ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ರಿಲೀಫ್ ಸಿಕ್ಕಿದೆ. ಮೊದಲ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಸೇರಿದಂತೆ ಹಾಸ್ಟೆಲ್ ವಾರ್ಡನ್ ರಶ್ಮಿ, ಮಠದ ಮ್ಯಾನೇಜರ್ ಪರಮಶಿವಯ್ಯರನ್ನ, ನಿರ್ದೋಷಿ ಎಂದು, ಚಿತ್ರದುರ್ಗದ 2ನೇ ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಶ್ರೀಗಳಿಗೆ ಕ್ಲೀನ್ಚಿಟ್ ಕೊಟ್ಟಿದೆ.
2022ರ ಆಗಸ್ಟ್ 26ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮುರುಘಾ ಮಠದ ಹಾಸ್ಟೆಲ್ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಶ್ರೀಗಳು, ಎ2 ರಶ್ಮಿ, ಎ3 ಪರಮಶಿವಯ್ಯ ವಿರುದ್ಧ ಕೇಸ್ ದಾಖಲಾಗಿತ್ತು. ಸತತ 3 ವರ್ಷಗಳ ಕಾಲ ಪೋಕ್ಸೊ ಕೇಸ್ ವಿಚಾರಣೆ ನಡೆಸಲಾಗಿತ್ತು.
ಅದೇ ವರ್ಷ ಆಗಸ್ಟ್ 27ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿತ್ತು. 2022ರ ಸೆಪ್ಟೆಬರ್ 01ರಂದು ಮುರುಘಾಶ್ರೀ, ರಶ್ಮಿ ಬಂಧನಕ್ಕೊಳಗಾಗಿದ್ದರು. ಇನ್ನು, ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾಶ್ರೀ ವಿರುದ್ಧ ಮಠದ ಅಡುಗೆ ಸಹಾಯಕಿಯಿಂದ ಮತ್ತೊಂದು ದೂರು ದಾಖಲಾಗಿತ್ತು. ಆ ಕೇಸಲ್ಲಿ ತನ್ನಿಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆಯೂ, ಲೈಂಗಿಕ ಕಿರುಕುಳ ನೀಡಿರುವುದಾಗಿಯೂ ಉಲ್ಲೇಖಿಸಿದ್ದರು.
ಆಗ ಮುರುಘಾಶ್ರೀಗಳ ಜಾಮೀನು ರದ್ದು ಕೋರಿ ಸಂತ್ರಸ್ತೆಯರು ಸುಪ್ರೀಂ ಕೋರ್ಟ್ ಮೊರೆ ಹೋದ ಹಿನ್ನೆಲೆ, ಮುಖ್ಯ ಸಾಕ್ಷ ವಿಚಾರಣೆ ಪೂರ್ಣ ಆಗುವವರೆಗೆ ಮುರುಘಾಶ್ರೀ ಬಂಧನದಲ್ಲಿಡುವಂತೆ ಸುಪ್ರಿಂ ಕೋರ್ಟ್ ಆದೇಶ ಮಾಡಿತ್ತು. ಹೀಗಾಗಿ 2024ರ ಮೇ 27ರಂದು ಕೋರ್ಟ್ ಎದುರು ಶರಣಾದ ಮುರುಘಾಶ್ರೀಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿತ್ತು. ಬಳಿಕ ಸಂತ್ರಸ್ತೆಯರಿಬ್ಬರು ಸೇರಿದಂತೆ 13 ಜನರ ಸಾಕ್ಷ ವಿಚಾರಣೆ ಅಂತ್ಯ ಹಿನ್ನೆಲೆ, ಮುರುಘಾಶ್ರೀ ಬಿಡುಗಡೆಯಾಗಿದ್ರು.
ಇದೀಗ ನಿರ್ದೋಷಿ ಎಂದು ತೀರ್ಪು ಬಂದಿದ್ದು ಮುರುಘಾ ಶ್ರೀಗಳು ನಿಟ್ಟುಸಿರುಬಿಟ್ಟಿದ್ದಾರೆ.

