Bagalakote News: ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ, ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಭೂ ಸ್ವಾಧೀನಗೊಳ್ಳುವ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ನಾವು ಬದ್ಧರಾಗಿದ್ದು, ನಮ್ಮದು ನುಡಿದಂತೆ ನಡೆಯುವ ಜನಪರ ಸರ್ಕಾರವಾಗಿದೆ. ಈ ಭಾಗದ ಶಾಸಕರಾಗಿದ್ದ ಹೆಚ್.ವೈ.ಮೇಟಿಯವರು ದಿವಂಗತರಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ಬಾಗಲಕೋಟೆ ಸರ್ಕಾರಿ ಮೆಡಿಕಲ್ ಕಾಲೇಜಿನ ಶಂಕುಸ್ಥಾಪನೆಯಾಗಲು ಹೆಚ್.ವೈ.ಮೇಟಿಯವರೇ ಕಾರಣ. ಮೆಡಿಕಲ್ ಕಾಲೇಜ್ ಸ್ಥಾಪಿಸಲು 2025ರ ಬಜೆಟ್ ನಲ್ಲಿ ಘೋಷಣೆಯಾಗಿದ್ದು, ಇಂದು ಶಂಕುಸ್ಥಾಪನೆಗೊಳ್ಳುತ್ತಿದೆಯೇ ಹೊರತು, ಉಪಚುನಾವಣೆಯ ಕಾರಣಕ್ಕಾಗಿ ಅಲ್ಲ ಎಂದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅನೇಕ ಜಿಲ್ಲೆಗಳನ್ನು ಅಭಿವೃದ್ಧಿಗೊಳಿಸುವ ದಿಸೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಲಾಗಿದೆ. ಪ್ರತಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಹಾಗೂ ಟ್ರಾಮಾ ಸೆಂಟರ್ ಗಳನ್ನು ಸ್ಥಾಪಿಸುವ ಉದ್ದೇಶವಿದ್ದು, ಈಗಾಗಲೇ ಸುಮಾರು 25 ಜಿಲ್ಲೆಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ವರ್ಷ ಇಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂದು ಬಿಜೆಪಿಯವರು ಮಾಡುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾದವು. ನಾವು ಗ್ಯಾರಂಟಿ ಹಾಗೂ ಅಭಿವೃದ್ಧಿಗೆ ಸಮಾನ ಆದ್ಯತೆ ನೀಡುತ್ತಿದ್ದೇವೆ. ಪ್ರತಿ ವರ್ಷ ಗ್ಯಾರಂಟಿಗಳಿಗೆ ಸುಮಾರು 50 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಇದುವರೆಗೆ 1.22 ಲಕ್ಷ ಕೋಟಿಗಳನ್ನು ವೆಚ್ಚ ಮಾಡಲಾಗಿದೆ. ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ, ಬಾಗಲಕೋಟೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸಲಿಲ್ಲ. ಜಾತಿ ಧರ್ಮಗಳ ಮಧ್ಯೆ ವೈಮನಸ್ಯ ತರುವುದು ಅವರ ದುರಾಲೋಚನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಬಿಜೆಪಿಯವರು ತಮ್ಮ ಅವಧಿಯಲ್ಲಿ ಯುಕೆಪಿ ಯೋಜನೆಗೆ ಪರಿಹಾರ ನೀಡಲು ಆಸಕ್ತಿ ವಹಿಸಲಿಲ್ಲ. ಆದ್ದರಿಂದ ರೈತರು ಭೂಮಿ ನೀಡಲು ಮುಂದೆ ಬರಲಿಲ್ಲ. ಈಗ ರೈತರಿಗೆ ಭೂ ಪರಿಹಾರವನ್ನು ಒಂದೇ ಬಾರಿಗೆ ನೀಡಲು ನಮ್ಮ ಸರ್ಕಾರ ನಿರ್ಣಯಿಸಿದೆ. ಈ ಬಾರಿಯ ಬಜೆಟ್ ನಲ್ಲಿ ಯುಕೆಪಿ ಯೋಜನೆಯ 3 ಹಂತದಲ್ಲಿ ಭೂಪರಿಹಾರಕ್ಕೆ ಹಣ ಮೀಸಲಿಡಲಾಗಿದ್ದು, ನಂತರವೂ ಹೆಚ್ಚಿನ ಅನುದಾನಕ್ಕೆ ವ್ಯವಸ್ಥೆಗೊಳಿಸಲಾಗುವುದು. ಸ್ವಯಂಪ್ರೇರಣೆಯಿಂದ ಭೂಮಿ ನೀಡುವ ರೈತರಿಗೆ ನೀರಾವರಿ ಜಮೀನಿಗೆ 40 ಲಕ್ಷ ರೂ. ಹಾಗೂ ಖುಷ್ಕಿ ಜಮೀನಿಗೆ 30 ಲಕ್ಷ ರೂ. ನೀಡಲು ಸರ್ಕಾರ ನಿರ್ಣಯಿಸಿದೆ. ಆದರೆ ಈ ಬಗ್ಗೆ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯುಕೆಪಿ ಯೋಜನೆಯ ವ್ಯಾಪ್ತಿಗೆ ಬರುವ 8 ಗ್ರಾಮಗಳಲ್ಲಿ 900 ಎಕರೆಗೆ 446 ಕೋಟಿ ರೂ.ಗಳ ಪರಿಹಾರವನ್ನು ಕೊಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಎಂದಿಗೂ ನುಡಿದಂತೆಯೇ ನಡೆಯುತ್ತದೆ. ಕೇಂದ್ರಕ್ಕೆ ಹಲವು ಮನವಿಗಳ ನಂತರವೂ, ಯುಕೆಪಿ, ಮಹಾದಾಯಿ ಸೇರಿದಂತೆ ಹಲವು ನೀರಾವರಿ ಯೋಜನೆಗೆ ಬೇಕಾದ ಅಗತ್ಯ ಅನುಮತಿಗಳನ್ನು ಕೇಂದ್ರ ಸರ್ಕಾರ ಇದುವರೆಗೆ ನೀಡಿಲ್ಲ. ಆದರೆ ನಮ್ಮ ಸರ್ಕಾರ ಉತ್ತರ ಕರ್ನಾಟಕದ ಜನತೆಗೆ ನ್ಯಾಯ ಒದಗಿಸಲು ಪ್ರಯತ್ನಿಸುತ್ತಿದೆ. ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.




