Political News: ರಾಜ್ಯ ಸರ್ಕಾರ ಹಿಂದೂಗಳನ್ನು ಗುರಿಯಾಗಿಸಿಕೊಂಡಿದ್ದು, ಹಿಂದೂಗಳ ಗುರಿಯಾಗಿಸಲು ವಿಶೇಷ ಕಾರ್ಯಪಡೆ ರಚಿಸಿದೆ ಎಂದು ಬಿಜೆಪಿ ಕಿಡಿಕಾರಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ದಕ್ಷಿಣ ಕನ್ನಡದಲ್ಲಿ ಹಿಂದೂ ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ಕಾರ್ಯಪಡೆ ರಚಿಸಲಾಗಿದೆ.ರಾಜ್ಯ ಸರ್ಕಾರ ಹಿಂದೂಗಳ ಗುರಿಯಾಗಿಸಿಕೊಂಡಿದ್ದು, ಹಿಂದೂ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲು ವಿಶೇಷ ಕಾರ್ಯಪಡೆಯನ್ನೇ ರಚಿಸಿದೆ. ಈ ಕಾರ್ಯಪಡೆ ಕೋಮುವಾದದ ವಿರುದ್ಧವಲ್ಲ, ಹಿಂದೂಗಳ ವಿರುದ್ಧವಾಗಿದೆ ಎಂದು ಕಿಡಿ ಕಾರಿದ್ದಾರೆ.
ಇದು ಹೀಗೆಯೇ ಮುಂದುವರೆದರೆ ಬೀದಿಗಿಳಿದು ಪ್ರತಿಭಟಿಸುತ್ತೇವೆ..
ದಕ್ಷಿಣ ಕನ್ನಡದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಆದ್ಯತೆಯ ಮೇರೆಗೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಈ ಅಧಿಕಾರಿಗಳು ಘಟನೆಗಳು ನಡೆದ ಬಹಳ ಸಮಯದ ನಂತರ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ. ಸುಳ್ಳು ಆರೋಪಗಳನ್ನು ಮಾಡಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ. ಇದು ಹೀಗೆಯೇ ಮುಂದುವರೆದರೆ ಬೀದಿಗಿಳಿದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಮುಸ್ಲಿಮರ ಒತ್ತಡಕ್ಕೆ ಮಣಿದು ಹಿಂದೂಗಳ ಮೇಲೆ ಕೇಸ್..
ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕಾಂಗ್ರೆಸ್ ಪಕ್ಷದಿಂದ ಕರಾವಳಿ ಭಾಗಕ್ಕೆ ಹಣ ಬರುತ್ತಿಲ್ಲ. ಕಾಂಗ್ರೆಸ್ನ ಭಿಕ್ಷೆಯಿಂದ ಅಲ್ಲಿನ ಜನರು ಬದುಕುತ್ತಿಲ್ಲ. ಜನರ ಹಣದಲ್ಲೇ ಕಾಂಗ್ರೆಸ್ ನಾಯಕರು ಬದುಕುತ್ತಿದ್ದಾರೆ. ಶಿವಕುಮಾರ್ ಕರಾವಳಿ ಜನರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ, ಮುಸ್ಲಿಂ ಸಂಘಟನೆಗಳು ಮತ್ತು ನಾಯಕರು ರಾಜ್ಯ ಸರ್ಕಾರವನ್ನು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ, ಹೀಗಾಗಿ, ಅವರ ಒತ್ತಡಕ್ಕೆ ಮಣಿದು ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ. ಹಿಂದೂ ಕಾರ್ಯಕರ್ತರನ್ನು ಗಡೀಪಾರು ಮಾಡುತ್ತಿದ್ದಾರೆ. ಹಿಂದುತ್ವ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಹೇಳಿದ್ದಾರೆ.
ಮುಸ್ಲಿಂ ಓಲೈಕೆಯ ರಾಜಕೀಯಕ್ಕಾಗಿ ಹಿಂದೂ ಕಾರ್ಯಕರ್ತರಿಗೆ ಕಿರುಕುಳ..
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರೇ, ಕರ್ನಾಟಕವನ್ನು ಮತ್ತೊಂದು ಪಶ್ಚಿಮ ಬಂಗಾಳ ಮಾಡಲು ಹೊರಟಿದ್ದೀರಾ? ಪ್ರಜಾಪ್ರಭುತ್ವದ ಸರ್ಕಾರವೊಂದು ತನ್ನ ನಾಗರಿಕರನ್ನು ನಡೆಸಿಕೊಳ್ಳುವ ಪರಿ ಇದೆಯೇ? ನಿಮ್ಮ ಅಸಮರ್ಥತೆ ಹಾಗೂ ದುರ್ಬಲ ಕಾನೂನು ಸುವ್ಯವಸ್ಥೆಯ ಪರಿಣಾಮದಿಂದ ರಾಜ್ಯದಲ್ಲಿ ಕುಕೃತ್ಯಗಳು ನಡೆಯುತ್ತಿವೆ. ಈ ಪ್ರಕರಣಗಳಲ್ಲಿ ಮುಸ್ಲಿಂ ಓಲೈಕೆಯ ರಾಜಕೀಯ ಅಜೆಂಡಾ ಈಡೇರಿಸಿಕೊಳ್ಳಲು, ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡುವುದನ್ನು ಕಾಂಗ್ರೆಸ್ ಸರ್ಕಾರ ತಕ್ಷಣವೇ ನಿಲ್ಲಿಸಬೇಕೆಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಎಲ್ಲ ಕಲಾವಿದರು ಕನ್ನಡದ ಪರವಾಗಿ ಮಾತನಾಡಬೇಕು..
ಕನ್ನಡ ಭಾಷೆ ತಮಿಳಿನಿಂದ ಬಂದಿದೆ ಎಂದ ಕಮಲ್ ಹಾಸನ್ ವಿರುದ್ದವೂ ಕಿಡಿಕಾರಿದ ಅ, ಕಮಲ್ ಹಾಸನ್ ಅವರ ಯಾವುದೇ ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ನೀಡಬಾರದು. ಕನ್ನಡದ ವಿಚಾರಕ್ಕೆ ಬಂದಾಗ ಎಲ್ಲರೂ ಸ್ಪಷ್ಟವಾಗಿರಬೇಕು. ಕನ್ನಡದ ಎಲ್ಲ ಕಲಾವಿದರು ಕನ್ನಡದ ಪರವಾಗಿ ಮಾತಾಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ