ಬೆಳಗಾವಿಯ ಕಾಂಗ್ರೆಸ್ ಮಹಾಧಿವೇಶನ ಮುಗಿದಿದೆ. ಸದ್ಯ ಒಂದು ಬಣ ‘ಫ್ಲೈಟ್ ಮೂಡ್’ನಲ್ಲಿ ಇರುವಾಗಲೇ ಮತ್ತೂಂದು ಬಣ ಕೆಪಿಸಿಸಿ ಅಧ್ಯಕ್ಷರು ಬದಲಾಗಬೇಕು ಎಂಬ ಸಂದೇಶವನ್ನು ಪಕ್ಷದ ಹೈಕಮಾಂಡ್ಗೆ ತಲುಪಿಸುವಲ್ಲಿ ಭಾಗಶಃ ಯಶಸ್ವಿಯಾಗಿದೆ. ಇದಕ್ಕೆ ಸಾಕ್ಷಿ ಒಂದು ದಿನದ ಹಿಂದಷ್ಟೇ ನಡೆದ ಹೊಸ ವರ್ಷಾಚರಣೆಯ ಔತಣಕೂಟ. ಆದರೂ ಇನ್ನು ಮೂರು ತಿಂಗಳ ಕಾಲ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ಸಚಿವ ಸಂಪುಟ ಪುನಾರಚನೆ ಇಲ್ಲ ಅಂತ ಹೇಳಲಾಗುತ್ತಿದೆ.
ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ಆರಂಭವಾಗಿತ್ತು. ಆದರೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಹಾಗೂ ಅಲ್ಲಿ ಪಕ್ಷದ ಸಂಘಟನೆಯ ಪುನರ್ರಚನೆ ಬಗ್ಗೆ ಕೈಗೊಂಡ ನಿರ್ಣಯದ ಅನಂತರ, ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ವಿದೇಶ ಪ್ರವಾಸದ ವೇಳೆ ನಡೆದ ಈ ಬೆಳವಣಿಗೆ ಹಲವು ರಾಜಕೀಯ ಲೆಕ್ಕಾಚಾರಗಳಿಗೆ ಇಂಬು ನೀಡಿದೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಜತೆಗೆ ಸಂಪುಟ ಪುನಾರಚನೆ ಬಗ್ಗೆಯೂ ಗಂಭೀರ ಚರ್ಚೆ ಆರಂಭವಾಗಿದೆ. ಕೆಲವರನ್ನು ಕೈಬಿಟ್ಟು, ಹಲವರನ್ನು ಸೇರಿಸಿಕೊಳ್ಳಬೇಕು ಮತ್ತೆ ಹಲವರ ಖಾತೆ ಬದಲಾವಣೆ ಕೂಡ ಆಗಬೇಕಿದೆ ಎಂದು ಸಿಎಂ ಕೂಡ ಅಭಿಪ್ರಾಯಪಟ್ಟಿದ್ದರು. ಆದರೆ ಇದೆಲ್ಲವೂ ಡಿ.ಕೆ. ಶಿವಕುಮಾರ್ ಅವರಿಗೆ ಮುಂದಿನ ಹಂತದಲ್ಲಿ ನೀಡಲಾಗುವ ಸ್ಥಾನವನ್ನು ಅವಲಂಬಿಸಿದೆ. ಸದ್ಯದ ಸ್ಥಿತಿಯಲ್ಲಿ ಸಚಿವ ಸಂಪುಟ ಪುನಾರಚನೆ ಸಾಹಸಕ್ಕೆ ಕೈಹಾಕದೆ, ಯಥಾಸ್ಥಿತಿ ಮುಂದುವರಿಸಬೇಕು ಎಂಬ ನಿಲುವು ಸಭೆಯಲ್ಲಿ ಭಾಗವಹಿಸಿದ್ದ ಬಹುತೇಕರ ಅಭಿಪ್ರಾಯ ಆಗಿತ್ತು ಎಂದು ಮೂಲಗಳು ತಿಳಿಸಿವೆ.
ಸ್ವತಃ ಹೈಕಮಾಂಡ್ ಹೇಳಿಯೇ 6 ತಿಂಗಳಾಗಿದ್ದು, ಈಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕಾಲ ಸನ್ನಿಹಿತವಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹೊಸ್ತಿಲಲ್ಲಿದ್ದು, ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಮಹತ್ವ ಪಡೆದುಕೊಂಡಿದೆ. ಹಾಗಾಗಿ ಬದಲಾದ ಸ್ಥಾನಕ್ಕೆ ತಮ್ಮ ಬಣದವರನ್ನು ತರುವ ಮೂಲಕ ಪಕ್ಷದಲ್ಲೂ ಹಿಡಿತ ಸಾಧಿಸುವ ತಂತ್ರಗಾರಿಕೆ ಸಿಎಂ ಆಪ್ತ ವಲಯದಿಂದ ಆರಂಭವಾಗಿದೆ. ಈಚೆಗೆ ಸಚಿವ ಸತೀಶ ಜಾರಕಿಹೊಳಿ ಮನೆಯಲ್ಲಿ ನಡೆದ ಔತಣಕೂಟದಲ್ಲಿ ಈ ಕುರಿತು ಗಂಭೀರ ಚರ್ಚೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಸಚಿವರ ಹೆಸರು ಮುಂಚೂಣಿಯಲ್ಲಿ ಮುಖ್ಯವಾಗಿ ಉತ್ತರ ಕರ್ನಾಟಕದ ವೀರಶೈವ- ಲಿಂಗಾಯತ ಸಮುದಾಯದ ನಾಯಕರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತರುವ ಚಿಂತನೆ ನಡೆದಿದೆ. ಸಚಿವರಾದ ಎಂ.ಬಿ. ಪಾಟೀಲ್, ಈಶ್ವರ ಖಂಡ್ರೆ ಹಾಗೂ ಪರಿಶಿಷ್ಟ ಪಂಗಡದ ಸತೀಶ್ ಜಾರಕಿಹೊಳಿ ಮತ್ತು ಕೆಎಸ್ಡಿಎಲ್ ಅಧ್ಯಕ್ಷ ಸಿ.ಎಸ್. ಅಪ್ಪಾಜಿ ನಾಡಗೌಡ ಹೆಸರು ಮುಂಚೂಣಿಯಲ್ಲಿದೆ. ಆದರೆ ಈ ಆಕಾಂಕ್ಷಿಗಳೆಲ್ಲರೂ ತಮಗೆ ಸಚಿವ ಸ್ಥಾನವೂ ಬೇಕು ಎಂಬ ವಾದ ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಡಿಕೆಶಿ ತಮ್ಮಿಂದ ತೆರವಾಗಲಿರುವ ಸ್ಥಾನಕ್ಕೆ ತಮ್ಮ ಆಪ್ತರನ್ನೇ ತಂದು ಕೂರಿಸುವ ಲೆಕ್ಕಾಚಾರದಲ್ಲಿದ್ದಾರೆ.
ಮುಂದೊಂದು ತಿಂಗಳಲ್ಲಿ ಬಜೆಟ್, ಅಧಿವೇಶನ ಅನಂತರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ ಆ ಬಳಿಕ ಸಚಿವ ಸಂಪುಟ ಪುನಾರಚನೆ ಮುನ್ನೆಲೆಗೆ ಬರಲಿದೆ. ಅಂದರೆ ಎಪ್ರಿಲ್ವರೆಗೆ ಯಥಾಸ್ಥಿತಿ ಇರಲಿದೆ ಎನ್ನಲಾಗಿದೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ನಿವಾಸದಲ್ಲಿ ಇತ್ತೀಚೆಗೆ ನಡೆದ ಔತಣಕೂಟ ಹಾಗೂ ಸಭೆ ರಾಜ್ಯ ರಾಜಕಾರಣದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿರುವ ನಡುವೆಯೇ, ಈ ಸಭೆಗೆ ಅಂತಹ ರಾಜಕೀಯ ಮಹತ್ವ ಏನಿಲ್ಲ, ಔತಣಕೂಟದಲ್ಲಿ ವಿಶೇಷ ಏನೂ ಇಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ. ಅತ್ತ ಡಿಸಿಎಂ ಡಿ.ಕೆ. ಶಿವಕುಮಾರ್ ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣವು ಇತ್ತ ಸಚಿವ ಸತೀಶ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಔತಣಕೂಟ ಸಭೆ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ. ಸ್ವಾಮಿ ಡಿ.ಕೆ. ಶಿವಕುಮಾರ್ ಅವರೇ, ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸಿದ್ದನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಅಂತ ವಿಪಕ್ಷ ನಾಯಕ ಆರ್. ಅಶೊಕ್ ವ್ಯಂಗ್ಯವಾಡಿದ್ದಾರೆ.