Hubli News: ಕರ್ನಾಟಕ ಬಂದ್‌ಗೆ ಹುಬ್ಬಳ್ಳಿಯಲ್ಲಿ ನೀರಸ ಪ್ರತಿಕ್ರಿಯೆ, ಎಂದಿನಂತೆ ಜನ ಸಂಚಾರ

Hubli News: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ಗೆ ಹುಬ್ಬಳ್ಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬಹುತೇಕ ಅಂಗಡಿ-ಮುಂಗಟ್ಟುಗಳು ತೆರೆದಿದ್ದು, ವಾಹನ ಸಂಚಾರವೂ ಎಂದಿನಂತೆ ಸಾಗಿದೆ. ಹಲವು ಸಂಘಟನೆಗಳು ಬಂದ್‌ನಿಂದ ದೂರ ಉಳಿದಿವೆ. ಮತ್ತೊಂದೆಡೆ ಆಟೋ ಸಂಘಟನೆಗಳು ಕೂಡ ಬಂದ್‌ಗೆ ಬೆಂಬಲ ನೀಡಿಲ್ಲ. ಹುಬ್ಬಳ್ಳಿಯಲ್ಲಿ ಬಂದ್ ಪರಿಸ್ಥಿತಿ ಹೇಗಿತ್ತು ಅನ್ನೋದನ್ನ ತೋರಿಸ್ತೇವೆ.

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿತ್ತು. ಆದರೆ ಹುಬ್ಬಳ್ಳಿಯಲ್ಲಿ ಮಾತ್ರ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಪ್ರಮುಖ ಪ್ರದೇಶಗಳಲ್ಲಿ ಜನಜೀವನ ಎಂದಿನಂತೆ ಸಾಗಿದ್ದು, ಬಂದ್‌ನ ಯಾವುದೇ ದೊಡ್ಡ ಪರಿಣಾಮ ಕಂಡುಬಂದಿಲ್ಲ.

ಕನ್ನಡಪರ ಸಂಘಟನೆಗಳು, ದಲಿತ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಬಂದ್‌ನಿಂದ ದೂರ ಉಳಿದಿವೆ. ಕೆಲ ರೈತ ಸಂಘಟನೆಗಳು ಮಾತ್ರ ಬಂದ್‌ಗೆ ನೈತಿಕ ಬೆಂಬಲ ಸೂಚಿಸಿವೆ. ಹೀಗಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಎಂದಿನಂತೆ ಜನರ ಓಡಾಟ ಕಂಡುಬಂದಿದೆ.

ಹುಬ್ಬಳ್ಳಿಯ ಮಾರುಕಟ್ಟೆಗಳು, ಅಂಗಡಿ-ಮುಂಗಟ್ಟುಗಳು ಹಾಗೂ ವಾಣಿಜ್ಯ ಸಂಕೀರ್ಣಗಳು ಎಂದಿನಂತೆ ತೆರೆದಿವೆ. ಬಸ್‌ಗಳು ಹಾಗೂ ಖಾಸಗಿ ವಾಹನಗಳ ಸಂಚಾರದಲ್ಲೂ ಯಾವುದೇ ದೊಡ್ಡ ವ್ಯತ್ಯಯ ಕಂಡುಬಂದಿಲ್ಲ. ಸಾರ್ವಜನಿಕರು ತಮ್ಮ ದೈನಂದಿನ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಇನ್ನು ಬಂದ್‌ಗೆ ಆಟೋ ಸಂಘಟನೆಗಳ ಬೆಂಬಲವೂ ಸಿಕ್ಕಿಲ್ಲ. ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘ ಹಾಗೂ ಹುಬ್ಬಳ್ಳಿ-ಧಾರವಾಡ ಆಟೋ ರಿಕ್ಷಾ ಮಾಲೀಕರು, ಚಾಲಕರು ಸಂಘದ ಸದಸ್ಯರು ಬಂದ್‌ನಿಂದ ದೂರ ಉಳಿದಿದ್ದಾರೆ. ಕಾವೇರಿ, ಮಹದಾಯಿ ಸೇರಿದಂತೆ ರಾಜ್ಯದ ನೀರಿನ ಸಮಸ್ಯೆಗಳ ಹೋರಾಟಕ್ಕೆ ನೈತಿಕ ಬೆಂಬಲವಿದೆ. ಆದರೆ ಬಂದ್‌ನಿಂದ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬುದು ನಮ್ಮ ನಿಲುವು ಎಂದು ಸಂಘದ ಮುಖಂಡರು ತಿಳಿಸಿದ್ದಾರೆ.

ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ನಗರದ ಪ್ರಮುಖ ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಒಟ್ಟಿನಲ್ಲಿ ಕಾವೇರಿ ನೀರಿನ ವಿಚಾರವಾಗಿ ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದ್ದರೂ, ಹುಬ್ಬಳ್ಳಿಯಲ್ಲಿ ಮಾತ್ರ ಬಂದ್‌ಗೆ ನಿರೀಕ್ಷಿತ ಬೆಂಬಲ ಸಿಕ್ಕಿಲ್ಲ. ಅಂಗಡಿ-ಮುಂಗಟ್ಟುಗಳು ತೆರೆದಿದ್ದು, ವಾಹನ ಸಂಚಾರ ಹಾಗೂ ಜನಜೀವನ ಎಂದಿನಂತೆ ಮುಂದುವರಿದಿದೆ. ಕೆಲ ಸಂಘಟನೆಗಳು ಹಾಗೂ ಆಟೋ ಸಂಘಟನೆಗಳು ಬಂದ್‌ನಿಂದ ದೂರ ಉಳಿದಿದ್ದು, ಸದ್ಯ ಹುಬ್ಬಳ್ಳಿ ನಗರದಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ.

ಕ್ಯಾಮೆರಾಮ್ಯಾನ್ ಹೇಮಂತ್ ಕುಮಾರ್ ಜೊತೆ, ಸಂಗಮೇಶ್ ಸತ್ತಿಗೇರಿ, ಕರ್ನಾಟಕ ಟಿವಿ, ಹುಬ್ಬಳ್ಳಿ.

About The Author