Political News: ಮಂಡ್ಯದ ಕೆಆರ್ಎಸ್ ಜಲಾಶಯ ಪ್ರಥಮ ಬಾರಿ ಜೂನ್ನಲ್ಲೇ ತುಂಬಿ ತುಳುಕುತ್ತಿದ್ದು, ಸಿಎಂ ಸಿದ್ದರಾಮ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಕಾವೇರಿ ತಾಯಿಗೆ ಬಾಗೀನ ಅರ್ಪಿಸಿದ್ದಾರೆ.
ಬಳಿಕ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ ಬಿಡುತ್ತಿದ್ದಾರೆ. ನಾನು ಮತ್ತು ಶಿವಕುಮಾರ್ ಇಬ್ಬರೂ ಒಟ್ಟಾಗಿ, ಗಟ್ಟಿಯಾಗಿದ್ದೀವಿ. ನಮ್ಮ ಸರ್ಕಾರವೂ ಐದು ವರ್ಷ ಗ್ಯಾರಂಟಿಯಾಗಿ ಗಟ್ಟಿಯಾಗಿ ಇರುತ್ತದೆ. 2028 ರಲ್ಲೂ ಗೆದ್ದು ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನೀರಾವರಿಗೆ ನಮ್ಮ ಸರ್ಕಾರ 25 ಸಾವಿರ ಕೋಟಿ ಕೊಟ್ಟಿದೆ. ಬೇರೆ ಯಾವುದಾದರೂ ಸರ್ಕಾರ ಈ ಮಟ್ಟದ ಅನುದಾನ ಕೊಟ್ಟಿತ್ತಾ? ಅಭಿವೃದ್ಧಿಗೆ ಹಣ ಇಲ್ಲ, ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಬುರುಡೆ ಬಿಡುತ್ತಿರುವ ಬಿಜೆಪಿಯವರು ನಾಡಿನ ಜನರಿಗೆ ಉತ್ತರಿಸಬೇಕು. ದಿವಾಳಿ ಆಗಿದ್ದರೆ 25 ಸಾವಿರ ಕೋಟಿ ರೂಪಾಯಿ ಎಲ್ಲಿಂದ ಬರಲು ಸಾಧ್ಯ? ಎಂದು ಸಿಎಂ ಪ್ರಶ್ನಿಸಿದ್ದಾರೆ.
ಕೃಷಿ ಪ್ರಗತಿಗಾಗಿ ವರ್ಷಕ್ಕೆ 19,000 ಸಾವಿರ ಕೋಟಿ ಹಣವನ್ನು ಪಂಪ್ ಸೆಟ್ ಸಬ್ಸಿಡಿ ರೂಪದಲ್ಲಿ ರೈತರಿಗೆ ಕೊಟ್ಟಿದ್ದೇವೆ. 92 ವರ್ಷಗಳ ಬಳಿಕ ಡ್ಯಾಂ ಜೂನ್ ತಿಂಗಳಲ್ಲೇ ಭರ್ತಿ ಆಗಿರುವ ಹಿನ್ನೆಲೆಯಲ್ಲಿ ಕೆ ಅರ್ ಎಸ್ ನಲ್ಲಿ ಸ್ಮಾರಕ ನಿರ್ಮಿಸಲಾಗುವುದು.
ಕೃಷ್ಣರಾಜಸಾಗರದ ಒಟ್ಟು 124 ಅಡಿ ಸಾಮರ್ಥ್ಯದಲ್ಲಿ 120.90 ಅಡಿ ಭರ್ತಿ ಆಗಿದೆ. ಅಣೆಕಟ್ಟೆಗೆ 49 ಟಿಎಂಸಿ ನೀರಿನ ಸಾಮರ್ಥ್ಯವಿದೆ. 193 ವರ್ಷಗಳಲ್ಲಿ 76 ಬಾರಿ ಭರ್ತಿಯಾಗಿದೆ. 2023-24 ರಲ್ಲಿ ಬರಗಾಲವಿತ್ತು. ಈ ಕಾರಣಕ್ಕೆ “ಸಿದ್ದರಾಮಯ್ಯ ಅವರ ಕಾಲುಗುಣ ಚೆನ್ನಾಗಿಲ್ಲ, ಕಾಂಗ್ರೆಸ್ ಸರ್ಕಾರದ ಕಾಲುಗುಣ ಸರಿಯಿಲ್ಲ” ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಈಗ ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಮಳೆ, ಬೆಳೆ ಉತ್ತಮವಾಗಿ ಆಗುತ್ತಿದೆ. ವಿರೋಧ ಪಕ್ಷಗಳ ಮೂಡಾತ್ಮರು ಈಗ ಏನು ಹೇಳ್ತಾರೆ? ಎಂದು ಸಿಎಂ ಪ್ರಶ್ನಿಸಿದ್ದಾರೆ.
ನಾವು ಈ ಬಾರಿ ಕಾವೇರಿ ಅಭಿವೃದ್ಧಿ ನಿಗಮಕ್ಕೆ ₹3,000 ಕೋಟಿ ಹಣ ಕೊಟ್ಟಿದ್ದೇವೆ. ಈಗ ಟೀಕಿಸುತ್ತಿರುವವರು ಅಧಿಕಾರದಲ್ಲಿದ್ದಾಗ ಕಾವೇರಿ ನಿಗಮಕ್ಕೆ ಹಣ ಕೊಡಲಿಲ್ಲ ಯಾಕೆ? ತಾಯಿ ಕಾವೇರಿಗೆ ಪೂಜೆ ಮಾಡಿ ನಾಡಿನಲ್ಲಿ ಮಳೆ, ಬೆಳೆ ಹೀಗೇ ಚನ್ನಾಗಿ ಆಗಲಿ ಎಂದು ಪ್ರಾರ್ಥಿಸಿದ್ದೇನೆ. ನಾವು ಅಧಿಕಾರದಲ್ಲಿದ್ದಾಗ ಯಾವಾಗಲಾದರೂ ರೈತರಿಗೆ ಬೀಜ, ಗೊಬ್ಬರಕ್ಕೆ ತೊಂದರೆ ಮಾಡಿದ್ದೇವಾ? ಬೀಜ ಕೇಳಿದವರಿಗೆ ಗೋಲಿಬಾರ್ ಮಾಡಿದ್ದೇವಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕಾವೇರಿ ತಾಯಿ, ಚಾಮುಂಡೇಶ್ವರಿ ತಾಯಿಯ ಕೃಪಾಕಟಾಕ್ಷದಿಂದ ರಾಜ್ಯ ಸುಭಿಕ್ಷವಾಗಿದೆ. ಎಲ್ಲಾ ಜಲಾಶಯಗಳೂ ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಲು ಆದೇಶ ನೀಡುತ್ತಿದ್ದೇನೆ ಎಂದು ಸಿಎಂ ಹೇಳಿದ್ದಾರೆ.