ಬೆಂಗಳೂರು: ಜೂ.1 ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅಭಿವೃದ್ಧಿ ಕಾರ್ಯಗಳ ವೇಗ ಪಡೆದುಕೊಳ್ಳಬೇಕು. ಮಧ್ಯವರ್ತಿ ಹಾವಳಿ ತಪ್ಪಿಸಿ ಸರ್ಕಾರದ ಯೋಜನೆಗಳು ನೇರವಾಗಿ ಫಲಾನುಭವಿ ತಲುಪುವುದು ನಮ್ಮ ಆದ್ಯತೆಯಾಗಬೇಕು ಎಂದು ಯುವ ಸಬಲೀಕರಣ, ಕ್ರೀಡೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಬಿ.ನಾಗೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಎರಡೂ ಇಲಾಖೆಗಳ ಅಧಿಕಾರಿಗಳೊಂದಿಗೆ ಗುರುವಾರ ಬಿ. ನಾಗೇಂದ್ರ ಅವರು ಸಭೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಎರಡೂ ಇಲಾಖೆಗಳಲ್ಲಿನ ಯೋಜನೆಗಳು ಕಟ್ಟಕಡೆಯ ಫಲಾನುಭವಿಗಳಿಗೆ ತಲುಪಬೇಕು. ಆಗ ಮಾತ್ರ ಸರ್ಕಾರಿ ಯೋಜನೆಗಳು ಯಶಸ್ವಿಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚು ಶ್ರಮ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಸಮಾಜದ ಜನರ ಕಲ್ಯಾಣಕ್ಕಾಗಿ ಇಲಾಖೆ ಹಮ್ಮಿಕೊಂಡಿರುವ ಯೋಜನೆಗಳು ನೇರವಾಗಿ ಜನರಿಗೆ ತಲುಪಬೇಕು. ಮಧ್ಯವರ್ತಿಗಳ ಹಾವಳಿಯನ್ನು ತಡೆಗಟ್ಟುವುದು ನನ್ನ ಮೊದಲ ಆದ್ಯತೆ. ಇದಕ್ಕೆ ಪೂರಕವಾಗಿ ಅಧಿಕಾರಿಗಳು ಸ್ಪಂದಿಸಬೇಕು. ಪ್ರಸ್ತುತ ಇಲಾಖೆಯಲ್ಲಿ ಚಾಲ್ತಿಯಲ್ಲಿರುವ ಕೆಲವು ಯೋಜನೆಗಳ ಸ್ವರೂಪ ಬದಲಿಸುವ ಮೂಲಕ ಮತ್ತಷ್ಟು ಮೆರುಗು ನೀಡಬೇಕು. ಜತೆಗೆ ಕೆಲವು ಹೊಸ ಯೋಜನೆಗಳನ್ನು ರೂಪಿಸಬೇಕು. ಈ ನಿಟ್ಟಿನಲ್ಲಿ ಹೊಸ ಸ್ವರೂಪ ಹಾಗೂ ಆಲೋಚನೆಯೊಂದಿಗೆ ಮುಂದೆ ಸಾಗೋಣ ಎಂದು ಅಧಿಕಾರಿಗಳಿಗೆ ಕರೆ ನೀಡಿದರು.
ಹೊಸ ಕಚೇರಿ ಪೂಜೆ:
ಇದಕ್ಕೂ ಮೊದಲು ಸಚಿವರು ತಮಗೆ ವಿಧಾನಸೌಧ ಮೂರನೇ ಮಹಡಿಯಲ್ಲಿ ಹಂಚಿಕೆಯಾಗಿರುವ ಕೊಠಡಿಯಲ್ಲಿ ಕುಟುಂಬ ಸದಸ್ಯರೊಂದಿಗೆ ಪೂಜೆ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದಲ್ಲಿ ಅಧಿಕಾರಿಗಳು ಹಾಗೂ ನಾವು ಜೋಡೆತ್ತುಗಳ ಮಾದರಿಯಲ್ಲಿ ಕೆಲಸ ಮಾಡುತ್ತೇವೆ. ಸರ್ಕಾರ ಘೋಷಣೆ ಮಾಡಿರುವ ಐದು ಗ್ಯಾರೆಂಟಿಗಳು ಜಾರಿಯಾಗುವುದು ಗ್ಯಾರೆಂಟಿ. ಯೋಜನೆಗಳನ್ನು ಜಾರಿಗೆ ತರುವ ಬಗ್ಗೆ ರೂಪುರೇಷೆ ಸಿದ್ಧಗೊಳ್ಳುತ್ತಿದೆ. ಈಗಾಗಲೇ ಯಾವ ರೀತಿಯಲ್ಲಿ ಹಣ ಹೊಂದಿಸಬೇಕು ಎಂಬ ಬಗ್ಗೆ ಇಲಾಖಾವಾರು ಮಾಹಿತಿ ಸಂಗ್ರಹಿಸಲಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಬಗ್ಗೆ ಪ್ರತಿಕ್ರಿಯಿಸಿ, ಜಿಲ್ಲೆಯಿಂದ ನಾನೊಬ್ಬನೇ ಸಚಿವನಾಗಿರುವುದರಿಂದ ಬಳ್ಳಾರಿ ಉಸ್ತುವಾರಿ ಸಿಗುವ ವಿಶ್ವಾಸವಿದೆ. ಅಂತಿಮವಾಗಿ ಇದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು. ಅವರು ಯಾವುದೇ ನಿರ್ಧಾರ ತೆಗೆದುಕೊಂಡರೂ ನಾವು ಬದ್ಧ ಎಂದು ಹೇಳಿದರು.
‘ಅಹಂಕಾರದ ಪರಮಾವಧಿ! ಕಾಂಗ್ರೆಸ್ ಸರಕಾರಕ್ಕೆ ಕೇಸರಿ ಎಂದರೆ ದ್ವೇಷ, ಶತ್ರುಭಾವ!’
ಸಿಎಂ ಸಿದ್ದರಾಮಯ್ಯ ಘೋಷಿಸಿದ 5 ಗ್ಯಾರಂಟಿಗಳು ಯಾವುದು..? ಅದರ ನಿಯಮಗಳೇನು..?
ಮಹಿಳಾ ಕುಸ್ತಿಪಟುಗಳ ಹೋರಾಟಕ್ಕೆ ಬೆಂಬಲಿಸಿ, ಅಪರಾಧಿಗೆ ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ