ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಮೊದಲ ಬಾರಿಗೆ ಕರ್ನಾಟಕ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ನವೆಂಬರ್ 9ರಂದು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಶ್ರವಣಬೆಳಗೊಳದ ಮಠದಲ್ಲಿ ದಿಗಂಬರ ಜೈನ ಮಠದ ಶ್ರೀಗಳು ಮಾಹಿತಿ ನೀಡಿದ್ದಾರೆ.
ಮೊದಲ ಬಾರಿಗೆ ಕರ್ನಾಟಕಕ್ಕೆ ಬರುತ್ತಿರುವ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ಅವರು, 108 ಶಾಂತಿಸಾಗರ ಮಹಾರಾಜರ ಪ್ರತಿಮೆ ಅನಾವರಣ ಹಾಗೂ ನಾಲ್ಕನೇ ಬೆಟ್ಟದ ಪದನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಹ ಭಾಗಿಯಾಗಲಿದ್ದಾರೆ.
ಇತ್ತೀಚೆಗೆ ನಡೆದಿದ್ದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್, 452 ಮತ ಪಡೆದು ಭರ್ಜರಿ ಬಹುಮತದೊಂದಿಗೆ ಗೆಲುವು ದಾಖಲಿಸಿದ್ದರು. 1957ರ ಅಕ್ಟೋಬರ್ 20ರಂದು ತಮಿಳುನಾಡಿನಲ್ಲಿ ಜನಿಸಿದ ಸಿಪಿ ರಾಧಾಕೃಷ್ಣನ್, ತಮ್ಮ 17ನೇ ವಯಸ್ಸಿನಲ್ಲಿ ಆರ್ಎಸ್ಎಸ್ ಸೇರ್ಪಡೆಯಾಗಿ, ಸ್ವಯಂ ಸೇವಕನಾಗಿ ಕೆಲಸ ಮಾಡಿ ಗುರುತಿಸಿಕೊಂಡಿದ್ದರು.
1998ರಲ್ಲಿ ಕೊಯಮತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಸಂಸತ್ ಪ್ರವೇಶಿಸಿದ್ದರು. 2020ರಿಂದ 2022ರವರೆಗೆ ಬಿಜೆಪಿಯ ಕೇರಳದ ಉಸ್ತುವಾರಿಯಾಗಿದ್ದರು. ತೆಲಂಗಾಣದ ರಾಜ್ಯಪಾಲರಾಗಿದ್ದ ಸಿ.ಪಿ.ರಾಧಾಕೃಷ್ಣನ್, ಪುದುಚೇರಿ ಎಲ್ಜಿ ಆಗಿ ಹೆಚ್ಚುವರಿ ಜವಾಬ್ದಾರಿ ನಿರ್ವಹಿಸಿದ್ದರು. 2024ರ ಜುಲೈನಿಂದ ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ರಾಧಾಕೃಷ್ಣನ್ ಕರ್ತವ್ಯ ನಿರ್ವಹಿಸಿದ್ದರು. ಇದೀಗ ದೇಶದ 17ನೇ ನೂತನ ಉಪ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

