www.karnatakatv.net : ದಸರಾ ಹಬ್ಬಕ್ಕೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಕೆಲಸ ಮಾಡುತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯಲ್ಲಿ ಜಾರಿಗೆ ತಂದ ಹೊಸ ಯೋಜನೆಗಳ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, “ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆಸಲ್ಲಿಸುವ ಅರ್ಚಕರು ಹಾಗೂ ದೇವಾಲಯ ನೌಕರರು ಆರೋಗ್ಯ ಸಮಸ್ಯೆಗೆ ಒಳಗಾದರೆ ಅವರಿಗೆ ರಕ್ಷಣೆ ಒದಗಿಸಲು ವಿಮಾ ಯೋಜನೆ ಜಾರಿಗೆ ತರಲಾಗಿದೆ. ಅರ್ಚಕರ ಆರೋಗ್ಯ ರಕ್ಷಣೆಗೆ ವಿನೂತನ ವಿಮಾ ಯೋಜನೆ ಜಾರಿಗೊಳಿಸಿದ್ದು, ಇಲಾಖೆ ನೌಕರರಿಗೆ ವಿಮೆ ಜಾರಿಗೆ ತರಲು ತೀರ್ಮಾನಿಸಿದ್ದೇವೆ. ಅದರಿಂದ ಮುಜರಾಯಿ ಇಲಾಖೆಯ ಸುಮಾರು 37 ಸಾವಿರ ಸಿಬ್ಬಂದಿಗೆ ಪ್ರಯೋಜನವಾಗಲಿದೆ,” ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
“ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಧಾರ್ಮಿಕ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಹಾಗೂ ಅರ್ಚಕರಿಗೆ 6ನೇ ವೇತನ ಆಯೋಗ ಒದಗಿಸುವ ಬೇಡಿಕೆ ಇತ್ತು. ಅದರಂತೆ ಅರ್ಚಕರ ಬಹಳ ದಿನಗಳ ಬೇಡಿಕೆಯನ್ನು ಒದಗಿಸಲಾಗಿದೆ. ನಾನು ಇಲಾಖೆ ಜವಾಬ್ದಾರಿ ವಹಿಸಿಕೊಂಡ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ತ್ವರಿತಗತಿಯಲ್ಲಿ ಅರ್ಚರಿಕರಿಗೆ 6ನೇ ವೇತನ ಆಯೋಗದಂತೆ ವೇತನ ದೊರೆಯುವಂತೆ ಮಾಡಿದ್ದೇವೆ.” ಎಂದು ಹೇಳಿದ್ದಾರೆ.