ಜ್ಯುವೆಲರ್ಸ್ ಅಂಗಡಿಯಲ್ಲಿ ಕಳ್ಳತನ ಮಾಡಲು ಆಗಮಿಸಿದ್ದ ದರೋಡೆಕೋರರು ಚಿನ್ನಾಭರಣ ದೋಚಿ ಬಳಿಕ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಧಾರುಣ ಘಟನೆ ನಡೆದಿದೆ. ಸಕ್ಕರೆನಾಡು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ 72 ವರ್ಷದ ಮಾದಪ್ಪ ಮೃತಪಟ್ಟಿರುವ ವ್ಯಕ್ತಿಯಾಗಿದ್ದಾನೆ.
ಕಿರುಗಾವಲು ಗ್ರಾಮದ ಮಹಾಲಕ್ಷ್ಮಿ ಜ್ಯೂವೆಲರ್ಸ್ ಆಂಡ್ ಬ್ಯಾಂಕರ್ಸ್ ನಲ್ಲಿ ಶನಿವಾರ ತಡರಾತ್ರಿ ದರೋಡೆ ನಡೆಸಲು ಸಂಚು ರೂಪಿಸಿದ್ದಾರೆ. ಅಂಗಡಿ ಬಾಗಿಲನ್ನು ಗ್ಯಾಸ್ ಕಟ್ಟರ್ ನಿಂದ ಕಟ್ ಮಾಡಿ ಒಳ ನುಗ್ಗಿರುವ ದರೋಡೆಕೋರರು ಚಿನ್ನಾಭರಣಗಳನ್ನು ದೋಚಿ ಪರಾರಿಯಾಗುವ ಶಬ್ದ ಉಂಟಾಗಿದೆ ಈ ವೇಳೆ ಪಕ್ಕದಲ್ಲಿದ್ದ ಶ್ರೀ ಮಹದೇಶ್ವರ ಹೋಟೇಲ್ ಮಾಲೀಕ ಮಾದಪ್ಪ ಅವರು ಹೋಟೇಲ್ ನಿಂದ ಹೊರಗೆ ಬಂದಿದ್ದಾರೆ.
ದರೋಡೆಕೋರರು ಜ್ಯುವೆಲ್ಲರಿ ಅಂಗಡಿಯಿಂದ ಬರುವಾಗ ಮಾದಪ್ಪ ದರೋಡೆಕೋರರನ್ನು ನೋಡಿದ್ದಾರೆ. ಇದರಿಂದ ಗಾಬರಿಗೊಂಡ ದರೋಡೆಕೋರರು ಮಾದಪ್ಪ ಅವರನ್ನು ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ದರೋಡೆಕೋರರು ಜ್ಯುವೆಲ್ಲರಿ ಅಂಗಡಿಯ ಸಿಸಿಟಿವಿಯ ಡಿವಿಆರ್ ಅನ್ನು ಹೊತ್ತು ಪರಾರಿಯಾಗಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಕೃಷ್ಣಪ್ಪ, ಸಿಪಿಐ ಶ್ರೀಧರ್, ಪಿಎಸ್ಐ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಇನ್ನು ದರೋಡೆ ನಡೆದ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲೇ 1 ತಿಂಗಳ ಹಿಂದೆ ದುಷ್ಕರ್ಮಿಗಳು ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದ ಘಟನೆ ನಡೆದಿತ್ತು. ಕಿರುಗಾವಲು ಗ್ರಾಮದ ರಸ್ತೆಗಳಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಅಳವಡಿಸಿದ್ದ ಸಿಸಿಟಿವಿಗಳಿಗೆ ರೀಚಾರ್ಜ್ ಮಾಡಿಸದ ಪರಿಣಾಮ ದರೋಡೆಕೋರರ ಚಲನ ವಲನಗಳು ಕೂಡ ಸೆರೆಯಾಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ವಿರುದ್ಧ ಕಿಡಿಕಾರಿದ್ದಾರೆ. ಇದಕ್ಕೆಲ್ಲಾ ಅವರೇ ಕಾರಣ ಎಂದು ದೊಷಿಸುತ್ತಿದಾರೆ.
ವರದಿ:ರಂಜಿತ ರೇವಣ್ಣ ನಾಟನಹಳ್ಳಿ