ಕೋಲಾರ 108 ಸೇವೆ ಅಯೋಮಯ! ತುರ್ತು ಸೇವೆಯಲ್ಲಿ ಜನರಿಗೆ ನೆರವಾಗುತ್ತಿದ್ದ, ಆರೋಗ್ಯ ಸೇವೆಯ ಪ್ರಮುಖ ಭಾಗವಾಗಿರುವ ‘ಆರೋಗ್ಯ ಕವಚ’ ವ್ಯವಸ್ಥೆ ಕೋಲಾರ ಜಿಲ್ಲೆಯಲ್ಲಿ ಗಂಭೀರ ಸ್ಥಿತಿಗೆ ತಲುಪಿದೆ. ಆಂಬ್ಯುಲೆನ್ಸ್ಗಳಿಗೆ ತುರ್ತು ಪರಿಸ್ಥಿತಿ ಬಂದಿದೆ. ಕೆಟ್ಟು ನಿಂತ ಆಂಬ್ಯುಲೆನ್ಸ್ಗಳು ಹಾಗೂ ಸಿಬ್ಬಂದಿ ಕೊರತೆಯಿಂದ ರೋಗಿಗಳು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ.
ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ ಕಾರಿಡಾರ್ ನಿರ್ಮಾಣದ ಬಳಿಕ ಜಿಲ್ಲೆಯಲ್ಲಿ ಅಪಘಾತಗಳ ಪ್ರಮಾಣ ಹೆಚ್ಚಾಗಿದೆ. ಎಂದು ಸ್ಥಳೀಯರು ತಿಳಿಸಿದ್ದಾರೆ. ಆದರೆ, ಅಪಘಾತ ಸಂಭವಿಸಿದ ಸಂದರ್ಭಗಳಲ್ಲಿ 108 ಆಂಬ್ಯುಲೆನ್ಸ್ಗಳು ಸಮಯಕ್ಕೆ ಸರಿಯಾಗಿ ಲಭ್ಯವಾಗದ ಕಾರಣ ಗಾಯಾಳುಗಳನ್ನು ಖಾಸಗಿ ವಾಹನಗಳಲ್ಲಿ ಆಸ್ಪತ್ರೆಗೆ ಸಾಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವು ಸಂದರ್ಭಗಳಲ್ಲಿ ತುರ್ತು ಚಿಕಿತ್ಸೆ ವಿಳಂಬವಾದ ಹಿನ್ನೆಲೆಯಲ್ಲಿ ಗಾಯಾಳುಗಳು ಪ್ರಾಣ ಕಳೆದುಕೊಂಡಿರುವ ಘಟನೆಗಳೂ ವರದಿಯಾಗಿವೆ. ಇದರಿಂದ ತುರ್ತು ಆರೋಗ್ಯ ಸೇವೆಯ ಕಾರ್ಯಕ್ಷಮತೆ ಕುರಿತು ಪ್ರಶ್ನೆಗಳು ಎದ್ದಿವೆ.
ಜಿಲ್ಲೆಯಲ್ಲಿ ನಿಯೋಜಿತ 108 ಆಂಬ್ಯುಲೆನ್ಸ್ಗಳಲ್ಲಿ ಹಲವು ವಾಹನಗಳು ಕೆಟ್ಟು ನಿಂತಿದ್ದು, ಅವುಗಳನ್ನು ದುರಸ್ತಿ ಮಾಡದೆ ಬಾಕಿ ಇಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ, ಕಾರ್ಯನಿರ್ವಹಿಸುತ್ತಿರುವ ಆಂಬ್ಯುಲೆನ್ಸ್ಗಳಿಗೆ ಅಗತ್ಯ ಸಿಬ್ಬಂದಿಯ ಕೊರತೆ ಇದೆ. ಇಲ್ಲಿನ ಪರಿಸ್ಥಿತಿ ಮತ್ತಷ್ಟು ಗಂಭೀರಗೊಂಡಿದೆ.
ಆಂಬ್ಯುಲೆನ್ಸ್ ನಿರ್ವಹಣೆಗೆ ನಿಯೋಜಿತ ಏಜೆನ್ಸಿಗಳ ನಿರ್ಲಕ್ಷ್ಯವೇ ಈ ಪರಿಸ್ಥಿತಿಗೆ ಕಾರಣವಾಗಿದೆ. ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ತುರ್ತು ಸಂದರ್ಭಗಳಲ್ಲಿ ಜೀವ ರಕ್ಷಕವಾಗಬೇಕಾದ ಆರೋಗ್ಯ ಸೇವೆಯೇ ಅಸ್ತವ್ಯಸ್ತಗೊಂಡಿರುವುದಾಗಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.




