ರಾಜ್ಯ ಕಾಂಗ್ರೆಸ್ ನಲ್ಲಿ ಅನೇಕ ಊಹಾಪೋಹಗಳಿಗೆ ಹರಿದಾಡುತ್ತಿವೆ. ಈ ಮದ್ಯೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ‘ಬ್ರೇಕ್ಫಾಸ್ಟ್ ಮೀಟಿಂಗ್’ ಬಗ್ಗೆ ತೆರೆ ಎಳೆದಿದ್ದಾರೆ. ಡಿಕೆಶಿ ತಮ್ಮ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಯಾವುದೇ ಬಣ ರಾಜಕೀಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ‘ಬ್ರೇಕ್ಫಾಸ್ಟ್ ಮೀಟಿಂಗ್’ ಕುರಿತಾಗಿ ಕೆಲವು ಮಾಧ್ಯಮಗಳು ವರದಿ ಮಾಡಿದ್ದ ಗುಂಪುಗಾರಿಕೆಯ ಸುದ್ದಿಗಳನ್ನು ಅವರು ತಳ್ಳಿಹಾಕಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ನಡೆದ ಕೆಂಗಲ್ ಹನುಮಂತಯ್ಯ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ನಾವು ಇಬ್ಬರೂ ‘ಬ್ರದರ್ಸ್’ ತರ ಸೌಹಾರ್ದಯುತವಾಗಿ ಕೆಲಸ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಬಣ ರಾಜಕೀಯ ಎನ್ನುವುದೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕಳೆದ 16-17 ವರ್ಷಗಳಿಂದ ನಾವು ಒಟ್ಟಿಗೆ ಕೆಲಸ ಮಾಡಿದ್ದೇವೆ. ನಾವು ಒಂದೇ ಕುಟುಂಬದಂತೆ. ಇಡೀ ಪಕ್ಷಕ್ಕೆ ಬೆಂಬಲವಾಗಿ ಒಂದೇ ತಂಡದಂತೆ ಕಾರ್ಯನಿರ್ವಹಿಸುತ್ತಿದ್ದೇವೆ. ನಮ್ಮಲ್ಲಿ ಯಾವುದೇ ಗುಂಪು ಇರುವ ಪ್ರಶ್ನೆಯೇ ಇಲ್ಲ. 140 ಶಾಸಕರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಕೆಲಸ ನಾವು ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.
ರಾಜ್ಯದ ಮಹತ್ವದ ಯೋಜನೆಗಳ ಕುರಿತು ಮಾತನಾಡಿದ ಅವರು, ವಿಧಾನಸೌಧ ನಿರ್ಮಿಸಿದ ಹನುಮಂತಯ್ಯ, ವಿಕಾಸಸೌಧ ಕಟ್ಟಿಸಿದ S.M. ಕೃಷ್ಣ ಮತ್ತು ಬೆಂಗಳೂರನ್ನು ಕಟ್ಟಿದ ಕೆಂಪೇಗೌಡರು ಇವರಂತೆ ನಾವೂ ಅಧಿಕಾರದಲ್ಲಿದ್ದಾಗ ಶಾಶ್ವತ ಸಾಕ್ಷಿಗಳನ್ನು ಬಿಟ್ಟು ಹೋಗುವ ಕೆಲಸ ಮಾಡಬೇಕು ಎಂದು ಅಭಿಪ್ರಾಯಪಟ್ಟರು.
ಇದೇ ವೇಳೆ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ತಮ್ಮ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಡಿಕೆಶಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ‘ಕೇಂದ್ರ ಸರ್ಕಾರ ನಮ್ಮ ನಾಯಕರಿಗೆ ಕಿರುಕುಳ ಕೊಡುತ್ತಿದೆ. ಈ ಪ್ರಕರಣವನ್ನೇ ಮುಂದಿಟ್ಟುಕೊಂಡು ಟಾರ್ಗೆಟ್ ಮಾಡಲಾಗುತ್ತಿದೆ. ಇದೊಂದು ರಾಜಕೀಯ ಕಿರುಕುಳ.
ನಮ್ಮ ನಾಯಕರು ಯಾವುದೇ ಕಾರಣಕ್ಕೂ ಹೆದರುವುದಿಲ್ಲ, ಎದುರಿಸುತ್ತಾರೆ. ಚುನಾವಣೆಯಲ್ಲಿ ಎದುರಿಸಲಿ, ಹೀಗೆ ಕಿರುಕುಳ ಕೊಡುವುದು ಸರಿಯಲ್ಲ’ ಎಂದು ಖಂಡಿಸಿದರು. ಸರ್ವಪಕ್ಷ ಸಭೆಯಲ್ಲಿ ಸಿಎಂ ಮತ್ತು ಡಿಸಿಎಂ ಭಾಗಿ ವಿಚಾರದ ಕುರಿತು, ‘ನಾನು ಹೋಗಬೇಕು ಅಂತ ಮಾಡಿದ್ದೇನೆ. ನಾನು ಮುಖ್ಯಮಂತ್ರಿಯವರ ಜೊತೆ ಮಾತನಾಡಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ’ ಎಂದು ತಿಳಿಸಿದರು.
ವರದಿ : ಲಾವಣ್ಯ ಅನಿಗೋಳ

