Saturday, April 19, 2025

Latest Posts

‘ಕಳೆದ ಬಾರಿ ಬಂದಾಗ ಮೊಟ್ಟೆ ಎಸೆದಿದ್ದರು, ಈ ಬಾರಿ ಹೂವಿನ ಸುರಿಮಳೆ ಸುರಿಸಿದ್ದಾರೆ’

- Advertisement -

Political News:ಕಳೆದ ಬಾರಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವ ಮುನ್ನ ವಿರೋಧ ಪಕ್ಷದ ನಾಯಕರಾಗಿದ್ದಾಗ, ಕೊಡಗಿಗೆ ಹೋಗಿದ್ದಾಗ ಅವರ ಮೇಲೆ ಮೊಟ್ಟೆ ಎಸೆದಿದ್ದರು. ಈ ಬಾರಿ ಅವರಿಗೆ ಹೂವಿನ ಸುರಿಮಳೆ ಗಯ್ಯಲಾಗಿದೆ. ಈ ಬಗ್ಗೆ ಸ್ಮರಿಸಿ ಸಿಎಂ ಟ್ವೀಟ್ ಮಾಡಿದ್ದಾರೆ.

ವಿರೋಧ ಪಕ್ಷದ ನಾಯಕನಾಗಿ ಕೊಡಗಿಗೆ ಬಂದಿದ್ದಾಗ ಕೆಲವು ಕಿಡಿಗೇಡಿಗಳು ನನ್ನ ಮೇಲೆ ಮೊಟ್ಟೆ ಎಸೆದಿದ್ದರು. ಮುಖ್ಯಮಂತ್ರಿಯಾಗಿ ಇಂದು ಬಂದಾಗ ಕೊಡಗಿನ‌ ಸಮಸ್ತ ಸಜ್ಜನ ಜನಸಮೂಹ ಪ್ರೀತಿಯ ಹೂಮಳೆಯಲ್ಲಿ ನನ್ನನ್ನು ಮುಳುಗಿಸಿದೆ. ಇದು ಕೊಡಗಿನ ಸಜ್ಜನರ ಗೆಲುವು, ಇದೇ ಪ್ರಜಾಪ್ರಭುತ್ವದ ಸೌಂದರ್ಯ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಬಳಿಕ ಕೊಡಗಿನಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ್ದು, ಬಿಜೆಪಿ ಮತ್ತು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಾವು ತಂದ ಗ್ಯಾರಂಟಿಗಳನ್ನು ಮೋದಿಯವರು ಆಡಿಕೊಂಡರು. ಜಾರಿಗೆ ತಂದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದರು. ಈಗ ಅದೇ ಮೋದಿಯವರೇ ನಮ್ಮ ಗ್ಯಾರಂಟಿ ಕಾರ್ಯಕ್ರಮಗಳನ್ನು ಕಾಪಿ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ಆರ್ಥಿಕವಾಗಿ ಇನ್ನೂ ಸದೃಢವಾಗಿದೆ ಎಂದು ಸಿಎಂ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಅವಧಿಯಲ್ಲಿ ದೇಶದ ಸಾಲ 173 ಲಕ್ಷ ಕೋಟಿಗೆ ಏರಿಕೆಯಾಗಿದೆ. ಕಳೆದ 10 ವರ್ಷಗಳ ಮೋದಿ ಅವಧಿಯಲ್ಲಿ 120 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುವ ನೈತಿಕ ಹಕ್ಕು ಬಿಜೆಪಿಗೆ ಇಲ್ಲ. ಏಕೆಂದರೆ ದೇಶದಲ್ಲಿರುವ ಎಲ್ಲಾ ಪ್ರತಿಷ್ಠಿತ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಅಣೆಕಟ್ಟುಗಳು ಆಗಿದ್ದು ಬಿಜೆಪಿಯೇತರ ಕಾಂಗ್ರೆಸ್ ಮತ್ತು ಇತರೆ ಸರ್ಕಾರಗಳ ಅವಧಿಯಲ್ಲಿ ನಿರ್ಮಾಣಗೊಂಡವು. ನಿಮ್ಮ ಅವಧಿಯಲ್ಲಿ ಏನು ನಿರ್ಮಾಣ ಮಾಡಿದ್ದೀರಿ ಮೋದಿ ಅವರೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ರಲ್ಲಾ ಮೋದಿಯವರೇ. ಮಾಡಿದ್ರಾ? ಎಲ್ಲಿ 20 ಕೋಟಿ ಉದ್ಯೋಗ ? ಅಡುಗೆ ಅನಿಲ, ಪೆಟ್ರೋಲ್ ಡೀಸೆಲ್, ಗೊಬ್ಬರ, ಕಾಳು ಬೇಳೆ, ಅಡುಗೆ ಎಣ್ಣೆ ಬೆಲೆ ಕಡಿಮೆ ಆಗುತ್ತೆ ಅಂದ್ರಲ್ಲಾ , ಕಡಿಮೆ ಮಾಡಿದ್ರಾ ಮೋದಿಯವರೇ?ದೇಶದ ಸಾಲ ತೀರಿಸಿ ಬಿಡ್ತೀನಿ ಅಂದ್ರಲ್ಲಾ ತೀರಿದೆಯಾ? ನೀವು ಬರುವ ಮೊದಲು ದೇಶದ ಸಾಲ 53 ಲಕ್ಷ ಕೋಟಿ ಸಾಲ ಇತ್ತು. ನಿಮ್ಮ ಹತ್ತು ವರ್ಷಗಳಲ್ಲಿ ದೇಶದ ಸಾಲ 173 ಲಕ್ಷ ಕೋಟಿ ಆಗಿದೆ. ನಿಮ್ಮೊಬ್ಬರ ಅವಧಿಯಲ್ಲಿ 120 ಲಕ್ಷ ಕೋಟಿ ಮಾಡಿದ್ದೀರಿ. ಇದೆನಾ ನಿಮ್ಮ ಸಾಧನೆ? ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಲ್ಲಾದರೂ ಜಾರಿಯಾಗಿದೆಯಾ? ಸಣ್ಣ ಉದಾಹರಣೆ ಇದ್ದರೆ ಹೇಳಿ. ಅಚ್ಛೇ ದಿನ್ ಆಯೆಗಾ ಎಂದಿರಿ? ಕಹಾಂ ಹೈ ಅಚ್ಛೆ ದಿನ್ ಮೋದೀಜಿ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮಂಡಲ್ ಕಮಿಷನ್ ವರದಿ ಹಿಂದುಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸಿದ್ದು ಪ್ರಧಾನಿಗಳಾಗಿದ್ದ ವಿ.ಪಿ.ಸಿಂಗ್ ಮತ್ತು ನರಸಿಂಹರಾಯರು. ನಿಮ್ಮ‌ಸಾಧನೆ ಏನು? ಸಾಮಾಜಿಕ ನ್ಯಾಯ, ಸಂವಿಧಾನ, ಜಾತ್ಯತೀತತೆ, ಮೀಸಲಾತಿ ಪರವಾಗಿ ಯಾವತ್ತೂ ಮಾತನಾಡದ ನೀವು, ಈ ಬಗ್ಗೆ ಯಾವ ಕಾರ್ಯಕ್ರಮಗಳನ್ನು ನಿಮ್ಮ ಅವಧಿಯಲ್ಲಿ ಕೊಟ್ಟಿದ್ದೀರಿ?ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬಿಜೆಪಿ ಪಕ್ಷದವರು ತಮ್ಮ ಪ್ರಣಾಳಿಕೆಗಳಲ್ಲಿ ಕೊಟ್ಟ ಆಶ್ವಾಸನೆಗಳಲ್ಲಿ ಶೇ10 ರಷ್ಟನ್ನೂ ಜಾರಿ ಮಾಡಲೇ ಇಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಕೊಟ್ಟ ಮಾತಿನಂತೆ ನಡೆದುಕೊಂಡು ಜನರ ಋಣ ತೀರಿಸಿದ್ದೇವೆ. ಇದನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಬೇಕು. ನಾಡಿನ ಯುವಕರಿಗೆ ಉದ್ಯೋಗ ನೀಡದೆ, ಕೇವಲ ಯುವ ಸಮೂಹವನ್ನು, ವಿದ್ಯಾರ್ಥಿ ಸಮೂಹವನ್ನು ಭಾವನಾತ್ಮಕವಾಗಿ ಕೆರಳಿಸಿ ಅವರ ಬದುಕಿನ ಜೊತೆ ಚೆಲ್ಲಾಟ ಆಡಿದ್ದಾರೆ. ಈ ಕಾರಣಕ್ಕಾಗಿ ಜನತೆ ಬಿಜೆಪಿಯನ್ನು ತಿರಸ್ಕರಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

Latest Posts

Don't Miss