Kalaburgi News: RSS ಬಗ್ಗೆ ಸದಾ ವ್ಯಂಗ್ಯವಾಡುವ, ಅಸಮಾಧಾನ ತೋರ್ಪಡಿಸುವ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬಿಜೆಪಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಕಲಬುರ್ಗಿ ಅಭಿವೃದ್ಧಿ ಬಗ್ಗೆ ಪ್ರಶ್ನಿಸಿ, ಟಾಂಗ್ ನೀಡಿದ್ದಾರೆ.
ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಕಲ್ಯಾಣ ಕರ್ನಾಟಕದ 38 ಗ್ರಾಮದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಯಾವುದೇ ಪ್ರಯೋಜನವಿಲ್ಲ. ಯಾಕೆ ಪ್ರಯೋಜನವಿಲ್ಲ ಅಂದರೆ 38 ಗ್ರಾಮಗಳಿಗೆ ಬಸ್ಸೇ ಇಲ್ಲ.ಬಸ್ಸು ಯಾಕಿಲ್ಲ ಅಂದರೆ ಅಲ್ಲಿ ಯೋಗ್ಯ ರಸ್ತೆಯೇ ಇಲ್ಲ ಎಂದು ಆರ್.ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.
ಅಲ್ಲದೇ, ವಿದೇಶಾಂಗ ನೀತಿಯಿಂದ ಹಿಡಿದು ಮಿಲಿಟರಿ ತಂತ್ರಗಾರಿಕೆವರೆಗೆ ಎಲ್ಲದರ ಬಗ್ಗೆ ಉದ್ದುದ್ದ ಬೊಗಳೆ ಭಾಷಣ ಬಿಗಿಯುವ ತಮಗೆ ಕಲ್ಯಾಣ ಕರ್ನಾಟಕದ ಹಳ್ಳಿಗಳ ಜನ ಬಸ್ಸಿಲ್ಲದೆ ದುಪ್ಪಟ್ಟು ಬೆಲೆ ತೆತ್ತು ಸ್ವಂತ ಗಾಡಿ, ಟಂಟಂ, ಜೀಪಿನಲ್ಲಿ ಪ್ರಯಾಣ ಮಾಡುವುದು ತಮಗೆ ಕಾಣುತ್ತಿಲ್ಲವೇ ಪ್ರಿಯಾಂಕ್ ಖರ್ಗೆ ಅವರೇ? ಎಂದು ಅಶೋಕ್ ಪ್ರಶ್ನಿಸಿದ್ದಾರೆ.
ಕಲ್ಯಾಣ ಕರ್ನಾಟಕದ ಜನರ ಮತ ಪಡೆದು, ಅಧಿಕಾರ ಅನುಭವಿಸಿ ತಮ್ಮ ಕುಟುಂಬದ ಕಲ್ಯಾಣ ಮಾಡಿಕೊಂಡಿರುವುದೇ ನಿಮ್ಮ ಏಕೈಕ ಸಾಧನೆ. RSS ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ಕೊಟ್ಟು ನಿಮ್ಮ ಈ ವೈಫಲ್ಯಗಳನ್ನು ಮರೆಮಾಚಬಹುದು, ಜನರನ್ನು ಯಾಮಾರಿಸಬಹುದು ಎಂದು ಕನಸು ಕಾಣಬೇಡಿ. ಕಲ್ಯಾಣ ಕರ್ನಾಟಕದ ಜನ ಖರ್ಗೆ ಕುಟುಂಬವನ್ನ ಮತ್ತು ಕಾಂಗ್ರೆಸ್ ಪಕ್ಷವನ್ನ ನಿಷೇಧ ಮಾಡುವ ದಿನ ಬಹಳ ದೂರವಿಲ್ಲ ಎಂದು ಆರ್.ಅಶೋಕ್ ಹೇಳಿದ್ದಾರೆ.

