ಹುಬ್ಬಳ್ಳಿ: ಎನ್ಡಿಎ ಮೈತ್ರಿಕೂಟದ ಕೇಂದ್ರ ಸರ್ಕಾರ ಕಿಚಡಿ ಸರ್ಕಾರವಾಗಿದೆ. ಈ ಸರ್ಕಾರಕ್ಕೆ ಹೆಚ್ಚು ಆಯುಷ್ಯವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ಭವಿಷ್ಯ ನುಡಿದಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಕಡೆಗೆ ಚಂದ್ರಬಾಬು ನಾಯ್ಡು, ಮತ್ತೊಂದು ಕಡೆಗೆ ನಿತೀಶ್ ಕುಮಾರ ಅವರ ಸಹಕಾರದಿಂದ ಸರ್ಕಾರ ನಡೆಯುತ್ತಿದೆ. ಈ ಸರ್ಕಾರದಿಂದ ದೇಶದ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ಇಂಡಿಯಾ ಮೈತ್ರಿಕೂಟ ದೇಶದಲ್ಲಿ ಸಂಚಲನ ಉಂಟುಮಾಡಿದೆ. ಜನರು ನಮಗೆ ಆರ್ಶೀವಾದ ಮಾಡಿದ್ದಾರೆ ಎಂದಿದ್ದಾರೆ.
ಸದ್ಯ ಲೋಕಸಭಾ ಚುನಾವಣೆ ಮುಗದಿದೆ. ಹೀಗಾಗಿ ರಾಜ್ಯದಲ್ಲಿ ಮೂರು ಉಪಚುನಾವಣೆಗಳು ನಡೆಯಬೇಕಿದೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷ ಸಿದ್ದತೆ ನಡೆಸಿದೆ. ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಇದರ ಜೊತೆಗೆ ಬರುವ ಜಿಪಂ, ತಾಪಂ ಸೇರಿದಂತೆ ಎಲ್ಲ ಚುನಾವಣೆಯಲ್ಲಿ ಕಾಂಗ್ರೆಸ್ ಸಿದ್ದತೆ ಕೈಗೊಂಡಿದೆ ಎಂದರು.
ಗ್ಯಾರಂಟಿ ನಿಲ್ಲಿಸಲು ಬಿಜೆಪಿ ಹೋರಾಟ: ಬಿಜೆಪಿಯವರು ಇದೀಗ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮಾಡಿದನ್ನು ಖಂಡಿಸಿ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಅವರಿಗೆ ನಾಚಿಕೆ ಆಗಬೇಕು. ಈ ಹಿಂದೆ ದಿನನಿತ್ಯದ ಬೆಲೆ ಏರಿಕೆ ಆದಾಗ ಒಂದು ಪ್ರತಿಭಟನೆ ಮಾಡಲಿಲ್ಲ. ಇವರ ಹೋರಾಟ ಜನರ ಪರವಾಗಲ್ಲ, ಕಾಂಗ್ರೆಸ್ ಗ್ಯಾರಂಟಿಗಳನ್ನು ನಿಲ್ಲಿಸಲು ಎಂದರು.
ಕಾಂಗ್ರೆಸ್ ನೀಡಿದ ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಗ್ಯಾರಂಟಿಗಳು ನಮ್ಮ ಸರ್ಕಾರದ ಬದ್ದತೆ, ನಮ್ಮ ಸಂಕಲ್ಪವಾಗಿದೆ ಎಂದು ತಿಳಿಸಿದರು.
ಜನಾರ್ದನ ರೆಡ್ಡಿಯೊರ್ವ ಅಯೋಗ್ಯ: ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯಲು ನಾಲಾಯಕ್ ಎಂದಿರುವ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ವಿರುದ್ದ ಕಿಡಿಕಾರಿದ ಸಲೀಂ ಅಹ್ಮದ್, ಜನಾರ್ದನ ರೆಡ್ಡಿಯೊರ್ವ ಅಯೋಗ್ಯ, ಅವರು ಸಾರ್ವಜನಿಕವಾಗಿ ಕ್ಷಮೆಕೇಳಬೇಕೆಂದು ಆಗ್ರಹಿಸಿದರು.
ಇದೇ ವೇಳೆ ಶಿಗ್ಗಾಂವಿ ವಿಧಾನಸಭಾ ಮತ ಕ್ಷೇತ್ರದ ಉಪಚುನಾವಣೆಗೆ ನೀವು ಒಬ್ಬ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ, ನಾನು ಈಗಾಗಲೇ ವಿಧಾನ ಪರಿಷತ್ ಸದಸ್ಯನಾಗಿದ್ದೇನೆ. ಮೂರು ಕ್ಷೇತ್ರದಲ್ಲಿ ವೀಕ್ಷಕರು ಬರತ್ತಾರೆ. ಅವರು ವರದಿ ತಯಾರಿಸತ್ತಾರೆ. ವರಿಷ್ಠರು ಏನು ನಿರ್ಣಯ ತೆಗೆದುಕೊಳ್ಳತ್ತಾರೆ ಅದಕ್ಕೆ ನಾನು ಬದ್ದ ಎಂದರು.

