Dharwad News: ಧಾರವಾಡ ಜಿಲ್ಲೆಯನ್ನು ಕೂಡಲೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರಿಗೆ ತುರ್ತು ಪರಿಹಾರ ನೀಡಬೇಕು ಎಂದು ರೈತರು ಮುಖ್ಯಮಂತ್ರಿ ಅವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಾಳೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಿಎಂ ಆಗಮಿಸಲಿದ್ದು, ಇದೇ ವೇಳೆ ರೈತರು ಮನವಿ ಸಲ್ಲಿಸಲು ಸಿದ್ಧರಾಗಿದ್ದಾರೆ.
ಮಳೆ ಕೈಕೊಟ್ಟಿದೆ… ಬೆಳೆ ಕೈತಪ್ಪುವ ಆತಂಕ… ಸಂಕಷ್ಟದಲ್ಲಿರುವ ಧಾರವಾಡ ಜಿಲ್ಲೆಯ ರೈತರು ಇದೀಗ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬರಪೀಡಿತ ಜಿಲ್ಲೆಗಳ ಪಟ್ಟಿಯಲ್ಲಿ ಧಾರವಾಡವನ್ನು ಕೈಬಿಟ್ಟಿರುವುದಕ್ಕೆ ರೈತರು ಅಸಮಾಧಾನ ಹೊರಹಾಕಿದ್ದಾರೆ.
ನಾಳೆ ಉತ್ತರ ಕರ್ನಾಟಕ ಪ್ರವಾಸದ ಹಿನ್ನೆಲೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಅವರಿಗೆ ರೈತರು ನೇರವಾಗಿ ಮನವಿ ಸಲ್ಲಿಸಲಿದ್ದಾರೆ. ಧಾರವಾಡ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ, ರೈತರಿಗೆ ತಕ್ಷಣ ಪರಿಹಾರ ನೀಡಬೇಕು ಎಂಬುದು ಒತ್ತಾಯ.
ಮನವಿ ಸಲ್ಲಿಸಿದರೂ ಸರ್ಕಾರ ಸ್ಪಂದಿಸದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ರೈತ ಮುಖಂಡರು ಎಚ್ಚರಿಸಿದ್ದಾರೆ. ಸಿಎಂ ಕಾರಿಗೆ ಮುತ್ತಿಗೆ ಹಾಕಿ ಘೇರಾವ್ ನಡೆಸುವುದಕ್ಕೂ ಸಿದ್ಧ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.
ರೈತರ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿರುವ ಸಂದರ್ಭದಲ್ಲಿ ಸರ್ಕಾರ ಉತ್ತರ ಕರ್ನಾಟಕದ ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ಧಾರವಾಡ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ ಸೂಕ್ತ ಪರಿಹಾರ ನೀಡಬೇಕು ಎಂಬುದು ರೈತರ ಆಗ್ರಹ.
ಧಾರವಾಡಕ್ಕೆ ಬರಗಾಲ ಘೋಷಣೆ ಮಾಡಬೇಕೆಂಬ ರೈತರ ಒತ್ತಾಯ ಇದೀಗ ಸಿಎಂ ಅಂಗಳಕ್ಕೆ ತಲುಪಿದೆ. ನಾಳೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ರೈತರು ಸಿಎಂಗೆ ಮನವಿ ಸಲ್ಲಿಸಲಿದ್ದು, ಸರ್ಕಾರದ ಸ್ಪಂದನೆ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ.




