Uttara Kannada: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜೇನುಹುಳು ದಾಳಿ: 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Mundagod News : ತಾಲೂಕಿನ ಕರಗಿನಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ
ಜೇನುಹುಳುಗಳು ದಾಳಿ ನಡೆಸಿದ ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ
ಘಟನೆ ನಡೆದಿದೆ.

ಶಾಲೆಯ ವಸತಿ ನಿಲಯದ ಎರಡನೇ ಮಹಡಿಯಲ್ಲಿ ಜೇನುಹುಳುಗಳು ದೊಡ್ಡ ಪ್ರಮಾಣದಲ್ಲಿ ಗೂಡು
ಕಟ್ಟಿಕೊಂಡಿದ್ದವು. ಈ ವೇಳೆ ವಿದ್ಯಾರ್ಥಿಯೊಬ್ಬರು ಗೂಡಿನ ಕಡೆಗೆ ಯಾವುದೋ ವಸ್ತುವನ್ನು ಎಸೆದ
ಪರಿಣಾಮ ಜೇನುಹುಳುಗಳು ಏಕಾಏಕಿ ಕೆರಳಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿರುವುದಾಗಿ ತಿಳಿದು
ಬಂದಿದೆ. ದಾಳಿಯಿಂದ ಹಲವು ವಿದ್ಯಾರ್ಥಿಗಳು ಜೇನುಹುಳಗಳ ಕಡಿತಕ್ಕೆ ಒಳಗಾಗಿ ಅಸ್ವಸ್ಥಗೊಂಡಿದ್ದು,
ಅವರನ್ನು ತಕ್ಷಣ ಮುಂಡಗೋಡ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ವೈದ್ಯರು ವಿದ್ಯಾರ್ಥಿಗಳಿಗೆ ಅಗತ್ಯ ಚಿಕಿತ್ಸೆ ನೀಡಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ
ಸುದ್ದಿ ತಿಳಿಯುತ್ತಿದ್ದಂತೆ ಶಾಲಾ ಸಿಬ್ಬಂದಿ ಹಾಗೂ ಸ್ಥಳೀಯರು ವಿದ್ಯಾರ್ಥಿಗಳ ನೆರವಿಗೆ ಧಾವಿಸಿ ರಕ್ಷಣಾ
ಕಾರ್ಯ ಕೈಗೊಂಡರು. ಸದ್ಯ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಶಾಲಾ ಆವರಣದಲ್ಲಿ ಜೇನುಹುಳುಗಳ ಗೂಡುಗಳಿರುವ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಪೋಷಕರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.

About The Author