ಮೈಸೂರು : ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲಿಫ್ ನೀಡಿದೆ. ಪ್ರಕರಣದ ತನಿಖೆಗಾಗಿ ಇಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಆದರೆ ಇದೇ ವಿಚಾರಕ್ಕೆ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ, ಮುಡಾ ಪ್ರಕರಣದಲ್ಲಿ ಇಡಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆಯಷ್ಟೇ. ಆದರೆ ಇಡೀ ಪ್ರಕರಣವನಲ್ಲ ಎಂದು ತಿಳಿಸಿದ್ದಾರೆ.
ಆದರೆ ಈ ಪ್ರಕರಣದಲ್ಲಿ ವಿಚಾರಣೆಯನ್ನು ಹೊರತುಪಡಿಸಿ ಹೆಚ್ಚಿನ ತನಿಖೆ ಮುಂದುವರೆಸಬಹುದು. ಅಲ್ಲದೆ ಇರುವ ಸಾಕ್ಷ್ಯಾಧಾರಗಳನ್ನು ಇಟ್ಟುಕೊಂಡು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಬಹುದು. ಇದರಲ್ಲಿ ಕೇವಲ ವಿಚಾರಣೆಯಿಂದ ತಪ್ಪಿಸಿಕೊಳ್ಳಬಹುದು, ಆದರೆ ಪ್ರಕರಣದಿಂದ ತಪ್ಪಿಸಿಕೊಂಡಂತೆ ಆಗುವುದಿಲ್ಲ. ನೀವು ಲೋಕಾಯುಕ್ತ ಪೊಲೀಸರು ಕರೆದರೆ ಹಾಜರಾಗುತ್ತೀರಿ. ಅದೇ ಇಡಿಯವರು ಕರೆದರೆ ಕೋರ್ಟಿಗೆ ಹೋಗುತ್ತೀರಿ ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ.
ಅಂದರೆ ಲೋಕಾಯುಕ್ತದ ಮೇಲೆ ನಿಮ್ಮ ಪ್ರಭಾವ ಎಷ್ಟಿದೆ ಎನ್ನುವುದು ಇದರಿಂದಲೇ ತಿಳಿಯುತ್ತದೆ. ಆದರೆ ಒಂದಂತೂ ಸತ್ಯ, ಈ ಮುಡಾ ಪ್ರಕರಣದಿಂದ ಯಾವತ್ತೂ ಇವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ಆದೇಶದ ಕಾರಣಕ್ಕೆ ನನ್ನ ಹೋರಾಟಕ್ಕೆ ಯಾವುದೇ ಹಿನ್ನಡೆಯಾಗುವುದಿಲ್ಲ. ಈ ಪ್ರಕರಣದಲ್ಲಿ ಸಿಎಂ ಹಾಗೂ ತಪ್ಪಿತಸ್ಥರಿಗೆ ಶಿಕ್ಷೆ ಆಗೇ ಆಗುತ್ತದೆ. ನಾನು ನನ್ನ ಹೋರಾಟವನ್ನು ಹೀಗೆ ಮುಂದುವರೆಸುತ್ತೇನೆ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
ಭಾರೀ ಸದ್ದು ಮಾಡಿದ್ದ ಮುಡಾ ಕೇಸ್ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿನೋದ್ ಚಂದ್ರ ನೇತೃತ್ವದ ಪೀಠದ ಮುಂದೆ ವಿಚಾರಣೆಯಾಗಿದೆ. ಹೈಕೋರ್ಟ್ ಆದೇಶದ ವಿರುದ್ಧ ಕೇಂದ್ರ ಸರ್ಕಾರದ ಸಂಸ್ಥೆ ಸಲ್ಲಿಸಿರುವ ಅರ್ಜಿಯ ಬಗ್ಗೆ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಈ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿತು. ಈ ಮೂಲಕ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ.