ಬೆಂಗಳೂರು : ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರದಲ್ಲಿ ಶಾಸಕರು ಹಾಗೂ ಸಚಿವರ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದವು. ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರ ನಡುವೆ ಸ್ಫರ್ಧೆ ಏರ್ಪಟ್ಟಿತ್ತು. ಈ ಮೂಲಕ ವಿಮಾನ ನಿಲ್ದಾಣದ ಜಾಗದ ವಿಚಾರ ಭಾರಿ ಚರ್ಚೆಯಾಗಿತ್ತು.
ಆದರೆ ಈ ಎಲ್ಲದರ ನಡುವೆಯೇ ರಾಜ್ಯ ಸರ್ಕಾರವು ಬೆಂಗಳೂರಿನ ಜನರಿಗೆ ಸಿಹಿ ನೀಡಿದ್ದು, ಈಗಾಗಲೇ ಏರ್ಪೋರ್ಟ್ ನಿರ್ಮಾಣಕ್ಕೆ ಸ್ಥಳದ ಆಯ್ಕೆಯಾಗಿದೆ ಎಂದು ಹೇಳಿದೆ. ಅಲ್ಲದೆ ಕೇಂದ್ರ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಪ್ರಸ್ತಾವನೆಯನ್ನೂ ಸಲ್ಲಿಸಲಾಗಿದೆ ಎಂದು ತಿಳಿಸಿದೆ.
ಇನ್ನೂ ರಾಜ್ಯ ಸರ್ಕಾರದ ಪ್ರಸ್ತಾವನೆಯಲ್ಲಿ ಪ್ರಮುಖವಾಗಿ ಮೂರು ಸ್ಥಳಗಳನ್ನು ಆಯ್ಕೆ ಮಾಡಿ ಕಳುಹಿಸಲಾಗಿದೆ. ಆದರೆ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಹುತೇಕ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿಯೇ ಆಗಲಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಪ್ರಸ್ತಾವನೆ ಸಲ್ಲಿಕೆಯ 15 ದಿನಗಳೊಳಗಾಗಿ ಕೇಂದ್ರ ವಿಮಾನ ನಿಲ್ದಾಣ ಪ್ರಾಧಿಕಾರವು ಸ್ಥಳವನ್ನು ಫೈನಲ್ ಮಾಡುವ ಲಕ್ಷಣಗಳು ದಟ್ಟವಾಗಿದ್ದವು. ಆದರೆ ಸ್ಥಳ ನಿಗದಿಯ ಬಗ್ಗೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಕೈ ನಾಯಕರಲ್ಲಿಯೇ ಪೈಪೋಟಿ ಮುಂದುವರೆದಿದೆ.
ಈಗಾಗಲೇ ಎರಡನೇ ವಿಮಾನ ನಿಲ್ದಾಣ ಬಿಡದಿ ಅಥವಾ ಹಾರೋಹಳ್ಳಿಯಲ್ಲಿ ನಿರ್ಮಾಣವಾಗಬೇಕೆಂದು ಪಟ್ಟು ಹಿಡಿದು ಡಿಸಿಎಂ ಡಿಕೆ ಶಿವಕುಮಾರ್ ತಮ್ಮದೇ ಆದ ರೀತಿಯಲ್ಲಿ ಪ್ರಯತ್ನಗಳನ್ನು ನಡೆಸಿದ್ದಾರೆ. ಅಲ್ಲದೆ ಹೊಸ ಏರ್ಪೋರ್ಟ್ ತುಮಕೂರಿನಲ್ಲಿಯೇ ಆಗಬೇಕೆಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಬೇಡಿಕೆ ಇಟ್ಟಿದ್ದಾರೆ. ಈ ನಡುವೆಯೇ ಟಿ.ಬಿ. ಜಯಚಂದ್ರ ಸೇರಿದಂತೆ ಹಲವು ಶಾಸಕರು ಶಿರಾದಲ್ಲಿಯೇ ತಲೆ ಎತ್ತಬೇಕೆಂದು ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಒತ್ತಡ ಹೇರಿದ್ದರು.
ರಾಜ್ಯ ಕಾಂಗ್ರೆಸ್ ನಾಯಕರ ಕಿತ್ತಾಟ ಗಮನಿಸಿದ್ದ ಸರ್ಕಾರ ಕೇಂದ್ರ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಕರೆಯಿಸಿ ಸ್ಥಳಗಳ ಪರಿಶೀಲನೆಯನ್ನು ಮಾಡಿತ್ತು. ಆದರೆ ನಾಯಕರ ಪೈಪೋಟಿಯಿಂದ ಇದುವರೆಗೂ ಅದರ ಬಗ್ಗೆ ಸೂಕ್ತ ನಿರ್ಧಾರಕ್ಕೆ ಬರಲಾಗಿಲ್ಲ. ಆದರೆ ಮುಂಬರುವ ಜುಲೈ 21 ರಂದು ಹಾಗೂ 22 ರಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರನ್ನು ಭೇಟಿಯಾಗಿ ವಿಮಾನ ನಿಲ್ದಾಣದ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ.