Political News: ಕೇಂದ್ರದಲ್ಲಿರುವ ಮೋದಿ ಸರ್ಕಾರಕ್ಕೆ ಪ್ರಬಲ ಪೈಪೋಟಿ ನೀಡುವ ನಿಟ್ಟಿನಲ್ಲಿ ಗುಜರಾತ್ನಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಕಾಂಗ್ರೆಸ್ ನಾಯಕರು ಸಂಕಲ್ಪ ತೊಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಮುಂಬರಲಿರುವ ಚುನಾವಣೆಗೆ ಸಿದ್ದರಾಗುವಂತೆ ಕಾರ್ಯಕರ್ತರಿಗೆ ಸಂದೇಶ ರವಾನೆಯಾಗಿದೆ. ಅಲ್ಲದೆ ಪ್ರಮುಖವಾಗಿ ಮೋದಿ ಸರ್ಕಾರದ ಅವಧಿಯಲ್ಲಿ ಸಂವಿಧಾನದ ಮೇಲೆ ನಿರಂತರವಾಗಿ ದಾಳಿ ನಡೆಯುತ್ತಿದೆ. ಇದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಹೋರಾಟ ನಡೆಸಲು ಒಮ್ಮತದ ಅಭಿಪ್ರಾಯಕ್ಕೆ ಬರಲಾಗಿದೆ.
ಎರಡನೇ ಸ್ವಾತಂತ್ರ್ಯ ಹೋರಾಟ..!
ಇನ್ನೂ ಇದೇ ವಿಚಾರವಾಗಿ ಎಐಸಿಸಿ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ, ಕೇಂದ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ದೇಶದಲ್ಲಿ ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕು. ಬಿಜೆಪಿಯ ಸರ್ಕಾರ ಬ್ರಿಟಿಷ್ ಅಡಳಿತದಂತೆಯೇ ಮುನ್ನಡೆಯುತ್ತಿದೆ, ಅಲ್ಲದೆ 11 ವರ್ಷದ ಈ ಮೋದಿ ನೇತೃತ್ವದ ಸರ್ಕಾರದಲ್ಲಿ ಸಂವಿಧಾನವನ್ನೇ ಗುರಿಯಾಗಿಸಿಕೊಂಡು ದಾಳಿ ಮಾಡಲಾಗುತ್ತಿದೆ. ಇಷ್ಟೇ ಅಲ್ಲದೆ ತಮ್ಮ ವಿರುದ್ಧ ಮಾತನಾಡುವವರನ್ನು ಕೇಂದ್ರಿಯ ತನಿಖಾ ಸಂಸ್ಥೆಗಳನ್ನು ಬಳಸಿ ಹೆದರಿಸಲಾಗುತ್ತಿದೆ. ಇದಕ್ಕೆ ಇನ್ನು ಮುಂದೆ ಕಡಿವಾಣ ಬೀಳಬೇಕಿದೆ ಎಂದು ಗುಡುಗಿದ್ದಾರೆ.
ಅಲ್ಲದೆ ಮುಖ್ಯವಾಗಿ ತಮ್ಮ ವಿರುದ್ಧ ಪ್ರತಿಭಟಿಸುವ ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ನಮ್ಮ ನಾಯಕ ರಾಹುಲ್ ಗಾಂಧಿಯವರಿಗೆ ಲೋಕಸಭೆಯಲ್ಲಿ ಮಾತನಾಡಲು ಬಿಡುತ್ತಿಲ್ಲ. ಈ ಸರ್ಕಾರವನ್ನು ಕಿತ್ತೊಗೆಯಲು ಎಲ್ಲರೂ ಹೋರಾಟ ನಡೆಸಬೇಕಿದೆ ಎಂದು ಖರ್ಗೆ ಗುಡುಗಿದ್ದಾರೆ.
ಕೆಲಸ ಮಾಡಿ ಇಲ್ಲ ರಿಟೈರ್ ಆಗಿ..
ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ನೆರವಾಗದವರು ಸ್ವಯಂ ವಿಶ್ರಾಂತಿ ಪಡೆಯಲಿ. ಪಕ್ಷದಲ್ಲಿ ಯಾವುದೇ ಜವಾಬ್ದಾರಿ ನಿಭಾಯಿಸದವರು ನಿವೃತ್ತಿ ಪಡೆಯಲಿ ಎಂದು ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ತಳಮಟ್ಟದಲ್ಲಿ ಪಕ್ಷ ಸಂಘಟಿಸಲು ಜಿಲ್ಲಾಧ್ಯಕ್ಷರ ಪಾತ್ರ ಮುಖ್ಯವಾಗಿದೆ. ಹೀಗಾಗಿ ಎಐಸಿಸಿ ಮಾರ್ಗಸೂಚಿಯಲ್ಲಿರುವಂತೆ ಜಿಲ್ಲಾಧ್ಯಕ್ಷರನ್ನು ನಿಷ್ಪಕ್ಷಪಾತವಾಗಿ ಹಾಗೂ ಕಟ್ಟುನಿಟ್ಟಾಗಿರುವಂತೆ ಆಯ್ಕೆ ಮಾಡಬೇಕಿದೆ. ಅಲ್ಲದೆ ಹೀಗೆ ನೇಮಕವಾದವರು 1 ವರ್ಷದೊಳಗೆ ಅರ್ಹರನ್ನು ಸೇರ್ಪಡೆ ಮಾಡಿಕೊಂಡು ಬೂತ್, ಬ್ಲಾಕ್, ಮಂಡಲ ಹಾಗೂ ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸಬೇಕೆಂದು ಸೂಚನೆ ನೀಡಿದ್ದಾರೆ. ಇನ್ನೂ ಭವಿಷ್ಯದಲ್ಲಿ ಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳಲ್ಲಿ ಜಿಲ್ಲಾಧ್ಯಕ್ಷರ ಪಾತ್ರ ಮುಖ್ಯವಾಗಲಿದೆ. ಅಲ್ಲದೆ ಅಭ್ಯರ್ಥಿಗಳ ಆಯ್ಕೆಯಲ್ಲಿಯೂ ಅವರು ಭಾಗಿಯಾಗಲಿದ್ದಾರೆ ಎಂದು ಖರ್ಗೆ ತಿಳಿಸಿದ್ದಾರೆ.