ಬೆಂಗಳೂರು : ರಾಜ್ಯದಲ್ಲಿ ಹಲವಾರು ವಿಷಯಗಳು ಚರ್ಚೆಗೆ ಬಂದಿವೆ. ಸಾರ್ವಜನಿಕ ವಲಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲರೂ ಕೂಡ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಕೋಮುವಾದ ಜಾಗತಿಕ ಸಂಘರ್ಷವಾಗುತ್ತಿದೆ ಎಂದು ರಾಜ್ಯದ ಬೆಳವಣಿಗೆಗಳ ಬಗ್ಗೆ ಕಿರಣ ಮಜುಂದಾರ್ ಷಾ ಅವರು ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಸಮವಸ್ತ್ರದ ವಿಷಯ ಈಗಾಗಲೇ ಇತ್ಯರ್ಥವಾಗಿದೆ. ಬೇರೆ ಬೇರೆ ವಿಷಯಗಳ ಬಗ್ಗೆ ತಮ್ಮ ತಮ್ಮ ನಂಬಿಕೆಗಳ ಆಧಾರದ ಮೇಲೆ ಇಷ್ಟು ವರ್ಷ ನಾವೆಲ್ಲರೂ ಬದುಕು ನಡೆಸುತ್ತಿದ್ದೇವೆ ಎಂದರು.
ಕರ್ನಾಟಕ ರಾಜ್ಯ ಶಾಂತಿಗೆ ಮತ್ತು ಪ್ರಗತಿಗೆ ಹೆಸರಾಗಿದೆ. ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲರೂ ಸಂಯಮವನ್ನು ತಾಳಬೇಕು. ಸಾಮಾಜಿಕವಾಗಿ ಹಲವಾರು ಸಮಸ್ಯೆಗಳು ಉದ್ಭವವಾಗುವ ಸಂದರ್ಭದಲ್ಲಿ ಕೂತು ಚರ್ಚೆ ಮಾಡಿ ಬಗೆಹರಿಸಲು ಸಾಧ್ಯವಿದೆ. ಆದ್ದರಿಂದ ಎಲ್ಲರೂ ಸಂಯಮದಿಂದ ವರ್ತಿಸಬೇಕು ಎಂದರು.




