ಸೀಜ್ ಆಗಿ ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಕಂತೆ, ಕಂತೆ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಮಾಜಿ ಶಿಕ್ಷಣ ಸಚಿವ ದಿವಂಗತ ಗೋವಿಂದೇಗೌಡರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಸಂಬಂಧ, ಸಾಂಗ್ಲಿ ಪೊಲೀಸರ ನೆರವು ಪಡೆದು ನೇಪಾಳಿ ಗ್ಯಾಂಗ್ ಅನ್ನು ಬಂಧಿಸಲಾಗಿತ್ತು.
ಈ ವೇಳೆ ಆರೋಪಿಗಳು ಎಸ್ಕೇಪ್ ಆಗಲು ಬಳಸಿದ್ದ ಕಾರನ್ನು ಸೀಜ್ ಮಾಡಲಾಗಿತ್ತು. ನ್ಯಾಯಾಲಯ ಕಾರನ್ನು ರಿಲೀಸ್ ಮಾಡುವಂತೆ ಆದೇಶಿಸಿದೆ. ಈ ಹಿನ್ನೆಲೆ ಕಾರನ್ನು ಪರಿಶೀಲಿಸುವಾಗ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿದೆ.
ಪರಿಶೀಲನೆ ವೇಳೆ ಕಾರಿನ ಸೀಟ್ ಅಡಿಯಲ್ಲಿ 595 ಗ್ರಾಂ ಚಿನ್ನ, 589 ಗ್ರಾಂ ಬೆಳ್ಳಿ, 3,41,150 ರೂ. ಹಣ ಪತ್ತೆಯಾಗಿದೆ. ವಶಕ್ಕೆ ಪಡೆಯಲಾದ ಹಣ ಮತ್ತು ವಸ್ತುಗಳ ಮೌಲ್ಯ ಕೋಟಿಗೂ ಅಧಿಕ ಎನ್ನಲಾಗಿದೆ. ಕಳ್ಳತನವಾಗಿದ್ದ ಮೌಲ್ಯಕ್ಕಿಂತ ಅಧಿಕ ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿದೆ. ಆಶ್ವರ್ಯ ಅಂದ್ರೆ ಕಳೆದ 1 ತಿಂಗಳಿನಿಂದ, ಠಾಣೆಯಲ್ಲೇ ಕಾರ್ ಇದ್ದರೂ, ಚಿನ್ನಾಭರಣ ಇರುವ ಬಗ್ಗೆ ಸಣ್ಣ ಸುಳಿವು ಸಿಕ್ಕಿರಲಿಲ್ಲ.
ಆಗಸ್ಟ್ 21ರಂದು ಹರಂದೂರು ಗ್ರಾಮದ ಮಣಿಪುರ ಎಸ್ಟೇಟ್ ಮಾಲೀಕ ಹೆಚ್.ಜಿ. ವೆಂಕಟೇಶ್ ಮನೆಯಲ್ಲಿ ಕಳ್ಳತನ ನಡೆದಿತ್ತು. 6 ಲಕ್ಷ ನಗದು ಮತ್ತು 37,50,000 ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕದ್ದು ಆರೋಪಿಗಳು ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಆರೋಪಿಗಳಿಗೆ ಬಲೆ ಬೀಸಿದ್ದ ಪೊಲೀಸರು, ಸಾಂಗ್ಲಿಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದರು. ನೇಪಾಳದ ರಾಜೇಂದ್ರ, ಏಕೇಂದ್ರ ಕುಟಲ್ ಬದ್ವಾಲ್, ಕರಂ ಸಿಂಗ್ ಬಹಾದ್ದೂರ್ ಎಂಬುವರನ್ನು ಅರೆಸ್ಟ್ ಮಾಡಿ, ಒಂದೂವರೆ ಕೋಟಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳು ಮತ್ತು ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನ ಜಪ್ತಿ ಮಾಡಿದ್ದರು.

