ಸಿಎಂ ಸಿದ್ದರಾಮಯ್ಯ 77ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಮುಖ್ಯಮಂತ್ರಿಯ ಹುಟ್ಟುಹಬ್ಬಕ್ಕೆ ಹಲವಾರು ಗಣ್ಯರು, ರಾಜಕೀಯ ನಾಯಕರು ಶುಭಾಶಯಗಳನ್ನು ಕೋರುತ್ತಿದ್ದಾರೆ. ಅಭಿಮಾನಿಗಳು ಸಿದ್ದರಾಮಯ್ಯ ಅವರ ಹೆಸರಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಕರ್ನಾಟಕದ ಜನಪ್ರಿಯ ನಾಯಕರಾಗಿರುವ ಸಿದ್ದರಾಮಯ್ಯ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಪ್ರಮುಖವಾಗಿ ಡಿಸಿಎಂ ಡಿಕೆ ಶಿವಕುಮಾರ್, ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಶುಭಾಶಯದ ರೀತಿ ವಿಶೇಷವಾಗಿದೆ.
ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ವಿಶೇಷವಾಗಿ ಜನ್ಮದಿನದ ಶುಭಾಶಯ ಕೋರಿದ್ದಾರೆ. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಿಂದುಳಿದ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸುವ ಮೂಲಕ ಉತ್ತಮ ಆಡಳಿತಕ್ಕೆ ಹೆಸರುವಾಸಿಯಾಗಿದ್ದೀರಿ. ಕನ್ನಡಿಗರ ಹಿತವನ್ನು ಕಾಪಾಡಲು, ಕರ್ನಾಟಕ ಕಲ್ಯಾಣಕ್ಕಾಗಿ ನಮ್ಮ ಕೈ ಹೀಗೆ ಜೊತೆಯಾಗಿರಲಿದೆ. ದೇವರು ತಮಗೆ ಉತ್ತಮ ಆಯುರಾರೋಗ್ಯ ನೀಡಿ ಕಾಪಾಡಲಿ ಎಂದು ಶುಭ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಕೂಡ ಟ್ವೀಟರ್ ಮೂಲಕ ಸಿದ್ದರಾಮಯ್ಯಗೆ ಕನ್ನಡದಲ್ಲೆ ವಿಶೇಷವಾಗಿ ವಿಶ್ ಮಾಡಿದ್ದಾರೆ. ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಭಾಷಾ ಹಕ್ಕುಗಳನ್ನು ರಕ್ಷಿಸುವಲ್ಲಿ ಮತ್ತು ಸಾಮಾಜಿಕ ನ್ಯಾಯವನ್ನು ಮುನ್ನಡೆಸುವಲ್ಲಿ ನಿಮ್ಮ ಬಲವಾದ ಧ್ವನಿಯು ನಿಜವಾದ ಒಕ್ಕೂಟ ಮತ್ತು ಅಂತರ್ಗತ ಪ್ರಜಾಪ್ರಭುತ್ವದ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಈ ಮೌಲ್ಯಗಳು ಇಂದಿನ ಭಾರತದಲ್ಲಿ ಅಪಾರ ಮಹತ್ವವನ್ನು ಹೊಂದಿವೆ ಹಾಗೂ ತಮಿಳುನಾಡು ಮತ್ತು ಕರ್ನಾಟಕದ ಜನರು ಅವುಗಳನ್ನು ಎತ್ತಿಹಿಡಿಯುವಲ್ಲಿ ಒಟ್ಟಾಗಿ ನಿಲ್ಲುವರು. ನಿಮಗೆ ನಿರಂತರ ಶಕ್ತಿ, ಸಂತೋಷ ಮತ್ತು ದೀರ್ಘಾಯುಷ್ಯವನ್ನು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಅವರು ಕೂಡ ಟ್ವೀಟ್ ಮಾಡಿದ್ದು, ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳು. ಮುಖ್ಯಮಂತ್ರಿಗಳಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಟ್ಟಿಗೊಳಿಸುತ್ತಾ, ಜನಪರ ಕಾರ್ಯಗಳನ್ನು ಜಾರಿಗೊಳಿಸಿ ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಸಿದ್ದರಾಮಯ್ಯನವರಿಗೆ ನನ್ನ ಹೃದಯಪೂರ್ವಕ ಶುಭಾಶಯಗಳು. ನಿಮ್ಮ ಸುದೀರ್ಘ ರಾಜಕೀಯದ ಬದುಕಿನ ಅನುಭವ ಹಾಗೂ ಆಡಳಿತದಲ್ಲಿನ ಕ್ಷಮತೆ ಸಾವಿರಾರು ಜನರಿಗರ ಪ್ರೇರಣೆಯಾಗಿದೆ. ನಿಮ್ಮ ತಿಳಿವಳಿಕೆ, ನ್ಯಾಯಯುತ ಹಾದಿಯಲ್ಲಿ ಸಾಗುವ ಬದ್ದತೆ ನಾಡಿನ ಜನರ ಅಭ್ಯುದಯಕ್ಕೆ ಇನ್ನಷ್ಟು ಕೊಡುಗೆಗಳನ್ನು ನೀಡಲಿ ಎಂದು ಆಶಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ವರದಿ:ರಂಜಿತ ರೇವಣ್ಣ ನಾಟನಹಳ್ಳಿ