Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಹಾನಗಲ್ ತಾಲೂಕಿನ ಐದಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಶುಂಠಿ ಬೆಳೆ ಪರಿಹಾರ ಇನ್ನೂ ಜಮೆಯಾಗಿಲ್ಲ ಎಂದು ಆರೋಪಿಸಿ, ಕೆಲ ದಿನಗಳ ಹಿಂದೆ ರೈತ ಸಂಘದ ವತಿಯಿಂದ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಆದರೂ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ ಇಂದು ರೈತರು ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಅಧಿಕಾರಿಗಳನ್ನು ಕಚೇರಿಯಿಂದ ಹೊರಗೆ ಕಳುಹಿಸಿ, ಕಚೇರಿಯ ಬಾಗಿಲು ಮುಚ್ಚಿ ರೈತರು ಪ್ರತಿಭಟನೆ ನಡೆಸಿದರು.
ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಸಹಾಯಕ ತೋಟಗಾರಿಕೆ ನಿರ್ದೇಶಕರು ಮಾತನಾಡಿ, ನಾಳೆ ಸಂಜೆ ಒಳಗಾಗಿ ಬಾಕಿ ಇರುವ ಐದಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಶುಂಠಿ ಬೆಳೆ ಪರಿಹಾರ ಜಮೆಯಾಗಲಿದೆ ಎಂದು ಭರವಸೆ ನೀಡಿದರು.
ಆದರೆ ನಾಳೆ ಸಂಜೆ ಒಳಗಾಗಿ ಪರಿಹಾರ ಜಮೆಯಾಗದಿದ್ದರೆ ಮರುದಿನವೇ ರೈತ ಸಂಘದ ವತಿಯಿಂದ ಉಗ್ರ ಹೋರಾಟ ನಡೆಸುವುದಾಗಿ ರೈತ ಸಂಘದ ತಾಲೂಕು ಅಧ್ಯಕ್ಷ ಮರಿಗೌಡ ಪಾಟೀಲ್ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರು ಸೇರಿದಂತೆ ಹಲವಾರು ರೈತರು ಭಾಗವಹಿಸಿದ್ದರು.




