ಯಡಿಯೂರಪ್ಪಗೆ ಶಾಕ್ – ಸಂಸದೀಯ ಮಂಡಳಿಯಿಂದ ಔಟ್?

ಕರ್ನಾಟಕ ರಾಜಕಾರಣದ ಹಿರಿಯ ಧುರೀಣ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿಯಿಂದ ಮತ್ತೊಂದು ಮಹತ್ವದ ಬದಲಾವಣೆಯ ಮುನ್ಸೂಚನೆ ಸಿಕ್ಕಿದೆ. ಈ ತಿಂಗಳಾಂತ್ಯಕ್ಕೆ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿಯ ಪರಿಷ್ಕರಣೆಯಲ್ಲಿ ಯಡಿಯೂರಪ್ಪ ಅವರನ್ನು ಆ ಉನ್ನತ ಸಮಿತಿಯಿಂದ ಕೈಬಿಡುವ ಸಾಧ್ಯತೆ ಬಹುತೇಕ ನಿಚ್ಚಳವಾಗಿದೆ.

‘ನಿತಿನ್ ನಬಿನ್’ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಪಕ್ಷದ ಸಂಘಟನೆಯಲ್ಲಿ ಸರಣಿ ಬದಲಾವಣೆಗಳನ್ನು ತರುತ್ತಿದ್ದಾರೆ. ಕರ್ನಾಟಕದ ಎಂ. ನಾಗರಾಜ್ ಅವರಿಗೆ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನ ನೀಡಲಾಗಿದ್ದು, ಬಿ.ಎಲ್. ಸಂತೋಷ್ ಅವರು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿದಿದ್ದಾರೆ. ಈಗ ಇಡೀ ರಾಷ್ಟ್ರಕ್ಕೆ ಅನ್ವಯವಾಗುವಂತೆ ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಲು ಬಿಜೆಪಿ ಮುಂದಾಗಿದ್ದು, ಬಿಎಸ್‌ವೈ ಸೇರಿದಂತೆ ಕೆಲ ಹಿರಿಯರಿಗೆ ವಿಶ್ರಾಂತಿ ನೀಡಲು ತೀರ್ಮಾನಿಸಿದೆ ಎನ್ನಲಾಗಿದೆ.

ಬಿಜೆಪಿಯಲ್ಲಿ ಸಂಸದೀಯ ಮಂಡಳಿ ಎನ್ನುವುದು ಅತ್ಯಂತ ಪರಮೋಚ್ಛ ನಿರ್ಧಾರಕ ಸಂಸ್ಥೆಯಾಗಿದೆ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಬಿ.ಎಸ್. ಯಡಿಯೂರಪ್ಪ ಅವರಿಗೆ ಈ ಮಂಡಳಿಯಲ್ಲಿ ಸ್ಥಾನ ಕಲ್ಪಿಸಲಾಗಿತ್ತು. ಲೋಕಸಭೆ ಹಾಗೂ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಟಿಕೆಟ್ ಹಂಚಿಕೆ ಸೇರಿದಂತೆ ಪಕ್ಷದ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳುವಲ್ಲಿ ಈ ಮಂಡಳಿಯ ಪಾತ್ರ ಹಿರಿದಾದದ್ದು. ಈ ಎಲ್ಲಾ ಪ್ರಮುಖ ಪ್ರಕ್ರಿಯೆಗಳಲ್ಲಿ ಯಡಿಯೂರಪ್ಪ ರಾಜ್ಯವನ್ನು ಪ್ರತಿನಿಧಿಸುತ್ತ ಬಂದಿದ್ದರು.

ಆದ್ರೆ ‘ಬದಲಾದ ರಾಜಕೀಯ ಪರಿಸ್ಥಿತಿಗೆ ತಕ್ಕಂತೆ ಹೊಸ ಚಿಂತನೆಗಳಿಗೆ ಅವಕಾಶ ಮಾಡಿಕೊಡಲು ಹೈಕಮಾಂಡ್ ನಿರ್ಧರಿಸಿದೆ. ಹಿರಿಯ ನಾಯಕ ಯಡಿಯೂರಪ್ಪ ಅವರಿಗೆ ಈ ಬಗ್ಗೆ ಈಗಾಗಲೇ ಪರೋಕ್ಷ ಸಂದೇಶ ರವಾನೆಯಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿದ್ದು, ಪಕ್ಷದ ಸಂಘಟನಾತ್ಮಕ ಸುಧಾರಣೆಯ ಭಾಗವಾಗಿ ನಡೆಯುತ್ತಿರುವ ಈ ಬದಲಾವಣೆ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

About The Author