ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾಜಿ ಸಂಸದ ರಮೇಶ್ ಕತ್ತಿಯ ವಿರುದ್ಧ ವಾಲ್ಮೀಕಿ ಸಮುದಾಯದ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕತ್ತಿಯವರು ಸಮುದಾಯದ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗೆ ಆಕ್ರೋಶಗೊಂಡ ಪ್ರತಿಭಟನಾಕಾರರು, ಘೋಷಣೆ ಕೂಗಿದರೆ ಮಾತ್ರವಲ್ಲದೇ, ಟೈರ್ಗೆ ಬೆಂಕಿ ಹಚ್ಚಿ, ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ತಮ್ಮ ವಿರೋಧ ವ್ಯಕ್ತಪಡಿಸಿದರು. ಕೇವಲ ಬೆಳಗಾವಿ ಮಾತ್ರವಲ್ಲದೇ ಕೊಪ್ಪಳ, ರಾಯಚೂರಿನಲ್ಲೂ ಇದೇ ರೀತಿಯ ಹೋರಾಟ ನಡೆದಿದೆ.
ವಾಲ್ಮೀಕಿ ಸಮಾಜದ ಮುಖಂಡರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ರಮೇಶ್ ಕತ್ತಿಯ ತಕ್ಷಣದ ಬಂಧನಕ್ಕೆ ಆಗ್ರಹಿಸಲಾಯಿತು. ಅವರ ಹೇಳಿಕೆಯಿಂದ ಸಮಾಜದ ಗೌರವಕ್ಕೆ ಧಕ್ಕೆಯಾಗಿದ್ದು, ಜನಮಾನಸದಲ್ಲಿ ತೀವ್ರ ನೋವು ಉಂಟಾಗಿದೆ ಎಂದು ಜಿಲ್ಲಾಧ್ಯಕ್ಷ ರಾಜಶೇಖರ ತಳವಾರ ತಿಳಿಸಿದ್ದಾರೆ.
ಜವಾಬ್ದಾರಿ ಸ್ಥಾನದಲ್ಲಿ ಇರುವ ರಮೇಶ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿದ್ದು ಸರಿಯಲ್ಲ.
ಶೋಷಿತ ಸಮುದಾಯ ಹೀಯಾಳಿಸಿದ ಅವರಿಗೆ ಮುಂದೆ ಪ್ರತ್ಯುತ್ತರ ಕೊಡುತ್ತೇವೆ ಎಂದು ಎಚ್ಚರಿಕೆ ಕೊಟ್ಟರು. ರಮೇಶ್ ಕತ್ತಿ ನೀಡಿದ ಹೇಳಿಕೆಯಿಂದ ನಮಗೆ ನೋವಾಗಿದೆ. ಬೇರೆ ಬೇರೆ ಸಮುದಾಯಗಳ ಮಧ್ಯೆ ಸಂಘರ್ಷ ತಲೆದೋರುವ ಸಾಧ್ಯತೆ ಇದೆ. ತಕ್ಷಣವೇ ಅವರನ್ನು ಬಂಧಿಸಬೇಕು. ಇಲ್ಲದಿದ್ದರೆ ವಾಲ್ಮೀಕಿ ಸಮುದಾಯ ಸೇರಿದಂತೆ ಹಿಂದುಳಿದ ವರ್ಗಗಳ ವಿವಿಧ ಸಮುದಾಯಗಳಿಂದ ಅ.24ರಂದು ಬೆಳಗಾವಿ ಬಂದ್ಗೆ ಕರೆ ಕೊಡಲಾಗತ್ತೆ ಎಂದು ರಾಜಶೇಖರ ತಳವಾರ ತಿಳಿಸಿದರು.
ವರದಿ : ಲಾವಣ್ಯ ಅನಿಗೋಳ