ಜಾತಿಗಣತಿ ಸಮೀಕ್ಷೆ ಗಡುವು ವಿಸ್ತರಣೆ ಬೆನ್ನಲ್ಲೇ, ದಸರಾ ಅವಧಿಯನ್ನೂ ವಿಸ್ತರಣೆ ಮಾಡುವಂತೆ ಒತ್ತಾಯ ಕೇಳಿ ಬಂದಿದೆ. ಇದೇ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ, ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಪತ್ರ ಸಲ್ಲಿಸಿದೆ.
ಸೆಪ್ಟೆಂಬರ್ 20ರಿಂದ ಅಕ್ಟೋಬರ್ 7ರವರೆಗೆ ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ, ಜಾತಿ ಸಮೀಕ್ಷೆಗೆ ಶಿಕ್ಷಕರನ್ನು ನೇಮಿಸಲಾಗಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 5ರಿಂದ ಸಮೀಕ್ಷೆ ಪ್ರಾರಂಭವಾಗಿದೆ. ತಾಂತ್ರಿಕ ಸಮಸ್ಯೆಗಳಿಂದ ಗಣತಿ ಕಾರ್ಯ ಪೂರ್ಣಗೊಂಡಿಲ್ಲ.
ರಜಾ ಅವಧಿಯಲ್ಲೂ ಶಿಕ್ಷಕರು ದೈಹಿಕ, ಭೌದ್ಧಿಕ ಒತ್ತಡದಲ್ಲೇ ಗಣತಿ ಕಾರ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರುಗಳ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯಕ್ಕಾಗಿ ರಜೆಯ ಅವಶ್ಯಕತೆ ಇರುತ್ತದೆ. ಹೀಗಾಗಿ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ದಸರಾ ರಜೆ ಅವಧಿಯನ್ನು ಅಕ್ಟೋಬರ್ 17ರವರೆಗೆ ವಿಸ್ತರಿಸಿ. ಈ ಬಗ್ಗೆ ನಿರ್ದೇಶನ ನೀಡುವಂತೆ ರಾಜ್ಯ ಸರ್ಕಾರಕ್ಕೆ, ನೌಕರರ ಸಂಘ ಮನವಿ ಮಾಡಿದ್ದಾರೆ.