ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದೆ. ಸ್ಪೀಕರ್ ಕಚೇರಿಯನ್ನು ಆರ್ಟಿಐ ವ್ಯಾಪ್ತಿಗೆ ತರಬೇಕು. ನಮಗೆ ಪ್ರಶ್ನೆ ಕೇಳಲು ಅವಕಾಶವಿಲ್ಲ. ಸಿಟ್ಟಿಂಗ್ ಜಡ್ಜ್ ಮೂಲಕ ಈ ಹಗರಣದ ತನಿಖೆ ಆಗಬೇಕೆಂದು, ಮಂಗಳೂರಿನಲ್ಲಿ ಬಿಜೆಪಿ ಶಾಸಕ ಭರತ್ ಶೆಟ್ಟಿ ಆಗ್ರಹಿಸಿದ್ದಾರೆ. ಶಾಸಕ ಭರತ್ ಶೆಟ್ಟಿ ಅವರು ವಿಧಾನಸಭಾ ಲಾಂಜ್ ಅನ್ನು ಮಸಾಜ್ ಪಾರ್ಲರ್ ರೀತಿಯಲ್ಲಿ ಮಾಡಿದ್ದಾರೆ. ಎಲ್ಲರಿಗೂ ಉಚಿತ ಆಹಾರ ಎಂದು ಹೇಳುತ್ತಾರೆ. ಆದರೆ ಅದರ ಲೆಕ್ಕಾಚಾರ ಎಲ್ಲಿದೆ ಎಂಬುದು ಯಾರಿಗೂ ಗೊತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಎಲ್ಎಚ್ ವರಾಂಡದೊಳಗೆ ನಾಯಿ ತಿರುಗುತ್ತವೆ. ಆದರೆ ಸ್ಪೀಕರ್ ಸ್ಮಾರ್ಟ್ ಲಾಕ್ ಹಾಕಲು ಹೊರಟಿದ್ದಾರೆ. ಯು.ಟಿ. ಖಾದರ್ ಅವರಿಗೆ ‘ಸರ್ವಜ್ಞ ಸಿಂಡ್ರೋಮ್’ ಇದೆ. ಆರ್ಥಿಕ ಶಿಸ್ತು ಇಲ್ಲದೆ ಸರ್ಕಾರ ಮುಳುಗಿದೆ. ಸ್ಪೀಕರ್ ಹುದ್ದೆಯನ್ನು ಲಾಭದಾಯಕ ಹುದ್ದೆಯನ್ನಾಗಿ ತೋರಿಸಿರುವವರು ಯು.ಟಿ ಖಾದರ್. ಶಾಸಕರಿಗೆ ಕೊಠಡಿಗಳನ್ನು ಕೊಡುತ್ತಾರೆ. ಆದರೆ ಪ್ಯಾಡ್ ಲಾಕ್ ಹಾಗೂ ಸ್ಮಾರ್ಟ್ ಲಾಕ್ ಹಾಕಿದ್ದಾರೆ. ಇದು ಸ್ಪೀಕರ್ ಆದೇಶದಿಂದ ಆಗಿದೆ ಎಂದು ಹೇಳಲಾಗುತ್ತಿದೆ.
ಸ್ಮಾರ್ಟ್ ಸೇಫ್ ಲಾಕರ್ಸ್, ಸ್ಮಾರ್ಟ್ ಎನರ್ಜಿ ಸೊಲ್ಯೂಷನ್, ಸ್ಟೈನ್ ಲೆಸ್ ಸ್ಟೀಲ್ ವಾಟರ್ ಪ್ಯೂರಿಫೈಯರ್ ಖರೀದಿಯಲ್ಲಿ ಬೆಲೆ ವ್ಯತ್ಯಾಸ ಇದೆ. ಇವುಗಳನ್ನು ಮಂಗಳೂರು ಮೂಲದವರು ಪೂರೈಕೆ ಮಾಡಿದ್ದಾರೆ ಎಂಬ ಮಾಹಿತಿ ಇದೆ ಎಂದು ಅವರು ಹೇಳಿದ್ದಾರೆ.
ವಿಧಾನಸೌಧದಲ್ಲಿ ನಡೆದ ಪುಸ್ತಕ ಮೇಳದ ಖರ್ಚುಗಳ ಬಗ್ಗೆಯೂ ಶಾಸಕ ಭರತ್ ಶೆಟ್ಟಿ ಪ್ರಶ್ನೆ ಮಾಡಿದ್ದಾರೆ. ಐದು ದಿನದ ಪುಸ್ತಕ ಮೇಳಕ್ಕೆ 4.5 ಕೋಟಿ ರೂ. ಖರ್ಚು ಮಾಡಲಾಗಿದೆ. ಒಂದು ದಿನಕ್ಕೆ ಒಂದು ಕೋಟಿಯಷ್ಟು ಖರ್ಚು ಮಾಡಿದ್ದಾರೆ. ಆದರೆ ರಸ್ತೆ ನಿರ್ಮಾಣಕ್ಕೆ, ಅಭಿವೃದ್ಧಿಗೆ ಹಣವಿಲ್ಲ ಎನ್ನುತ್ತಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ರಾಜ್ಯಪಾಲರಿಗೆ ದೂರು ನೀಡುವ ಕುರಿತು ಚರ್ಚೆ ಮಾಡುತ್ತಿದ್ದೇವೆ. ಮುಂದಿನ ವಿಧಾನಸಭಾ ಅಧಿವೇಶನದಲ್ಲೂ ಈ ವಿಷಯವನ್ನು ಪ್ರಸ್ತಾಪಿಸಲಿದ್ದೇವೆ ಎಂದು ಭರತ್ ಶೆಟ್ಟಿ ಹೇಳಿದ್ದಾರೆ.

