ಬೆಂಗಳೂರು: ನಿವೃತ್ತ ಮುಖ್ಯ ಕಾರ್ಯದರ್ಶಿ, ಮಾಜಿ ಸಚಿವ ಡಾ.ಜೆ.ಅಲೆಕ್ಸಾಂಡರ್ (83) ಶುಕ್ರವಾರ ನಗರದಲ್ಲಿ ನಿಧನರಾದರು.
ನಗರದಲ್ಲಿಯೇ ಶನಿವಾರ (ಜ.15) ಅಂತ್ಯಕ್ರಿಯೆ ನಡೆಯಲಿದೆ. ಎಸ್.ಎಂ.ಕೃಷ್ಣ ಸಂಪುಟದಲ್ಲಿ ಪ್ರವಾಸೋದ್ಯಮ ಸಚಿವರಾಗಿದ್ದ ಅಲೆಕ್ಸಾಂಡರ್, ಅಂದಿನ ಭಾರತೀನಗರ ಕ್ಷೇತ್ರದ ಶಾಸಕರಾಗಿದ್ದರು. ಮುಖ್ಯ ಕಾರ್ಯದರ್ಶಿಯಾಗುವ ಮೊದಲು ರಾಜ್ಯದ ಎಲ್ಲಾ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಏಕೈಕ ಅಧಿಕಾರಿ ಎಂಬ ಶ್ರೇಯ ಅವರದ್ದಾಗಿತ್ತು. ಅನಾರೋಗ್ಯದಿಂದಾಗಿ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾದರು.
ಕೇರಳ ಮೂಲದ ಅಲೆಕ್ಸಾಂಡರ್ ಐಎಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಆರಂಭಿಸಿದ್ದರು. ನಂತರ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತರಾದರು. ಅನಂತರ ರಾಜ್ಯ ರಾಜಕಾರಣ ಪ್ರವೇಶ ಮಾಡಿ, ಕಾಂಗ್ರೆಸ್ ಪಕ್ಷದಲ್ಲಿ ಕೆಲ ಸಮಯ ಕೆಲಸ ಮಾಡಿದ್ದ ಇವರು ದಲಿತ, ಅಲ್ಪಸಂಖ್ಯಾತ ಹಾಗೂ ಹಿಂದುಳಿದವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ಇಬ್ಬರು ಮಕ್ಕಳು ಹಾಗೂ ನಾಲ್ವರು ಮೊಮ್ಮಕ್ಕಳಿದ್ದಾರೆ.