ಬಿಡದಿಯಲ್ಲಿ ಶುರುವಾಯ್ತು ಮಹಾ ಹೋರಾಟ!

ಬಿಡದಿ ಸಮೀಪದ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆ ವಿರುದ್ಧ ಆಕ್ರೋಶ ತೀವ್ರವಾಗುತ್ತಿರುವ ನಡುವೆ, ಭೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ನಿಯೋಗವು ಭಾನುವಾರ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಯೋಜನೆ ಮರುಪರಿಶೀಲನೆ ನಡೆಸುವಂತೆ ಆಗ್ರಹಿಸಿತು.

‘ಬೈರಮಂಗಲ, ಕಂಚುಗಾರನಹಳ್ಳಿ ಗ್ರಾಮ ಪಂಚಾಯತ್‌ಗಳ ರೈತ ಭೂ ಹಿತರಕ್ಷಣಾ ಸಮಿತಿ’ಯ ಭಾಗವಾಗಿರುವ ರೈತರು, ಬೆಂಗಳೂರಿನಲ್ಲಿ ಡಿಸಿಎಂ ಅವರನ್ನು ಭೇಟಿ ಮಾಡಿ ಜಿಬಿಐಟಿ ಯೋಜನೆಗೆ ಸಂಬಂಧಿಸಿದಂತೆ ತಮ್ಮ ಕಳವಳಗಳನ್ನು ವ್ಯಕ್ತಪಡಿಸಿದರು. ರೈತರ ಹಕ್ಕುಗಳನ್ನು ರಕ್ಷಿಸಲು ಮನವಿಯನ್ನು ಸಲ್ಲಿಸಿದರು. ರೈತರ ಅಹವಾಲುಗಳನ್ನು ಆಲಿಸಿದ ಡಿಕೆ ಶಿವಕುಮಾರ್, “ಕಾನೂನು ಚೌಕಟ್ಟಿನೊಳಗೆ ಸಂಬಂಧಿತ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು” ಎಂದು ಭರವಸೆ ನೀಡಿದ್ದಾರೆ.

ಇದಕ್ಕೂ ಮೊದಲು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು, ಬಿಡದಿಯ GBIT ಯೋಜನೆ ವಿರುದ್ಧ ಹೋರಾಟ ಮಾಡುವುದಾಗಿ ಘೋಷಿಸಿದ್ದರು. “ರೈತರ ಜಮೀನು ಕಸಿದುಕೊಳ್ಳಲಾಗುತ್ತಿದೆ. ಇದು ಸರ್ಕಾರ ಪ್ರಾಯೋಜಿತ ಹಗರಣ” ಎಂದು ತೀವ್ರ ವಾಗ್ದಾಳಿ ನಡೆಸಿದ್ದರು. ರಾಜ್ಯ ಸಚಿವ ಸಂಪುಟವು ಏಪ್ರಿಲ್‌ನಲ್ಲಿ ಸುಮಾರು 7,481 ಎಕರೆ ಪ್ರದೇಶದಲ್ಲಿ ರೂ.18,133 ಕೋಟಿ ವೆಚ್ಚದಲ್ಲಿ ಟೌನ್‌ಶಿಪ್ ಅಭಿವೃದ್ಧಿಗೆ ಪ್ರಸ್ತಾವನೆ ಅಂಗೀಕರಿಸಿತ್ತು.

ಆದರೆ, ಈ ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ರೈತರು, ಕಳೆದ ಒಂದು ವರ್ಷಕ್ಕಿಂತ ಹೆಚ್ಚು ಕಾಲದಿಂದ ಬೈರಮಂಗಲ ಮುಖ್ಯರಸ್ತೆಯಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ. ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿರುವ ರೈತರು, ಯೋಜನೆ ಮರುಪರಿಶೀಲನೆ ಮಾಡುವಂತೆ ಒತ್ತಾಯಿಸಿದ್ದಾರೆ.

About The Author