ಎರಡನೇ ಡೋಸ್ ಲಸಿಕೆ ನೀಡುವಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದೆ.

ಬೆಂಗಳೂರು: “ಕರ್ನಾಟಕ ರಾಜ್ಯದಲ್ಲಿ ಮಂಗಳವಾರದವರೆಗೆ ಶೇ.60ರಷ್ಟು ಜನರಿಗೆ ಕೋವಿಡ್ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ,” ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಶೇ.60ರಷ್ಟು ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದ್ದು, ಈ ಮೈಲಿಗಲ್ಲು ಸಾಧಿಸಿದ ದೇಶದ ನಾಲ್ಕನೇ ಪ್ರಮುಖ ರಾಜ್ಯ ಕರ್ನಾಟಕವಾಗಿದೆ.

ಇದನ್ನು ಸಾಧ್ಯವಾಗಿಸಿದ ಎಲ್ಲಾ ಆರೋಗ್ಯ ಕಾರ್ಯಕರ್ತರು ಮತ್ತು ಜಿಲ್ಲಾಡಳಿತಗಳಿಗೆ ಸಚಿವ ಡಾ.ಕೆ. ಸುಧಾಕರ್ ಅಭಿನಂದನೆ ಸಲ್ಲಿಸಿದ್ದಾರೆ.

“ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸರ್ಕಾರವೊಂದರಿಂದಲೇ ಸಾಧ್ಯವಾಗುವುದಿಲ್ಲ. ಜನರು ಸಹ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು,” ಎಂದು ಹೇಳಿದ್ದಾರೆ.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಿರ್ದೇಶನದಂತೆ ಇಂದಿನಿಂದ ವಿಮಾನ ನಿಲ್ದಾಣಗಳಲ್ಲಿ ವಿದೇಶಿ ಪ್ರಯಾಣಿಕರಿಗೆ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಟೆಸ್ಟ್ ಮಾಡಲು ಪ್ರಾರಂಭ ಮಾಡಿದ್ದೇವೆ. ಈ ಕುರಿತ ಸಿದ್ಧತೆಗಳನ್ನು ನಾನೇ ಖುದ್ದಾಗಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ,” ಎಂದರು.

“ವಿಮಾನ ನಿಲ್ದಾಣದಲ್ಲಿ ಕೊರೊನಾ ಟೆಸ್ಟ್ ಆದ ಬಳಿಕ ವರದಿ ಬರುವವರೆಗೂ ಪ್ರಯಾಣಿಕರು ಅಲ್ಲಿಯೇ ಇರಬೇಕಾಗುತ್ತದೆ. ಡಿಸೆಂಬರ್ 2ರಂದು ಸಿಎಂ ಬಸವರಾಜ ಬೊಮ್ಮಾಯಿಯವರು ದೆಹಲಿಯಲ್ಲಿ ಆರೋಗ್ಯ ಸಚಿವರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಜೊತೆಗೆ ಕೊರೊನಾ ವಾರಿಯರ್ಸ್‍ಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಚರ್ಚೆ ಮಾಡುತ್ತಾರೆ,” ಎಂದು ತಿಳಿಸಿದ್ದಾರೆ.

About The Author