Mandya News: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಆಶೀರ್ವಾದದೊಂದಿಗೆ ರಾಜ್ಯ ಚುಂಚಾದ್ರಿ ಮಹಿಳಾ ಪ್ರತಿಷ್ಠಾನ, ಮಾತೃ ಮಿಲನ ಕ್ರೀಡೆ ಹಾಗೂ ಸಾಂಸ್ಕೃತಿಕ ಸಂಘ ಮತ್ತು ವಿಶ್ವ ಒಕ್ಕಲಿಗರ ಮಹಿಳಾ ವೇದಿಕೆಯ ಸಹಯೋಗದೊಂದಿಗೆ ಇದೇ ಏಪ್ರಿಲ್ 25 ಮತ್ತು 26 ರಂದು ʼಚುಂಚಾದ್ರಿ ಉತ್ಸವ 2025ʼ ಅನ್ನು ಆಯೋಜಿಸಲಾಗಿದೆ. ಎರಡು ದಿನಗಳ ಈ ಕಾರ್ಯಕ್ರಮದಲ್ಲಿ ಮಹಿಳೆಯರಿಗಾಗಿಯೇ ವಿಶೇಷ ಸಾಂಪ್ರದಾಯಿಕ ಕ್ರೀಡೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಮಹಿಳೆಯರಿಗೆ ಸರಕಾರದಿಂದ ಸಿಗಬಹುದಾದ ಸವಲತ್ತುಗಳ ಕುರಿತಾದ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.
ಕಾರ್ಯಕ್ರಮದ ವಿವರ:
ನಗರದ ಮಹಾಲಕ್ಷ್ಮೀಪುರಂನ ಬಿಜಿಎಸ್ ಇಂಟರ್ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಏಪ್ರಿಲ್ 25ರ ಶುಕ್ರವಾರದಂದು ಬೆಳಗ್ಗೆ 10 ಗಂಟೆಗೆ ಕ್ರೀಡೋತ್ಸವ ಉದ್ಘಾಟನಾ ಕಾರ್ಯಕ್ರಮವಿದ್ದು, ಪೂಜ್ಯ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯವಹಿಸಲಿದ್ದಾರೆ. ಉದ್ಘಾಟನೆಯನ್ನು ಶ್ರೀಮತಿ ಶಾಲಿನಿ ರಜನೀಶ್, ಭಾ.ಆ.ಸೇ (ಮುಖ್ಯ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ) ಮಾಡಲಿದ್ದಾರೆ. ಶ್ರೀ ಗೋಪಾಲಯ್ಯ (ಮಾಜಿ ಸಚಿವರು, ಶಾಸಕರು, ಮಹಾಲಕ್ಷ್ಮೀಪುರ) ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದಾರೆ.
ಏಪ್ರಿಲ್ 26ರ ಶನಿವಾರದಂದು ಬೆಳಗ್ಗೆ 10 ಗಂಟೆಗೆ ಸಾಂಸ್ಕೃತಿಕೋತ್ಸವ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಶ್ರೀಮತಿ ಹೇಮಲತಾ ಗೋಪಾಲಯ್ಯ (ಮಾಜಿ ಉಪಮಹಾಪೌರರು, ಬೃ.ಬೆಂ.ಮ.ಪಾ) ಅವರು ಅಧ್ಯಕ್ಷತೆವಹಿಸಲಿದ್ದಾರೆ ಮತ್ತು ಶ್ರೀಮತಿ ಧನಲಕ್ಷ್ಮಿ ಚೆಲುವರಾಯಸ್ವಾಮಿ (ಸಮಾಜ ಸೇವಕರು) ಅವರು ಉದ್ಘಾಟನೆ ಮಾಡಲಿದ್ದಾರೆ. ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪಿಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ದಿವ್ಯಸಾನಿಧ್ಯ ಹಾಗೂ ಸತ್ಸಂಗ ಕಾರ್ಯಕ್ರಮ ಜರುಗಲಿದೆ. ಈ ಕಾರ್ಯಕ್ರಮಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಮತ್ತು ಬೆಂಗಳೂರಿನ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿ ಇರಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ರಾಜ್ಯ ಸಚಿವರಾದ ಶ್ರೀಮತಿ ಶೋಭಾ ಕರಂದ್ಲಾಜೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಳ್ಕರ್ ಅವರು ನಡೆಸಿಕೊಡಲಿದ್ದಾರೆ.
ಕಾರ್ಯಕ್ರಮದ ವಿಶೇಷ
ಸ್ತ್ರೀ ಸಬಲೀಕರಣವನ್ನು ಸದುದ್ದೇಶವಾಗಿಟ್ಟುಕೊಂಡು ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಚುಂಚಾದ್ರಿ ಪ್ರತಿಷ್ಠಾನವು ಮಹಿಳೆಯರಿಗಾಗಿ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಕೈಗೊಂಡಿದೆ. ರಾಜ್ಯದ ಎಲ್ಲಾ ಭಾಗದ ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, 18 ರಿಂದ 70 ವರ್ಷದೊಳಗಿನ ಮಹಿಳೆಯರಿಗೆ ವೇದಿಕೆಯನ್ನು ಕಲ್ಪಿಸಲಾಗಿದೆ. ಮಹಿಳೆಯರಲ್ಲಿರುವ ಕಲೆ ಅಡುಗೆಮನೆಯೊಳಗೇ ಕೊಳೆತು ಹೋಗದಿರಲಿ, ಆಕೆಗೆ ತನ್ನದೇ ಆದ ಆಸಕ್ತಿಗಳಿವೆ, ಅವರ ಪ್ರತಿಭಾ ಪ್ರದರ್ಶನಕ್ಕೆ ವಿಶೇಷ ವೇದಿಕೆಯನ್ನು ಒದಗಿಸಬೇಕು, ಮನೆಯಿಂದ ಹೊರಬಂದು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಹಿಳೆ ತೊಡಗಿಕೊಳ್ಳುವಂತಾಗಬೇಕು ಮತ್ತು ಅದಕ್ಕಾಗಿ ಒಂದು ವೇದಿಕೆಯನ್ನು ನೀಡಬೇಕು ಎಂಬ ನಿದರ್ಶನದೊಂದಿಗೆ ಎರಡು ದಿನಗಳ ಈ ಕಾರ್ಯಕ್ರಮದಲ್ಲಿ ವಾಲಿಬಾಲ್ ಮತ್ತು ಧ್ರೋಬಾಲ್ ಆಟಗಳನ್ನು ನಡೆಸಲಾಗುತ್ತದೆ. ಮರುದಿನ ಸಾಂಸ್ಕೃತಿಕ ಸ್ಪರ್ಧೆಗಳು, ಮಹಿಳೆಯ ಸಾಂಸ್ಕೃತಿಕ ಕಲೆಗಳ ಪ್ರದರ್ಶನಕ್ಕೆ ವೇದಿಕೆಯನ್ನು ಕಲ್ಪಿಸಲಾಗಿದೆ. ವಿಜೇತರಿಗೆ ಬಹುಮಾನವನ್ನು ಕೂಡ ನೀಡಲಾಗುವುದು. ಮಹಿಳೆಯರು ಮಹಿಳೆಯರಿಗಾಗಿ ಏರ್ಪಡಿಸಲಾಗುತ್ತಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ವೇದಿಕೆಯ ಎಲ್ಲಾ ಸದಸ್ಯರು ಹಾಗೂ ರಾಜ್ಯದ ಮಹಿಳೆಯರು ಪಾಲ್ಗೊಳ್ಳಲಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರಾದ ಶ್ರೀಮತಿ ಭಾರತಿ ಶಂಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.