ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಇತಿಶ್ರೀ ಹಾಡಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಇದೀಗ 5 ನಗರ ಪಾಲಿಕೆಗಳ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಕಾಲಮಿತಿಯೊಳಗೆ ಚುನಾವಣೆ ನಡೆಸುವುದಕ್ಕೆ, ಸಿದ್ಧತೆ ಮಾಡಿಕೊಳ್ಳುವಂತೆ ಕೋರಿ, ಚುನಾವಣಾ ಆಯೋಗಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.
ಸುಪ್ರೀಂಕೋರ್ಟಿಗೆ ಅಫಿಡೆವಿಟ್ ಸಲ್ಲಿಸಿದ್ದು, ನಮಗೆ ಕಾಲಮಿತಿ ಇದೆ. ನ್ಯಾಯಾಲಯ ಕೂಡ ಒಪ್ಪಿದೆ. ನವೆಂಬರ್ 1 ರೊಳಗೆ ವಾರ್ಡ್ ಪುನರ್ ವಿಂಗಡಣೆಗೆ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು. ನವೆಂಬರ್ 30ರೊಳಗೆ ವಾರ್ಡ್ಗಳ ಮೀಸಲಾತಿ ಅಧಿಸೂಚನೆ ಹೊರಡಿಸಲಾಗುವುದು. ಇದಾದ ಬಳಿಕ ಚುನಾವಣೆ ನಡೆಯಲಿದೆ ಅಂತಾ ಡಿಸಿಎಂ ಡಿಕೆಶಿ ಸ್ಪಷ್ಟನೆ ನೀಡಿದ್ದಾರೆ.
ಈಗಾಗಲೇ ಚುನಾವಣೆ ನಡೆಸಲು ಪತ್ರ ಬರೆಯಲಾಗಿದೆ. ಅವರೂ ಕೂಡ ಅತಿ ಶೀಘ್ರದಲ್ಲೇ ಮತದಾರರ ಪಟ್ಟಿ ಸಿದ್ಧಪಡಿಸಲಿದ್ದಾರೆ. ಪಾಲಿಕೆಗಳ ಮೇಲೆ ಜಿಬಿಎ ಇರುವುದರಿಂದ, 74ನೇ ತಿದ್ದುಪಡಿಗೆ ತೊಂದರೆಯಾಗಲ್ವಾ? ನಾಳೆ ಯಾರಾದರೂ ನ್ಯಾಯಾಲಯದ ಮೊರೆ ಹೋಗಲ್ವಾ ಅನ್ನೋ ಪ್ರಶ್ನೆ ಈ ಹಿಂದೆಯೂ ಎದುರಾಗಿದ್ವು. ನ್ಯಾಯಾಲಯಗಳಲ್ಲಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರವಾಗಿದೆ. ಸುಪ್ರೀಂಕೋರ್ಟ್ ನಮ್ಮ ಅಫಿಡೆವಿಟ್ ಒಪ್ಪಿದೆ. ವಾರ್ಡ್ ಪುನರ್ವಿಂಗಡಣೆ ಬಳಿಕ ಬನ್ನಿ. ನವೆಂಬರ್ 3ರಂದು ವಿಚಾರಣೆಗೆ ಬರುವಂತೆ ಸುಪ್ರೀಂ ಸೂಚಿಸಿದೆಯಂತೆ.