಾರೆ. ಜಾತಿಗಣತಿ ಮಾಡಿ ಹಿಂದುಳಿದ ವರ್ಗಗಳಿಗೆ ನ್ಯಾಯ ಸಿಗಬೇಕು ಎಂದು ರಾಹುಲ್ ಗಾಂಧಿ ಅವರು ಪ್ರತಿಪಾದಿಸಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.