Dharwad News: ಧಾರವಾಡ : ಪಿಓಪಿ ವಿಗ್ರಹಗಳು ನಮ್ಮ ಕೆರೆ, ನದಿ ಮತ್ತು ಇತರೆ ಜಲಮೂಲಗಳನ್ನು ಶಾಶ್ವತವಾಗಿ ಕಲುಷಿತಗೊಳಿಸುತ್ತವೆ. ಇದರಲ್ಲಿರುವ ರಾಸಾಯನಿಕ ಬಣ್ಣಗಳು ಜಲಚರಗಳಿಗೆ ಮಾರಕವಾಗಿದ್ದು, ಇವು ನೀರಿನಲ್ಲಿ ಸುಲಭವಾಗಿ ಕರಗುವುದಿಲ್ಲ. ಈ ಕಾರಣದಿಂದ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದಂತೆ ಮತ್ತು ಸರ್ಕಾರದ ನಿರ್ದೇಶನದಂತೆ, ಜಿಲ್ಲೆಯಲ್ಲಿ ಪಿಓಪಿ ವಿಗ್ರಹಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಪರಿಸರಕ್ಕೆ ಹಾನಿಕಾರಕವಾದ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಓಪಿ) ವಿಗ್ರಹಗಳ ಬಳಕೆಯನ್ನು ತಡೆಗಟ್ಟಲು ಜಿಲ್ಲಾಡಳಿತವು ಕಠಿಣ ಕ್ರಮಗಳನ್ನು ಕೈಗೊಂಡು, ಕಾರ್ಯಾಚಣೆಯನ್ನು ಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ಹಬ್ಬ ಆಚರಿಸುವುದು ನಮ್ಮ ಸಂಸ್ಕೃತಿಯ ಹೆಮ್ಮೆ. ಆದರೆ, ಅದು ಪರಿಸರ ಸ್ನೇಹಿ ಆಗಿರಬೇಕು. ಮಣ್ಣಿನ, ನೈಸರ್ಗಿಕ ಬಣ್ಣಗಳಿಂದ ಮಾಡಿದ, ಸುಲಭವಾಗಿ ನೀರಿನಲ್ಲಿ ಕರಗುವ ಗಣೇಶನ ವಿಗ್ರಹಗಳನ್ನೇ ಪೂಜಿಸಿ. ಈಗಾಗಲೇ ಅನೇಕರು ಪರಿಸರ ಸ್ನೇಹಿ ಗಣೇಶನಿಗೆ ಆದ್ಯತೆ ನೀಡುತ್ತಿರುವುದು ಅತ್ಯಂತ ಶ್ಲಾಘನೀಯ ವಿಷಯವಾಗಿದೆ. ನಮ್ಮ ಹಬ್ಬ, ನಮ್ಮ ಪರಿಸರ, ನಮ್ಮ ಜವಾಬ್ದಾರಿ. ಜಿಲ್ಲಾಡಳಿತದ ಈ ಕಾರ್ಯವು ಸಾರ್ವಜನಿಕರ ಸಹಕಾರವಿಲ್ಲದೆ ಸಂಪೂರ್ಣ ಯಶಸ್ವಿಯಾಗಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಈ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು, ಜಿಲ್ಲಾಡಳಿತವು ಪೊಲೀಸ್ ಇಲಾಖೆ, ಸ್ಥಳೀಯ ಸಂಸ್ಥೆಗಳು ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಯೋಗದೊಂದಿಗೆ ವಿಶೇಷ ತಂಡಗಳನ್ನು ರಚಿಸಿದೆ. ಈ ತಂಡಗಳು ದಿಢೀರ್ ದಾಳಿ, ಅನಿರೀಕ್ಷಿತ ಭೇಟಿ ಮೂಲಕ ಜಿಲ್ಲೆಯಾದ್ಯಂತ ಕಾರ್ಯಾಚರಣೆ ನಡೆಸಿ, ಪಿಓಪಿ ವಿಗ್ರಹಗಳನ್ನು ತಡೆಗಟ್ಟಲು ಕ್ರಮವಹಿಸಿವೆ ಎಂದು ತಿಳಿಸಿದರು.