ನವದೆಹಲಿ: ಅಕ್ರಮ ಹಣ ವರ್ಗಾವಣೆ ಸಂಬಂಧದ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಗೆ ದೆಹಲಿಯಲ್ಲಿನ ಜನಪ್ರತಿನಿಧಿಗಳ ಇಡಿ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ.
ಕಳೆದ ಶನಿವಾರದಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ-ಪ್ರತಿವಾದ ಆಲಿಸಿದ ನಂತ್ರ, ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ಸೇರಿದಂತೆ ಐವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು.
ಇಂದು ಈ ಸಂಬಂಧದ ಅರ್ಜಿಯ ವಿಚಾರಣೆ ನಡೆಸಿದಂತ ಇಡಿ ವಿಶೇಷ ಕೋರ್ಟ್ ನ ನ್ಯಾಯಾಧೀಶರಾದಂತ ವಿಕಾಸ ಧುಲ್ ಅವರು, ಈ ಪ್ರಕರಣದಲ್ಲಿ ಪ್ರತಿಯೊಬ್ಬರಿಗೂ ತಲಾ 1 ಲಕ್ಷ ಬಾಂಡ್ ಶೂರಿಟಿ, ಸಾಕ್ಷ್ಯ ನಾಶಪಡಿಸದಂತೆ, ದೇಶಬಿಟ್ಟು ಹೋಗದಂತೆ ಷರತ್ತು ವಿಧಿಸಿ ಜಾಮೀನು ನೀಡಿದೆ.
ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಚಿನ್ ನಾರಾಯಣ್, ಸುನೀಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ, ರಾಜೇಂದ್ರ ಎನ್ ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರಾಗಿದೆ.




