Uttara Kannada News: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಲು ಖಾಕಿ ಪಡೆ ಭರ್ಜರಿ ಅಖಾಡಕ್ಕಿಳಿದಿದೆ. ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ರಾತ್ರಿ ಗಸ್ತನ್ನು ತೀವ್ರಗೊಳಿಸಲಾಗಿದ್ದು, ಸಾರ್ವಜನಿಕರ ಜೊತೆಗೂಡಿ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.
ಮುಂಡಗೋಡ ಪಟ್ಟಣ, ಬಾಚಣಕಿ ಹಾಗೂ ಪಾಳಾ ಸೇರಿದಂತೆ ಪ್ರಮುಖ ಗ್ರಾಮಗಳಲ್ಲಿ ಅರ್ಧರಾತ್ರಿಯ ವೇಳೆ ಸಾರ್ವಜನಿಕರು ಹಾಗೂ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ಪೆಟ್ರೋಲಿಂಗ್ ನಡೆಸುತ್ತಿದ್ದಾರೆ. ರಾತ್ರಿ ವೇಳೆಯಲ್ಲಿ ಅನುಮಾನಾಸ್ಪದವಾಗಿ ಓಡಾಡುವ ವ್ಯಕ್ತಿಗಳು ಹಾಗೂ ವಾಹನಗಳ ಮೇಲೆ ಕಣ್ಣಿಡಲಾಗುತ್ತಿದ್ದು, ಪ್ರಮುಖ ರಸ್ತೆಗಳಲ್ಲಿ ಚೆಕ್ಪೋಸ್ಟ್ ನಿರ್ಮಿಸಿ ವಾಹನ ತಪಾಸಣೆ ಕೈಗೊಳ್ಳಲಾಗುತ್ತಿದೆ.
ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಸಿಬ್ಬಂದಿ ಕಟ್ಟೆಚ್ಚರ ವಹಿಸಿದ್ದಾರೆ. ಅಷ್ಟೇ ಅಲ್ಲ, ಗ್ರಾಮಗಳಲ್ಲಿ ಯಾರಾದರೂ ಹೊಸಬರು ಅಥವಾ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ತಲುಪಿಸುವಂತೆ ಮುಂಡಗೋಡ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ರಾತ್ರಿ ಗಸ್ತು ಹಾಗೂ ತಪಾಸಣೆಯನ್ನು ಹೆಚ್ಚಿಸಿರುವ ಖಾಕಿ ಪಡೆ, ಜನಸಾಮಾನ್ಯರ ಸಹಕಾರದೊಂದಿಗೆ ಕಳ್ಳರ ಆಟಾಟೋಪಕ್ಕೆ ಅಂತ್ಯ ಹಾಡಲು ಮಾಸ್ಟರ್ ಪ್ಲಾನ್ ರೂಪಿಸಿದೆ.




