Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ತಮ್ಮ ಸಮಸ್ಯೆಯನ್ನು ಕೇಂದ್ರ ಸಚಿವರ ಗಮನಕ್ಕೆ ತಂದಿದ್ದಕ್ಕೆ ಕೆಲಸದಿಂದ ಹೊರಹಾಕಲಾಗಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ.
ಹುಬ್ಬಳ್ಳಿಯ ಎಫ್ಸಿಐ ಕಚೇರಿ ಎದುರು ಪ್ರತಿಭಟನೆ ನಡೆಸಿದ ಗುತ್ತಿಗೆ ಕಾರ್ಮಿಕರು, 1994ರಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದರೂ ಕೆಲಸದ ಒತ್ತಡಕ್ಕೆ ತಕ್ಕಂತೆ ವೇತನ ಹೆಚ್ಚಳ ಹಾಗೂ ಸೇವಾ ಭದ್ರತೆ ನೀಡಿಲ್ಲ ಎಂದು ಆರೋಪಿಸಿದರು. ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಮಿಕರ ದಿನಾಚರಣೆಯಾದ ಮೇ 1ರಂದು ತಮ್ಮ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಬಳಿಕ ತಮ್ಮ ಸಮಸ್ಯೆಯನ್ನು ಕೇಂದ್ರ ಸಚಿವರ ಗಮನಕ್ಕೆ ತರಲು ಮುಂದಾದ ಹಿನ್ನೆಲೆಯಲ್ಲಿ ತಮ್ಮನ್ನು ಕೆಲಸದಿಂದ ಹೊರಹಾಕಲಾಗಿದೆ ಎಂದು ಕಾರ್ಮಿಕರು ಆರೋಪಿಸಿದರು.
ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ತಮ್ಮನ್ನು ಕೂಡಲೇ ಕೆಲಸಕ್ಕೆ ಮರುನೇಮಕ ಮಾಡಬೇಕು, ನ್ಯಾಯಯುತ ವೇತನ ಹಾಗೂ ಸೇವಾ ಭದ್ರತೆ ಒದಗಿಸಬೇಕು ಎಂದು ಕಾರ್ಮಿಕರು ಆಗ್ರಹಿಸಿದರು. ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನೂ ನೀಡಿದರು.




