Haveri News: ಸವಣೂರು ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆ ಇದೀಗ ಪ್ರಶ್ನಾರ್ಥಕವಾಗಿದೆ. ಮಕ್ಕಳು, ವೃದ್ಧರು, ಮಹಿಳೆಯರು ಹಾಗೂ ದ್ವಿಚಕ್ರ ವಾಹನ ಸವಾರರು ಬೀದಿ ನಾಯಿಗಳ ಹಾವಳಿಯಿಂದ ಆತಂಕದಿಂದ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಬೇರೆ ತಾಲ್ಲೂಕುಗಳಿಂದ ಬೀದಿ ನಾಯಿಗಳನ್ನು ತಂದು ಸವಣೂರು ನಗರ ಹಾಗೂ ಗ್ರಾಮಗಳಲ್ಲಿ ಬಿಟ್ಟು ಹೋಗಲಾಗುತ್ತಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.
ಈ ಕುರಿತು ಜೂನ್ 23ರಂದು ನಡೆದ ಕೆಡಿಪಿ ಸಭೆಯಲ್ಲೇ ವಿಷಯ ಪ್ರಸ್ತಾಪವಾಗಿ ಚರ್ಚೆಯಾಗಿತ್ತು. ಸಕ್ಕರೆ, ಜವಳಿ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರ ಗಮನಕ್ಕೂ ವಿಷಯ ತರಲಾಗಿತ್ತು ಎನ್ನಲಾಗಿದೆ.
ಆದರೂ ಸಭೆಯಲ್ಲಿ ಚರ್ಚೆಯಾದ ಬಳಿಕವೂ ಬೀದಿ ನಾಯಿಗಳ ಹಾವಳಿ ಕಡಿಮೆಯಾಗದೆ ಮತ್ತಷ್ಟು ಹೆಚ್ಚಾಗುತ್ತಿರುವುದಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜನರ ಸುರಕ್ಷತೆಗೆ ಅಪಾಯ ಎದುರಾಗುವ ಮುನ್ನ ಪುರಸಭೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ತಕ್ಷಣ ಕ್ರಮ ಕೈಗೊಳ್ಳಬೇಕು. ಕೆಡಿಪಿ ಸಭೆಯಲ್ಲಿ ಚರ್ಚೆಯಾದ ಸಮಸ್ಯೆಗೆ ಇನ್ನಾದರೂ ಶಾಶ್ವತ ಪರಿಹಾರ ಸಿಗುತ್ತದೆಯೇ? ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.




