ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದ ಹಸಿರು ಮಾರ್ಗದಲ್ಲಿ, ಡಿ ಗ್ರೂಪ್ ನೌಕರನೊಬ್ಬ ಮಧ್ಯಾಹ್ನ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಧಾನಸೌಧದಲ್ಲಿ 35 ವರ್ಷದ ವೀರೇಶ್ ಎಂಬವರು ಡಿ ಗ್ರೂಪ್ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ಮಧ್ಯಾಹ್ನ 3.19ರ ಸುಮಾರಿಗೆ ಮೆಜೆಸ್ಟಿಕ್ ನಿಲ್ದಾಣದ ಪ್ಲಾಟ್ಫಾರ್ಮ್ 3ರಲ್ಲಿ ಹಸಿರು ಮಾರ್ಗದ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದರು. ಘಟನೆ ವೇಳೆ ಮೆಟ್ರೋ ರೈಲು ಬರುತ್ತಿದ್ದ ಸಂದರ್ಭದಲ್ಲಿಯೇ ಹಳಿಗೆ ಜಿಗಿದಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದೆ.
ಘಟನೆ ನಂತರ ತಕ್ಷಣವೇ ಮೆಟ್ರೋ ಸಿಬ್ಬಂದಿ ಮತ್ತು ಸುರಕ್ಷತಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಂಭೀರ ಗಾಯಗೊಂಡ ವೀರೇಶ್ ಅವರನ್ನ ಆ್ಯಂಬುಲೆನ್ಸ್ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದರು. ವೀರೇಶ್ ತಲೆಗೆ ತೀವ್ರವಾದ ಗಾಯವಾಗಿದೆ. ಸದ್ಯ ಅವ್ರು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಪ್ರಕಾರ ಅವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯಾಧಿಕಾರಿಗಳು ಹೇಳಿದ್ದಾರೆ.
ಘಟನೆ ತಿಳಿಯುತ್ತಿದ್ದಂತೆ ವೀರೇಶ್ ಅವರ ಕುಟುಂಬಸ್ಥರು ಆಸ್ಪತ್ರೆಗೆ ಧಾವಿಸಿದ್ದಾರೆ. ಈ ಮಧ್ಯೆ ಘಟನೆ ಕಾರಣವಾಗಿ ಕೆಲಕಾಲ ಹಸಿರು ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ನಂತರ ವೀರೇಶ್ ರಕ್ಷಣೆ ಬೆನ್ನಲ್ಲೆ ಅತ್ತ ಹಸಿರು ಮಾರ್ಗದಲ್ಲಿ ಸಂಚಾರ ಪುನಾರಂಭಗೊಳಿಸಲಾಗಿದೆ.
ಸದರಿ ಪ್ರಯಾಣಿಕನನ್ನು ರಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಯಿತು. ಈ ಸಮಯದಲ್ಲಿ ರೇಷ್ಮೆ ಸಂಸ್ಥೆ, ನ್ಯಾಷನಲ್ ಕಾಲೇಜು, ರಾಜಾಜಿನಗರ ಮತ್ತು ಮಾದಾವರ ನಡುವೆ ಶಾರ್ಟ್ ಲೂಪ್ ಸೇವೆಯನ್ನು ನಡೆಸಲಾಯಿತು. ನಂತರ ಸುಮಾರು 3 ಗಂಟೆ 47 ನಿಮಿಷಕ್ಕೆ ಸೇವೆಯನ್ನು ಪುನಃ ಆರಂಭಿಸಲಾಯಿತು ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ವರದಿ : ಲಾವಣ್ಯ ಅನಿಗೋಳ