Movie News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ಆರೋಪಿ ನಟ ದರ್ಶನ್ ಅವರು ಕೊನೆಗೂ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಬರೋಬ್ಬರಿ ನೂರು ದಿನಗಳ ಬಳಿಕ ದರ್ಶನ್ ಅವರ ಪರ ವಕೀಲರ ಕಡೆಯಿಂದ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಎರಡು ವಾರಗಳ ಹಿಂದಷ್ಟೇ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಈಗಾಗಲೇ ಪ್ರಕರಣದ ಎ೧ ಆರೋಪಿಯಾಗಿರುವ ಪವಿತ್ರಾಗೌಡ ಸೇರಿದಂತೆ ಇನ್ನಿತರೆ ಆರೋಪಿಗಳು ಜಾಮಿನಿಗೆ ಅರ್ಜಿ ಸಲ್ಲಿಸಿದ್ದಾರೆ. ಆರೆ, ಅವರೆಲ್ಲರ ಅರ್ಜಿಗಳು ತಿರಸ್ಕೃತಗೊಂಡಿವೆ. ಪ್ರಕರಣದ ಎರಡನೇ ಆರೋಪಿ ದರ್ಶನ್ ಅವರು ಈವರೆಗೆ ಜಾಮೀನು ಅರ್ಜಿ ಸಲ್ಲಿಸಿರಲಿಲ್ಲ. ಈಗ ಜಾಮೀನಿಗೆ ಅರ್ಜಿ ಹಾಕಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.
ಹಾಗೆ ನೋಡಿದರೆ, ರೇಣುಕಾಸ್ವಾಮಿ ಕೊಲೆಗೆ ಪವಿತ್ರಾ ಮತ್ತು ದರ್ಶನ್ ಅವರುಗಳೇ ನೇರ ಕಾರಣ ಎಂದು ಪೊಲೀಸರ ತನಿಖೆ ಹೇಳುತ್ತಿದೆ. ದರ್ಶನ್ ಪ್ರಭಾವದಿಂದಲೇ ಅಪಹರಣ ಮತ್ತು ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರಿಗೆ ಜಾಮೀನು ಸಿಗುವುದು ತುಸು ಕಷ್ಟ ಎನ್ನಲಾಗುತ್ತಿದೆ. ದರ್ಶನ್ಗೆ ಹತ್ಯೆ ಮಾಡುವ ಉದ್ದೇಶ ಇರಲಿಲ್ಲ, ಬುದ್ಧಿವಾದ ಹೇಳಿಕಳಿಸುವ ಯೋಚನೆ ಅವರದ್ದಾಗಿತ್ತು. ಆದರೆ, ಹಲ್ಲೆಯಿಂದ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದಾರೆ. ಅಲ್ಲದೆ ರೇಣುಕಾ ಸ್ವಾಮಿ ಅಸುನೀಗಿದಾಗ ದರ್ಶನ್ ಸ್ಥಳದಲ್ಲಿ ಇರಲಿಲ್ಲ ಎಂಬ ಮಾತುಗಳೂ ಕೇಳಿ ಬರುತ್ತಿವೆ. ಅವುಗಳ ಆಧಾರದ ಮೇಲೆ ದರ್ಶನ್ ಪರ ವಕೀಲರು ವಾದಿಸುವ ಸಾಧ್ಯತೆ ಇದೆ.
ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಇಂದು (ಶನಿವಾರ) ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ವಿಚಾರಣೆ ಸೋಮವಾರಕ್ಕೆ ಮುಂದೂಡಲಾಗಿದೆ. ಜೂನ್ 9ರಂದು ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನ್ಯಾಪ್ ಮಾಡಿ ಬೆಂಗಳೂರಿಗೆ ಕರೆತಂದು ಪಟ್ಟಣಗೆರೆ ಶೆಡ್ನಲ್ಲಿ ಹಲ್ಲೆ ಮಾಡಲಾಗಿತ್ತು. ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿ ದೇಹವನ್ನು ಸುಮ್ಮನಹಳ್ಳಿ ಮೋರಿಗೆ ಎಸೆಯಲಾಗಿತ್ತು. ಈ ಪ್ರಕರಣದಲ್ಲಿ ಜೂನ್ 11 ರಂದು ಬೆಳಿಗ್ಗೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಜನರ ಬಂಧನವಾಗಿತ್ತು. ಎಲ್ಲ ಆರೋಪಿಗಳು ಈಗ ಜೈಲಿನಲ್ಲಿದ್ದು, ವಿಚಾರಣಾಧೀನ ಕೈದಿಗಳಾಗಿದ್ದಾರೆ.