ರಾಜಧಾನಿ ಬೆಂಗಳೂರಿನಲ್ಲಿ ಸದ್ದುಮಾಡಿದ ಬಿಕ್ಲು ಶಿವ ಕೊಲೆ ಪ್ರಕರಣವು ರಾಜಧಾನಿಯಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಈಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಮತ್ತೊಮ್ಮೆ ಸಂಕಷ್ಟ ಸುತ್ತಿಕೊಂಡಿದೆ. ಸದ್ಯ ಬಂಧನದಿಂದ ರಕ್ಷಣೆ ಪಡೆದಿರುವ ಭೈರತಿ ಬಸವರಾಜ್ಗೆ ಸಂಕಷ್ಟ ಎದುರಾಗಿದೆ. ಈ ಸಂಬಂಧ ವಿಚಾರಣೆಗಾಗಿ ಕರ್ನಾಟಕ ಹೈಕೋರ್ಟ್ ಅಕ್ಟೋಬರ್ 23ಕ್ಕೆ ಅಂತಿಮ ವಿಚಾರಣೆಯನ್ನು ನಿಗದಿಪಡಿಸಿದೆ.
ಹೈಕೋರ್ಟ್ ಪೀಠದ ನ್ಯಾ. ಸುನಿಲ್ ದತ್ ಯಾದವ್ ನೇತೃತ್ವದಲ್ಲಿ ನಡೆದ ವಿಚಾರಣೆ ನಡೆದಿದೆ. ತನಿಖಾ ಸಂಸ್ಥೆಗಳು ಸ್ವತಂತ್ರವಾಗಿ ತಮ್ಮ ಕಾರ್ಯನಿರ್ವಹಣೆಯನ್ನು ಮುಂದುವರೆಸಬೇಕು ಎಂದು ತೀರ್ಪು ನೀಡಿದೆ.
ಭೈರತಿ ಬಸವರಾಜ್ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ದಾರೆ.
ಪೊಲೀಸರು ಈ ಪ್ರಕರಣದಲ್ಲಿ ತಪ್ಪಾಗಿ ಕೋಕಾ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ ಎಂದು ಆರೋಪಿಸಿದ್ದಾರೆ. ಸಂಘಟಿತ ಅಪರಾಧಕ್ಕೆ ಮಾತ್ರ ಕೋಕಾ ಕಾಯ್ದೆ ಜಾರಿಗೆ ತರುವಂತೆ ಇರುವ ಕಾರಣ, ಮಧ್ಯಂತರ ರಕ್ಷಣೆ ತೆರವುಗೊಳಿಸಿದರೆ, ನಿರೀಕ್ಷಣಾ ಜಾಮೀನು ನೀಡಲಾಗುವುದಿಲ್ಲ ಎಂದು ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.
ಜೊತೆಗೆ, ರಾಜಕೀಯ ದ್ವೇಷದಿಂದ ಪೊಲೀಸ್ ಕ್ರಮ ಕೈಗೊಂಡಿದ್ದಾರೆ ಎನ್ನುವ ಆರೋಪವೂ ಮಾಡಿದ್ದಾರೆ. ಸ್ವತಂತ್ರ ತನಿಖಾ ಸಂಸ್ಥೆಯಿಂದ ಪ್ರಕರಣದ ತನಿಖೆ ನಡೆಸಬೇಕೆಂದು ಅವರು ಸೂಚಿಸಿದ್ದಾರೆ. ಹೀಗಾಗಿ ಮಧ್ಯಂತರ ರಕ್ಷಣೆ ತೆರವುಗೊಳಿಸದಂತೆ ಮನವಿ ಮಾಡಿದರು.
ಇನ್ನು ಭೈರತಿ ಪರ ವಕೀಲರ ವಾದಕ್ಕೆ ಎಸ್ಪಿಪಿ ಬಿ.ಎನ್.ಜಗದೀಶ್ ಆಕ್ಷೇಪ ವ್ಯಕ್ತಪಡಿಸಿದರು. ತನಿಖೆಗೆ ಹಾಜರಾದ ವೇಳೆ ಭೈರತಿ ಬಸವರಾಜು ಸುಳ್ಳು ಮಾಹಿತಿ ನೀಡಿದ್ದಾರೆ. ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕಿದೆ. ಈ ಪ್ರಕರಣದಲ್ಲಿ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ ಎಂದರು.
ವರದಿ : ಲಾವಣ್ಯ ಅನಿಗೋಳ

