AIADMK –ಬಿಜೆಪಿ ಸೀಟು ಹಂಚಿಕೆ ಕಗ್ಗಂಟು!

ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ AIADMK ಹಾಗೂ ಬಿಜೆಪಿ ನಡುವೆ ಸೀಟು ಹಂಚಿಕೆ ಕುರಿತು ಮಾತುಕತೆಗಳು ಆರಂಭವಾಗಿವೆ. ಈ ವೇಳೆ ಬಿಜೆಪಿ, AIADMK ಮುಂದೆ 3 ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನಗಳು ಹಾಗೂ 56 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅವಕಾಶವನ್ನು ಬೇಡಿಕೆ ಇಟ್ಟಿದೆ ಎನ್ನಲಾಗಿದೆ.

AIADMK ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ತಡರಾತ್ರಿ ವರೆಗೆ ಸಭೆ ನಡೆಸಿದ್ದು, ಈ ವಿಷಯ ಚರ್ಚೆಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಮುಂದಿಟ್ಟಿರುವ ಸಚಿವ ಸ್ಥಾನಗಳ ಬೇಡಿಕೆಗೆ ಪಳನಿಸ್ವಾಮಿ ಒಪ್ಪಿಗೆ ನೀಡಿಲ್ಲ ಎಂದು ಹೇಳಲಾಗಿದ್ದು, ಸೀಟು ಹಂಚಿಕೆ ಕುರಿತ ಅಂತಿಮ ನಿರ್ಧಾರವನ್ನು ಪಕ್ಷದ ಹಿರಿಯ ನಾಯಕರು ಹಾಗೂ ಪದಾಧಿಕಾರಿಗಳೊಂದಿಗೆ ಚರ್ಚಿಸಿ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿರುವ ಪಳನಿಸ್ವಾಮಿ, ತಮಿಳುನಾಡಿನ ಪ್ರಸ್ತುತ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಕೇಂದ್ರ ನಾಯಕತ್ವದೊಂದಿಗೆ ಚರ್ಚೆ ನಡೆಸಿದ್ದಾರೆ. ಇದೇ ವೇಳೆ, ಪಕ್ಷದಿಂದ ಉಚ್ಚಾಟನೆಗೊಂಡಿರುವ ಶಶಿಕಲಾ ಹಾಗೂ ಓ. ಪನ್ನೀರಸೆಲ್ವಂ ಅವರನ್ನು ಮತ್ತೆ AIADMK ಗೆ ಸೇರ್ಪಡೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಪಳನಿಸ್ವಾಮಿ ಸ್ಪಷ್ಟಪಡಿಸಿದ್ದಾರೆ.

AIADMK–ಬಿಜೆಪಿ ಮೈತ್ರಿಯ ಭವಿಷ್ಯ ಹಾಗೂ ಸೀಟು ಹಂಚಿಕೆಯ ಅಂತಿಮ ಚಿತ್ರಣ ಇನ್ನೂ ಸ್ಪಷ್ಟವಾಗಬೇಕಿದ್ದು, ಮುಂದಿನ ದಿನಗಳಲ್ಲಿ ಈ ವಿಚಾರ ರಾಜಕೀಯ ವಲಯದಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.

About The Author