ವರುಣಾ ಕ್ಷೇತ್ರದ ಅಭಿವೃದ್ಧಿಗೆ ಎಷ್ಟೇ ಕೆಲಸ ಮಾಡಿದರೂ ಜನರ ಋಣ ತೀರಿಸಲು ಸಾಧ್ಯವಿಲ್ಲ. ಆದರೆ, ಕ್ಷೇತ್ರದ ಜನರ ಸಮಸ್ಯೆಗಳಿಗೆ ಹೆಚ್ಚು ಗಮನ ನೀಡಿ, ಅವರ ಬಾಧೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡುವ ದಿಕ್ಕಿನಲ್ಲಿ ನಾನು ಶ್ರಮಿಸುತ್ತೇನೆ ಎಂದು ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ನಂಜನಗೂಡು ತಾಲ್ಲೂಕಿನ ಚಿಕ್ಕಯ್ಯನ ತಾಂಡವಪುರ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಹೊಸ ಕೊಠಡಿ ನಿರ್ಮಾಣಕ್ಕಾಗಿ ನಡೆದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕ್ಷೇತ್ರದ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡುತ್ತಿರುವುದಾಗಿ ತಿಳಿಸಿದರು.
ಸಿಎಸ್ಆರ್ ನಿಧಿ ಹಾಗೂ ಸರ್ಕಾರದ ಅನುದಾನದಡಿ ತಾಂಡವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹೊಸ ಕೊಠಡಿ ನಿರ್ಮಾಣಕ್ಕೆ ಚಾಲನೆ ನೀಡಿರುವುದಾಗಿ, ಜೊತೆಗೆ ಮಲ್ಲುಪುರ, ಬಿದರಗೂಡು, ಮರಳೂರು, ನಗರ್ಲೆ, ಸುತ್ತೂರು, ಹಾರೋಪುರ ಸೇರಿದಂತೆ ಸುಮಾರು 10ಕ್ಕೂ ಹೆಚ್ಚು ಗ್ರಾಮಗಳಲ್ಲಿ ಹೆಚ್ಚುವರಿ ಶಾಲಾ ಕಟ್ಟಡಗಳ ನಿರ್ಮಾಣ ಪ್ರಕ್ರಿಯೆ ಆರಂಭವಾಗಿದೆ ಎಂದು ತಿಳಿಸಿದರು.
ನಮ್ಮ ತಂದೆ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದ ಸಮಯದಲ್ಲಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ದೊರಕದಿದ್ದರೂ, ಸಾಧ್ಯವಾದ ಮಟ್ಟಿಗೆ ಅಭಿವೃದ್ಧಿ ಕೆಲಸಗಳು ನಡೆದವು. ಆದರೆ ಈಗ ನಮ್ಮದೇ ಸರ್ಕಾರ ಅಧಿಕಾರದಲ್ಲಿರುವುದರಿಂದ ಮತ್ತು ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿರುವುದರಿಂದ, ಶಿಕ್ಷಣ, ಮೂಲಭೂತ ಸೌಲಭ್ಯಗಳು ಹಾಗೂ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗುತ್ತಿದೆ. ಇದರಿಂದ ವರುಣಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವ ಗುರಿ ಉತ್ತಮ ರೀತಿಯಲ್ಲಿ ಮುಂದುವರಿಯುತ್ತಿದೆ ಎಂದು ಹೇಳಿದರು.
ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಿದ ಯತೀಂದ್ರ ಅವರು—ಸಿದ್ದರಾಮಯ್ಯನವರನ್ನು ಎರಡು ಬಾರಿ ಮುಖ್ಯಮಂತ್ರಿಗಳಾಗಿ, ಒಂದು ಬಾರಿ ವಿರೋಧ ಪಕ್ಷದ ನಾಯಕರಾಗಿ ಮಾಡಿರುವಂತೆ, ನನ್ನನ್ನೂ ಶಾಸಕರಾಗಿ ಆಯ್ಕೆ ಮಾಡಿ ಸೇವೆ ಮಾಡಲು ಅವಕಾಶ ನೀಡಿದ್ದೀರಿ. ಈ ಪ್ರೀತಿ ಮತ್ತು ವಿಶ್ವಾಸ ಮುಂದೆಯೂ ಉಳಿಯಲಿ ಎಂದು ಮನವಿ ಮಾಡಿದರು.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ




