ಮುಖ್ಯಮಂತ್ರಿ ಹುದ್ದೆಯ ಹಗ್ಗಜಗ್ಗಾಟದಲ್ಲಿ ಸಿಎಂ ಸಿದ್ದರಾಮಯ್ಯ ಏನೇನೋ ಬಡಬಡಿಸುತ್ತಿದ್ದಾರೆ. ಸರಿಯಾದ ದತ್ತಾಂಶ, ಅಧಿಕಾರಿಗಳಿಂದ ನೈಜ ಮಾಹಿತಿ ಪಡೆದು ಮಾತನಾಡಬೇಕೆಂಬ ಪರಿಜ್ಞಾನ ಸಿಎಂಗೆ ಇಲ್ಲದಿರುವುದು ರಾಜ್ಯದ ದುರಂತವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಎಥೆನಾಲ್ ಹಂಚಿಕೆಯ ಮಾಹಿತಿಯೇ ಸುಳ್ಳು ಎಂದಿರುವ ಸಿಎಂ ಆರೋಪಕ್ಕೆ ಜೋಶಿ ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವಲ್ಲಿ ಪರದಾಡುತ್ತಿರುವ ಸಿಎಂ, ಹತಾಶೆಯಲ್ಲಿ ಮನಸೋ ಇಚ್ಛೆ ಮಾತನಾಡುತ್ತಿದ್ದಾರೆ. ರಾಜ್ಯದ ರೈತರು ಮತ್ತು ಜನರನ್ನು ದಾರಿತಪ್ಪಿಸಲು ದುಸ್ಸಾಹಸಕ್ಕೆ ಕೈಹಾಕಿದ್ದಾರೆ ಎಂದಿದ್ದಾರೆ.
ಸಿದ್ದರಾಮಯ್ಯನವರು ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಆಲಿಸುವಲ್ಲಿ ವಿಫಲರಾಗಿ, ಕೇಂದ್ರ ಸರ್ಕಾರದ ಮೇಲೆ ಬೆರಳು ತೋರಿ ಪಲಾಯನವಾದ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರು ಉಲ್ಲೇಖಿಸಿದ ಸಂಸತ್ತಿನ ಉತ್ತರದಲ್ಲಿ 30.06.25 ರವರೆಗಿನ ದತ್ತಾಂಶ ಮಾತ್ರ ಇದೆ. ಆದರೆ, ಎಥೆನಾಲ್ ಸರಬರಾಜು ವರ್ಷವು ನವೆಂಬರ್ನಿಂದ ಪ್ರಾರಂಭವಾಗಿ ಅಕ್ಟೋಬರ್ನಲ್ಲಿ ಕೊನೆಗೊಳ್ಳುತ್ತದೆ.
2024-25ರಲ್ಲಿ ಕರ್ನಾಟಕದಿಂದ ತೈಲ ಮಾರುಕಟ್ಟೆ ಕಂಪನಿಗಳಿಗೆ ಒಟ್ಟು 139.8 ಕೋಟಿ ಲೀಟರ್ ಎಥೆನಾಲ್ ಅನ್ನು ಪೂರೈಸಿವೆ. 2004-2014ರ ಸಾಲಿನಲ್ಲಿ ಕಬ್ಬು ಬೆಳೆದ ರೈತರಿಗೆ ಸರಿಯಾದ ಸಮಯದಲ್ಲಿ ಹಣ ಪಾವತಿಯಾಗುತ್ತಿರಲಿಲ್ಲ. ಈ ವಿಳಂಬ ಧೋರಣೆಯಿಂದ ರೈತರು ಸಂಕಷ್ಟದಲ್ಲಿದ್ದರು. ಅತಿ ಕಡಿಮೆ FRP/MSP, 2005ರಲ್ಲಿಯೇ ಎಥೆನಾಲ್ ಮಿಶ್ರಣದ ಪ್ರಸ್ತಾಪವನ್ನು ಮಾಡಿದ್ದರೂ, ಎಥೆನಾಲ್ ಬಗ್ಗೆ ಕಿಂಚಿತ್ತೂ ಯೋಚನೆಯೂ ಮಾಡಿರಲಿಲ್ಲ.
2013-14ರಲ್ಲಿ ಕಬ್ಬು ಬೆಳೆ ಖರೀದಿ 57 ಸಾವಿರದ 104 ಕೋಟಿ ರೂ.ಗಳಷ್ಟಿತ್ತು, ಆದರೆ 2024-25ರ ಮೌಲ್ಯ 1 ಕೋಟಿ 02 ಲಕ್ಷ 687 ರೂಪಾಯಿಗಳಾಗಿತ್ತು. ನ್ಯಾಯಯುತ ಮತ್ತು ಲಾಭದಾಯಕ ಬೆಲೆ ಮೂಲಕ 2013-14ರಲ್ಲಿ 210 ರೂ.ಗಳಷ್ಟಿತ್ತು. ಆದರೆ 2025-26ರ ಸಕ್ಕರೆ ಹಂಗಾಮಿನಲ್ಲಿ ಶೇಕಡ 10.25ರಷ್ಟು ಚೇತರಿಕೆಯೊಂದಿಗೆ ಕ್ವಿಂಟಲ್ಗೆ 355 ರೂ. ಏರಿಕೆಯಾಗಿದೆ. ಇದು ನಮ್ಮ ಸರ್ಕಾರದ ಬದ್ದತೆ. ಹೆಚ್ಚುವರಿ ಸಕ್ಕರೆಯನ್ನು ಸಮತೋಲನಗೊಳಿಸಲು ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ. 2013-14 ರಿಂದ 2024-25 ರವರೆಗೆ ಇಂಧನ ದರ್ಜೆಯ ಎಥೆನಾಲ್ ಉತ್ಪಾದನೆ ಮತ್ತು OMCಗಳಿಗೆ ಪೂರೈಕೆ 26 ಪಟ್ಟು ಹೆಚ್ಚಾಗಿದೆ.
ಇಡೀ ದೇಶಕ್ಕೆ ಒಂದು ನೀತಿಯನ್ನು ಜಾರಿ ಮಾಡುವುದು ಕೇಂದ್ರ ಸರ್ಕಾರದ ಕೆಲಸ. ನೀವು ರಾಜ್ಯದಲ್ಲಿ ಬೆಳೆಗಾರರ ಬೇಡಿಕೆಯ ಪ್ರಕಾರವಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿ ಕೇವಲ ಸುಳ್ಳು ಹೇಳಿಕೊಂಡು, ಸುಳ್ಳಿನ ಮನೆಯನ್ನು ಕರ್ನಾಟಕದಲ್ಲಿ ನಿರ್ಮಿಸಿಕೊಂಡು ಜನರನ್ನು ರೈತರನ್ನು ಬೀದಿಗೆ ತಳ್ಳುವ ನೀಚ ಕೆಲಸ ಮಾಡಿದ್ದೀರಾ.
ಅಂದು ವಿರೋಧ ಪಕ್ಷದಲ್ಲಿದ್ದಾಗ ಬೆಲೆ ನಿಗದಿ ಮಾಡಿ, ಆವರ್ತ ನಿಧಿ ಸ್ಥಾಪನೆ ಮಾಡಿ ಎಂದು ಸರ್ಕಾರಗಳಿಗೆ ಬಿಟ್ಟಿ ಸಲಹೆ ನೀಡಿದ ನೀವು, ಇದೀಗ ಅಧಿಕಾರದಲ್ಲಿರುವಾಗ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜಾರಿಕೊಳ್ಳುವುದೇ ನಿಮ್ಮ ಮೂಲಭೂತ ಕೆಲಸವಾಗಿದೆಯಾ? ಗ್ಯಾರಂಟಿಗಳು ಮಾತ್ರವೇ ನಿಮ್ಮ ಸರ್ಕಾರದ ಆಡಳಿತವಾಗಿದೆ ಹೊರೆತು, ರಾಜ್ಯದ ಅಭಿವೃದ್ಧಿಯಲ್ಲ. ನಿಮ್ಮ ದುರಾಡಳಿತದ ಪರಮಾವಧಿಯಿಂದಲೇ ಇಂದು ರೈತರು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ ಎಂದು, ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಹ್ಲಾದ್ ಜೋಶಿ ಅವರು ಟ್ವೀಟ್ ಮಾಡೋ ಮೂಲಕ ಕಟು ಟೀಕೆ ಮಾಡಿದ್ದಾರೆ.

