Dharwad News: ಭಾರತದೆಲ್ಲೆಡೆ 78ನೇ ಸ್ವಾತಂತ್ರ ದಿನದ ಸಂಭ್ರಮ ಮನೆ ಮಾಡಿದೆ. ಎಲ್ಲೆಡೆ ಧ್ವಜಾರೋಹಣ ಮಾಡಿ, ರಾಷ್ಟ್ರಗೀತೆ ಹಾಡಿ, ಭಾರತೀಯರು ಸಂಭ್ರಮಿಸಿದ್ದಾರೆ.
ಪೇಡಾ ನಗರಿ ಧಾರವಾಡದಲ್ಲಿಯೂ ಸ್ವಾತಂತ್ರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಧಾರವಾಡದ ಆರ್ ಎನ್ ಶೆಟ್ಟಿ ಮೈದಾನದಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗಿದ್ದು, ಉಸ್ತುವಾರಿ ಸಚಿವ ಸಂತೋಷ್ ಲಾಡ್ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ ಪರೇಡ್ ಮೂಲಕ ಪೊಲೀಸ್ ತಂಡಗಳಿಂದ ದ್ವಜ ನಮನ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮಕ್ಕೆ ಡಿಸಿ ದಿವ್ಯ ಪ್ರಭು ಸೇರಿ ಜಿಪಂ ಸಿಇಒ ಸೇರಿ ಎಲ್ಲ ಅಧಿಕಾರಿಗಳು ಹಾಗೂ ಪೊಲೀಸ್ ಕಮಿಷನರ್ ಭಾಗಿಯಾಗಿದ್ದರು.
ಇನ್ನೊಂದೆಡೆ ಹುಬ್ಬಳ್ಳಿಯ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿದ್ದು, ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಧ್ವಜಾರೋಹಣ ಮಾಡಲಾಯಿತು. ಪಾಲಿಕೆ ಆಯುಕ್ತ ಈಶ್ವರ್ ಉಳ್ಳಾಗಡ್ಡಿ ಧ್ವಜಾರೋಹಣ ಮಾಡಿದ್ದು, ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಭಾಗಿಯಾಗಿದ್ದರು.
ಡಾ. ಬಿ ಆರ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿಜೀ ಅವರ ಭಾವಚಿತ್ರಕ್ಕೆ ಗೌರವ ಸಮರ್ಪಣೆ ಮಾಡಿದ್ದು, ಮುಖಂಡರು, ಅಧಿಕಾರಿಗಳಿಂದ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.