ಸ್ಮಾರ್ಟ್ ಮೀಟರ್ ಟೆಂಡರ್ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಕೆಲವರ ವಿರುದ್ಧ ದಾಖಲಾದ ಖಾಸಗಿ ದೂರುಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಬಿಜೆಪಿ ನಾಯಕರಿಂದ ಸಲ್ಲಿಸಲ್ಪಟ್ಟ ಈ ಪ್ರಕರಣದಲ್ಲಿ, ನ್ಯಾಯಮೂರ್ತಿ M.I ಅರುಣ್ ಅಧ್ಯಕ್ಷತೆಯ ಹೈಕೋರ್ಟ್ ಪೀಠವು ದೂರು ಮುಂದುವರಿಯಲು ಆಧಾರವಿಲ್ಲ ಎಂದು ಅದನ್ನು ವಜಾಗೊಳಿಸುವ ಆದೇಶ ಹೊರಡಿಸಿದೆ.
ಇಂಧನ ಇಲಾಖೆಯ ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಭ್ರಷ್ಟಾಚಾರ ಮತ್ತು ಅವ್ಯವಹಾರ ನಡೆದಿದೆ ಎಂದು ಬಿಜೆಪಿ ಆರೋಪಿಸಿತ್ತು. ಇತರೆ ಅರ್ಹ ಕಂಪನಿಗಳನ್ನು ಪಕ್ಕಕ್ಕೆ ಸರಿಸಿ ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್ಗೆ ಟೆಂಡರ್ ನೀಡಲಾಗಿದೆ. ಟೆಂಡರ್ ಪ್ರಕ್ರಿಯೆ ದುರುದ್ದೇಶಪೂರ್ವಕವಾಗಿ ನಡೆಸಲಾಗಿದೆ ಎಂದು ಆಪಾದನೆ ಕೇಳಿಬಂದಿತ್ತು.
ಈ ಕಂಪನಿಗಾಗಿ ಇತರೆ ಕಂಪನಿಗಳು ಟೆಂಡರ್ನಲ್ಲಿ ಭಾಗವಹಿಸದಂತೆ ನೋಡಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಬೇರೆ ರಾಜ್ಯಗಳಲ್ಲಿ 900 ರೂ.ಗೆ ಸಿಗುವ ಸ್ಮಾರ್ಟ್ ಮೀಟರ್ ಅನ್ನು 5 ಸಾವಿರದಿಂದ 10 ಸಾವಿರ ರೂ.ಗೆ ಗ್ರಾಹಕರಿಗೆ ನೀಡಲಾಗುತ್ತಿದೆ. ಹೀಗಾಗಿ ಇದೊಂದು ದೊಡ್ಡ ಹಗರಣ ಎಂದು ಆರೋಪಿಸಲಾಗಿತ್ತು.
ಸ್ಮಾರ್ಟ್ ಮೀಟರ್ ಟೆಂಡರ್ ಸುಮಾರ್ 10 ಸಾವಿರ ಕೋಟಿ ರೂ. ಮೊತ್ತದ್ದಾಗಿರುವ ಕಾರಣ ಜಾಗತಿಕ ಟೆಂಡರ್ ಕರೆಯಬೇಕಿತ್ತು. ಆದರೆ ಕೇವಲ 354 ಕೋಟಿ ರೂ. ವ್ಯವಹಾರ ನಡೆಸುವ ರಾಜಶ್ರೀ ಎಲೆಕ್ಟ್ರಿಕಲ್ಸ್ಗೆ ಟೆಂಡರ್ ನೀಡಲಾಗಿದೆ. 10 ವರ್ಷಕ್ಕೆ 5,296 ಕೋಟಿ ರೂ.ಗೆ ನೀಡಲಾಗಿರುವ ಟೆಂಡರ್ ಅನ್ನು ಬೇಕೆಂದೇ 997 ಕೋಟಿ ರೂ. ಟೆಂಡರ್ ಎಂಬಂತೆ ಬಿಂಬಿಸಲಾಗಿದೆ.
ಬೆಸ್ಕಾಂ ವ್ಯಾಪ್ತಿಗೆ ಮಾತ್ರ ಈ ಟೆಂಡರ್ ಅನ್ವಯವಾದರೂ ಇತರೆ ಎಸ್ಕಾಂಗಳಿಗೂ ಇದೇ ಸ್ಮಾರ್ಟ್ ಮೀಟರ್ ಖರೀದಿಸಿರುವಂತೆ ಸೂಚಿಸಲಾಗಿದೆ. ಇದು ಸಂಪೂರ್ಣ ಕಾನೂನು ಬಾಹಿರ. ಕೇಂದ್ರದ ಆರ್ಡಿಎಸ್ಎಸ್ ಯೋಜನೆಯಡಿ 900 ರೂ.ಗೆ ಸಿಗುವ ಮೀಟರ್ ಅನ್ನು 5 ಸಾವಿರದಿಂದ 8,800 ರೂ.ಗೆ ಗ್ರಾಹಕರು ಖರೀದಿಸಬೇಕಾಗಿದೆ. ಇದಕ್ಕೆಲ್ಲಾ ಬೆಸ್ಕಾಂ ಅಧ್ಯಕ್ಷ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಇತರೆ ಅಧಿಕಾರಿಗಳೇ ಹೊಣೆ ಎಂದು ಬಿಜೆಪಿ ಆರೋಪ ಮಾಡಿತ್ತು.
ವರದಿ : ಲಾವಣ್ಯ ಅನಿಗೋಳ

