www.karnatakatv.net : ‘ ನಾನು ಪಕ್ಷದಲ್ಲಿಯೆ ಇರುತ್ತೇನೆ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ನಾನು ದೆಹಲಿಗೆ ಹೋಗುತ್ತೇನೆ ಎಂದು ಎಲ್ಲೂ ಹೇಳಿಲ್ಲ. ದೆಹಲಿಗೆ ಹೋಗುವುದೂ ಇಲ್ಲ ‘ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದರು.. ಹಿರಿಯರ ಮಾತಿಗೆ ಗೌರವ ಕೊಡುತ್ತೆನೆ. ಧ್ವಜಾರೋಹಣ ನಂತರ ಪುನಃ ನಾನು ಬೆಂಗಳೂರಿಗೆ ಹೋಗುತ್ತೇನೆ’ ಎಂದರು.
ನಗರದ ವೇಣುಗೋಪಾಲ ದೇವಸ್ಥಾನದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಆರ್. ಅಶೋಕ್ ಬಳಿ ಮಾತನಾಡಿದಾಗಲೂ ದೆಹಲಿಗೆ ಹೋಗುತ್ತೇನೆ ಎಂದು ಹೇಳಿಲ್ಲ. ಬಿ.ಎಸ್. ಯಡಿಯೂರಪ್ಪನವರು ಹಿರಿಯರಾಗಿರುವುದರಿಂದ ಅವರ ಆಶೀರ್ವಾದ ಪಡೆಯಲು ಹೋಗಿದ್ದೆ. ಖಾತೆ ಸಂಬಂಧ ಅವರ ಬಳಿ ಏನು ಮಾತನಾಡಿಲ್ಲ. ಯಾವುದೇ ರೀತಿಯ ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ಸಿ.ಎಂ. ಜತೆ ಚರ್ಚಿಸಿ ಬಗೆಹರಿಸಿಕೊಳ್ಳಿ ಎಂದು ಸಲಹೆ ಮಾಡಿದ್ದಾರೆ’ ಎಂದು ಹೇಳಿದರು.
‘ಹೊಸದಾಗಿ ಅಸ್ತಿತ್ವಕ್ಕೆ ಬಂದ ವಿಜಯನಗರ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡುವ ಜವಾಬ್ದಾರಿ ನನಗೆ ವಹಿಸಿದ್ದಾರೆ. ಬಳ್ಳಾರಿಯಲ್ಲಿ ಜಿಲ್ಲಾಧಿಕಾರಿ ಧ್ವಜಾರೋಹಣ ಮಾಡುತ್ತಾರೆ. ಜಿಲ್ಲೆ ರಚನೆ ಬಳಿಕ ನಡೆಯುತ್ತಿರುವ ಮೊದಲ ಸ್ವಾತಂತ್ರ್ಯ ದಿನಾಚರಣೆ ಇದು. ಈ ಸುವರ್ಣ ಗಳಿಗೆಯಲ್ಲಿ ನನಗೆ ಧ್ವಜಾರೋಹಣಕ್ಕೆ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ. ವಿಜಯನಗರ ಕ್ಷೇತ್ರದ ಜನರ ಋಣ ತೀರಿಸಲು ನನಗೆ ಆಗುವುದಿಲ್ಲ’ ಎಂದು ಸಚಿವ ಆನಂದ್ ಸಿಂಗ್ ಹೇಳಿದರು.

