ಕರ್ನಾಟಕ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಧೈರ್ಯದಿಂದ ತರಾಟೆಗೆ ತೆಗೆದುಕೊಳ್ಳಲು ಬಿಜೆಪಿಗೆ ಉತ್ತಮ ವಾಗ್ಮಿಗಳ ಕೊರತೆ ಎದುರಾಗುವ ಸಾಧ್ಯತೆ ಹೆಚ್ಚಿದೆ.
ವಿರೋಧ ಪಕ್ಷವಾದ ಬಿಜೆಪಿಯಲ್ಲಿ ಹಲವರು ನಾಯಕರ ಅನುಪಸ್ಥಿತಿ ಕಾಡೋದು ಸತ್ಯವಾಗಿದೆ. ಯಾಕಂದ್ರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಮತ್ತು ಹೆಚ್.ಡಿ.ಕುಮಾರಸ್ವಾಮಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಮಾಜಿ ಸಿಎಂ ಹೆಚ್ ಡಿಕೆ ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಶಿಗ್ಗಾಂವ್ ಶಾಸಕರಾಗಿದ್ದರೆ, ಜಗದೀಶ್ ಶೆಟ್ಟರ್ ಎಂಎಲ್ ಸಿ ಆಗಿದ್ದರು. ಚನ್ನಪಟ್ಟಣ ಶಾಸಕರಾಗಿದ್ದ ಎನ್ಡಿಎ ಮೈತ್ರಿಕೂಟದ ಜೆಡಿಎಸ್ ಮುಖಂಡ ಹೆಚ್ ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ದೆಹಲಿಗೆ ಹಾರಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ವಾಗ್ದಾಳಿ ಮಂಕಾಗುವ ಸಾಧ್ಯತೆಯೇ ಹೆಚ್ಚಿದೆ.
ಹಿರಿಯ ರಾಜಕಾರಣಿ ಬಿಎಸ್ ಯಡಿಯೂರಪ್ಪ ಈಗಾಗ್ಲೇ ರಾಜಕೀಯ ನಿವೃತ್ತಿಯತ್ತ ಹೆಜ್ಜೆ ಹಾಕಿದ್ದಾರೆ. ಎದುರಾಳಿಗಳನ್ನು ಸಮರ್ಥವಾಗಿ ಎದುರಿಸಬಲ್ಲ ಸಮರ್ಥ ವಾಗ್ಮಿಗಳಾಗಿದ್ದ ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಮತ್ತು ಸಿ.ಟಿ.ರವಿಯವರು ಈ ಬಾರಿ ಸೋತಿದ್ದಾರೆ. ಆದ್ರೆ ಸಿ.ಟಿ.ರವಿ ಅವರಿಗೆ ಈಗ ವಿಧಾನ ಪರಿಷತ್ತಿನಲ್ಲಿ ಅವಕಾಶ ಕಲ್ಪಿಸಲಾಗಿದೆ.
ಹೀಗಾಗಿ ಈ ಬಾರಿಯ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ಹಲವು ಸಮಸ್ಯೆಗಳು ಮತ್ತು ಲೋಪಗಳನ್ನು ಎತ್ತಿ ತೋರಿಸಬೇಕಾಗಿರುವ ಬಿಜೆಪಿಗೆ ಸಮಸ್ಯೆ ಎದುರಾಗುವ ಸಾಧ್ಯತೆ ಹೆಚ್ಚಿದೆ. ಇದು ರಾಜ್ಯ ಕಾಂಗ್ರೆಸ್ ಗೆ ಅನುಕೂಲವಾಗುವ ಸಾಧ್ಯತೆ ಹೆಚ್ಚಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಮೇಲೆ ಬಿಜೆಪಿ ಹೆಚ್ಚು ಅವಲಂಬಿತ ಆಗಿರುವ ಸಾಧ್ಯತೆ ಹೆಚ್ಚಿದ್ದು, ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ,ಮುನಿರತ್ನ ಮತ್ತು ಬೈರತಿ ಬಸವರಾಜ್ ಅಥವಾ ಮಾಜಿ ಸಚಿವರಾದ ಸುರೇಶ್ ಕುಮಾರ್ ಮತ್ತು ಸುನೀಲ್ ಕುಮಾರ್ ತಮ್ಮ ವಾಕ್ಚಾತುರ್ಯವನ್ನು ತೋರಿಸುವ ಸಾಧ್ಯತೆ ಹೆಚ್ಚಿದೆ..




